ಸುದ್ದಿಬಿಂದು ಬ್ಯೂರೋ ವರದಿ
ಸಿದ್ದಾಪುರ: ತಾಲೂಕಿನ ಅವರಗುಪ್ಪಾ ಗ್ರಾಮದಲ್ಲಿ ನಡೆದ ವಸಂತ್ ನಾಯ್ಕ್ ಕೊಲೆ ಪ್ರಕರಣ ಇದೀಗ ಮತ್ತೊಂದು ಗಂಭೀರ ತಿರುವು ಪಡೆದಿದೆ. ಜ್ಯೋತಿಷಿ ಕಮಲಾಕರ ಭಟ್ ಹಾಗೂ ಸುಚಿತ್ರ ಗ್ಯಾಂಗ್ ವಿರುದ್ಧದ ಕೊಲೆ ಆರೋಪದ ಜೊತೆಗೆ, ಪ್ರಕರಣದ ಪ್ರಾಥಮಿಕ ತನಿಖೆಯಲ್ಲಿ ಸಿದ್ದಾಪುರ ಪೊಲೀಸರ ವೈಫಲ್ಯ ಮತ್ತು ನಿರ್ಲಕ್ಷ್ಯ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.

ಸ್ಥಳೀಯರು ಕೂಡಾ ಸಿದ್ದಾಪುರ ಪೊಲೀಸ್ ಠಾಣೆಯ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಆರೋಪಗಳನ್ನು ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ದೀಪನ್ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ. ಇದರ ಬೆನ್ನಲ್ಲೇ ಸಿದ್ದಾಪುರ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ತಾತ್ಕಾಲಿಕವಾಗಿ ವರ್ಗಾವಣೆ ಮಾಡುವ ಆದೇಶ ಹೊರಡಿಸಲಾಗಿದೆ.

ತನಿಖೆ ಪೂರ್ಣಗೊಳ್ಳುವವರೆಗೂ ಒಬ್ಬ ಕಾನ್ಸ್ಟೆಬಲ್ ಹಾಗೂ ಒಬ್ಬ ಎಎಸ್ಐಯನ್ನು ಹಳಿಯಾಳ ಉಪವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಪ್ರಕರಣದ ತನಿಖೆಗೆ ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ ಅವರ ನೇತೃತ್ವದಲ್ಲಿ ವಿಶೇಷ ತನಿಖೆ ನಡೆಸಲು ಆದೇಶಿಸಲಾಗಿದೆ.ತನಿಖೆಯ ವೇಳೆ ಯಾವುದೇ ರೀತಿಯ ಲೋಪ, ನಿರ್ಲಕ್ಷ್ಯ ಅಥವಾ ಕರ್ತವ್ಯದಲ್ಲಿ ತಪ್ಪು ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ದೀಪನ್ ಸ್ಪಷ್ಟಪಡಿಸಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣೆಯ ಮೇಲೆ ನಡೆಯುತ್ತಿರುವ ಈ ತನಿಖೆ ಪ್ರಕರಣಕ್ಕೆ ಹೊಸ ಆಯಾಮ ನೀಡಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಹತ್ವದ ವಿಚಾರಗಳು ಬಹಿರಂಗವಾಗುವ ಸಾಧ್ಯತೆ ಇದೆ

ಇದನ್ನೂ ಓದಿ/ಚಿನ್ನ -ಬೆಳ್ಳಿ ದರದಲ್ಲಿ ಭಾರಿ ಕುಸಿತ