Suddibindu.in
ಬೆಂಗಳೂರು: ಮೂತ್ರಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ವಿ ಶ್ರೀನಿವಾಸ ಪ್ರಸಾದ್ ಅವರು ರಾತ್ರಿ 1.20ಕ್ಕೆ ಮಣಿಪಾಲ ಆಸ್ಪತ್ರೆಯಲ್ಲಿ ವೈಫಲ್ಯದಿಂದ ನಿಧನರಾದರು
ನಿಧನರಾಗಿರುವ ಶ್ರೀನಿವಾಸ್ ಪ್ರಸಾದ್ ಅವರಿಗೆ 77ನೇ ವಯಸ್ಸಾಗಿತ್ತು. ಐದು ದಶಕಗಳ ಸುದೀರ್ಘ ಅವಧಿಯಲ್ಲಿ ರಾಜಕಾರಣ ನಡೆಸಿದ ವಿ.ಶ್ರೀನಿವಾಸ ಪ್ರಸಾದ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅನುಯಾಯಿಯಾಗಿದ್ದರು. ದಲಿತ, ದಮನಿತ ಸಮುದಾಯಗಳ ಪರವಾಗಿ ಅಪಾರವಾದ ಕಾಳಜಿ ಹೊಂದಿದ್ದರು. ವೆಂಕಟಯ್ಯ ಶ್ರೀನಿವಾಸ್ ಪ್ರಸಾದ್ ಆರು ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಒಮ್ಮೆ ಶಾಸಕರಾಗಿಯೂ ಆಯ್ಕೆಯಾಗಿದ್ದರು.
ಇದನ್ನೂ ಓದಿ
- ಕ್ಷುಲ್ಲಕ ಕಾರಣಕ್ಕೆ ಮಹಿಳೆ ಮೇಲೆ ಹಲ್ಲೆ : ಪತಿ,ಮೈದುನರ ವಿರುದ್ಧ ಎಫ್ ಐಆರ್
- ಕಡಜದ ಹುಳುಗಳ ದಾಳಿಗೆ 8 ವರ್ಷದ ಬಾಲಕ ಸಾವು : ತಂದೆಗೆ ಗಂಭೀರ ಗಾಯ
- ರೂಪಾಲಿ ನಾಯ್ಕ್ ನೇತೃತ್ವದಲ್ಲಿ ಕಾರವಾರದಲ್ಲಿ ‘ಹರ್ ಘರ್ ತಿರಂಗಾ’ ಮಹಾ ಅಭಿಯಾನ
ಮೂಲತಃ ಕಾಂಗ್ರೆಸ್ ನಿಂದ ತಮ್ಮ ರಾಜಕೀಯ ಜೀವನ ಆರಂಭಿಸಿದ್ದರು. ನಂತರ ಜನತಾದಳ (ಸಂಯುಕ್ತ) ಪಕ್ಷವನ್ನು ಸೇರ್ಪಡೆಯಾದರು. ನಂತರ ಕಾಂಗ್ರೆಸ್ ಪಕ್ಷಕ್ಕೆ ಮರಳಿ 2013ರಲ್ಲಿ ನಂಜನಗೂಡಿನಿಂದ ಶಾಸಕರಾಗಿ ಆಯ್ಕೆಯಾಗಿದ್ದರು, ನಂತರ ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರ್ಪಡೆಯಾಗಿದ್ದರು.
2013ರಿಂದ 2016ರವರೆಗೆ ಸಿದ್ಧರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಶ್ರೀನಿವಾಸ ಪ್ರಸಾದ್ ಕಂದಾಯ ಮತ್ತು ಮುಜರಾಯಿ ಇಲಾಖೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ ಡಿಎ ಸರ್ಕಾರದಲ್ಲಿ, 1999ರಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸಿದ್ದರು. ತಮ್ಮ ಬದುಕಿನ ಬಹುಕಾಲ ಜಾತ್ಯತೀತ ತತ್ತ್ವಗಳಿಗೆ ಬದ್ಧರಾಗಿ ಜೀವನ ನಡೆಸಿದ್ದ ಶ್ರೀನಿವಾಸ ಪ್ರಸಾದ್ ಅವರ ಅಗಲಿಕೆ ನಾಡಿನ ತಳಸಮುದಾಯಗಳ ಧ್ವನಿಯೊಂದು ಕಳೆದುಹೋದಂತಾಗಿದೆ.




