ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ರಾಜ್ಯದಲ್ಲಿ ಅಬಕಾರಿ ಇಲಾಖೆ ಕಳೆದ ಮೂರು ವರ್ಷಗಳಿಂದ ವರ್ಗಾವಣೆ ದಂಧೆ, ‘ಹಫ್ತಾ’ ವಸೂಲಿ, ಕಿಕ್ಬ್ಯಾಕ್, ಹೊಸ ಲೈಸೆನ್ಸ್ ಮಂಜೂರಾತಿಗೆ ಲಂಚಗುಳಿತನ ಹಾಗೂ ಮಧ್ಯವರ್ತಿಗಳ ಹಾವಳಿಯಿಂದ ಸಂಪೂರ್ಣವಾಗಿ ಭ್ರಷ್ಟಾಚಾರದ ಸಂಕೋಲೆಯಲ್ಲಿ ಸಿಲುಕಿದೆ. ಈ ಗಂಭೀರ ಆರೋಪಗಳ ನಡುವೆಯೂ ಸಂಬಂಧಿಸಿದ ಸಚಿವರ ಮೇಲೆ ಯಾವುದೇ ಕ್ರಮ ಕೈಗೊಳ್ಳದೇ ರಾಜ್ಯ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಕಾರವಾರ–ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ತೀವ್ರ ಆರೋಪ ಮಾಡಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ‘ಹಫ್ತಾ’ ವಸೂಲಿ ಸಂಬಂಧದ ಆಡಿಯೋ ಪ್ರಕರಣಗಳಲ್ಲಿ ಸಚಿವ ಆರ್.ಬಿ. ತಿಮ್ಮಾಪುರ ಹಾಗೂ ಸಚಿವರ ಪುತ್ರನ ಹೆಸರು ಪದೇಪದೇ ಕೇಳಿಬರುತ್ತಿದ್ದು, ಇದು ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದ್ಯದ ಅಂಗಡಿ ತೆರೆಯಲು ಕೆಳಹಂತದ ಅಧಿಕಾರಿಗಳಿಂದ ಹಿಡಿದು ಉನ್ನತ ಅಧಿಕಾರಿಗಳ ತನಕ ಲಕ್ಷಾಂತರ ರೂಪಾಯಿ ಲಂಚ ನೀಡಬೇಕಾದ ಅನಿವಾರ್ಯತೆ ಇದೆ. ಪ್ರತಿ ಅಂಗಡಿಯಿಂದ ತಿಂಗಳಿಗೆ ಸರಾಸರಿ 15ರಿಂದ 20 ಸಾವಿರ ರೂಪಾಯಿ ವಸೂಲಿ ನಡೆಯುತ್ತಿದ್ದು, ಪ್ರತಿ ಜಿಲ್ಲೆಯಲ್ಲಿ ಅಧಿಕಾರಿಗಳೇ ಹಣ ‘ಫಿಕ್ಸ್’ ಮಾಡಿ ದಂಧೆ ನಡೆಸುತ್ತಿದ್ದಾರೆ ಎಂದು ರೂಪಾಲಿ ಎಸ್. ನಾಯ್ಕ ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿರುವ ಅಬಕಾರಿ ಸಚಿವರ ಕಚೇರಿಯಲ್ಲೇ ವರ್ಗಾವಣೆ ದಂಧೆ ನಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಸಚಿವರು, ಸಚಿವರ ಪುತ್ರ, ಆಪ್ತ ಕಾರ್ಯದರ್ಶಿ ಹಾಗೂ ಸಹಾಯಕರ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿತ್ತು. ಜೊತೆಗೆ ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಕೂಡ ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಅಬಕಾರಿ ಸಚಿವರನ್ನು ಬದಲಾಯಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿತ್ತು.
ಕಳೆದ ವರ್ಷ ಏಪ್ರಿಲ್ನಲ್ಲಿ ಅಬಕಾರಿ ಇಲಾಖೆಯ ಜಂಟಿ ಆಯುಕ್ತ (ಐಎಂಎಲ್) ನಡೆಸಿದ ದೂರವಾಣಿ ಸಂಭಾಷಣೆಯ ಆಡಿಯೋದಲ್ಲಿ ಸಿಎಲ್–7 ಲೈಸೆನ್ಸ್ ಮಂಜೂರಾತಿಗೆ 18 ಲಕ್ಷ ರೂಪಾಯಿ ಲಂಚದ ಪ್ರಸ್ತಾಪವಾಗಿರುವುದು ಬಹಿರಂಗವಾಗಿತ್ತು.
ಈ ಆಡಿಯೋದಲ್ಲಿ ಅಬಕಾರಿ ಸಚಿವರು ಹಾಗೂ ಅವರ ಪುತ್ರರಿಂದ ಕರೆ ಮಾಡಿಸಬೇಕೆಂದು ಅಧಿಕಾರಿ ಮಾತನಾಡಿರುವುದು ಕಂಡುಬಂದಿದೆ. ಅಲ್ಲದೆ, 2024ರ ನವೆಂಬರ್ 10ರಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಕರ್ನಾಟಕದಲ್ಲಿ ಮದ್ಯ ವರ್ತಕರಿಂದ ಹಣ ವಸೂಲಿ ನಡೆಯುತ್ತಿರುವುದನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಇಷ್ಟೆಲ್ಲಾ ಗಂಭೀರ ಆರೋಪಗಳು ಮತ್ತು ಸಾಕ್ಷ್ಯಗಳು ಬೆಳಕಿಗೆ ಬಂದರೂ ರಾಜ್ಯ ಸರ್ಕಾರ ಯಾವುದೇ ತನಿಖೆ ನಡೆಸದೇ ಮೌನ ವಹಿಸಿರುವುದು ಅನುಮಾನಕ್ಕೆ ಕಾರಣವಾಗಿದೆ. ಅಬಕಾರಿ ಇಲಾಖೆಯ ಭ್ರಷ್ಟಾಚಾರಕ್ಕೆ ಕಾರಣರಾದ ಸಚಿವರು ಹಾಗೂ ಅಧಿಕಾರಿಗಳ ಮೇಲೆ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರೂಪಾಲಿ ಎಸ್. ನಾಯ್ಕ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಇದನ್ನೂ ಓದಿ/ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಆರೋಪ: ನಾಗರಾಜ ನಾಯಕ ಬಂಧನ




