ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಭಾರತೀಯ ಹವಾಮಾನ ಇಲಾಖೆ ನೀಡಿರುವ ಹವಾಮಾನ ಮುನ್ಸೂಚನೆಯ ಪ್ರಕಾರ ಫೆಬ್ರವರಿ 17ರಿಂದ 18ರವರೆಗೆ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶವು 34 ಡಿಗ್ರಿ ಸೆಲ್ಸಿಯಸ್ನಿಂದ 38.9 ಡಿಗ್ರಿ ಸೆಲ್ಸಿಯಸ್ವರೆಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀ ಪ್ರೀಯಾ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಾಮಾನ್ಯ ಉಷ್ಣತೆಯಿಗಿಂತ ಸುಮಾರು 3 ರಿಂದ 4 ಡಿಗ್ರಿ ಸೆಲ್ಸಿಯಸ್ ಹೆಚ್ಚುವರಿ ಬಿಸಿಲನ್ನು ಅನುಭವಿಸುವ ಸಾಧ್ಯತೆ ಇದ್ದು, ಇದು ದೇಹದ ಉಷ್ಣ ನಿಯಂತ್ರಣ ವ್ಯವಸ್ಥೆಗೆ ಒತ್ತಡ ಉಂಟುಮಾಡಿ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ.
ಹೆಚ್ಚಿದ ಬಿಸಿಲಿನ ಪರಿಣಾಮವಾಗಿ ದೇಹದಲ್ಲಿ ನೀರಿನ ಕೊರತೆ (ಡಿಹೈಡ್ರೇಶನ್), ತಲೆಸುತ್ತು, ದೌರ್ಬಲ್ಯ, ಅತಿಯಾದ ದಣಿವು, ತಲೆನೋವು, ಚರ್ಮದ ಒಣತನ ಹಾಗೂ ಉಷ್ಣಾಘಾತ (ಹೀಟ್ ಸ್ಟ್ರೋಕ್) ಸೇರಿದಂತೆ ಉಷ್ಣತೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಉತ್ತರ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಉಷ್ಣಾಂಶದ ದುಷ್ಪರಿಣಾಮಗಳನ್ನು ತಗ್ಗಿಸುವ ಉದ್ದೇಶದಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದೆ.
ಇದನ್ನೂ ಓದಿ/Big Boss/ಮುರುಡೇಶ್ವರ ಶಿವರಾತ್ರಿ ಜಾಗರಣೋತ್ಸವದಲ್ಲಿ ಹಾಡಿನ ಸಾಲು ತಪ್ಪಿದ ರಕ್ಷಿತಾ ಶೆಟ್ಟಿ


