ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ:ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಸಮೀಪಿಸುತ್ತಿದ್ದರೂ ಉತ್ತರ ಕನ್ನಡ ಜಿಲ್ಲೆಗೆ, ವಿಶೇಷವಾಗಿ ಕಾರವಾರ–ಅಂಕೋಲಾ ವಿಧಾನಸಭಾ ಕ್ಷೇತ್ರಕ್ಕೆ ಯಾವುದೇ ಗಣನೀಯ ಅಭಿವೃದ್ಧಿ ಕೊಡುಗೆ ನೀಡಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಕಾರವಾರ–ಅಂಕೋಲಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಟೀಕಿಸಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾದ ಕಾಮಗಾರಿಗಳನ್ನು ಉದ್ಘಾಟಿಸುವುದನ್ನೇ ಕಾಂಗ್ರೆಸ್ ಸರ್ಕಾರ ತನ್ನ ಸಾಧನೆಯಾಗಿ ಹೇಳಿಕೊಳ್ಳುತ್ತಿದೆ. ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜಿಲ್ಲೆಗೆ ಆಗಮಿಸುವುದು ಸ್ವಾಗತಾರ್ಹವಾದರೂ, ಬರೀ ಉದ್ಘಾಟನೆಗಳಲ್ಲದೇ ಜಿಲ್ಲೆಗೂ ಕ್ಷೇತ್ರಕ್ಕೂ ನಿಜವಾದ ಅಭಿವೃದ್ಧಿಯ ಕೊಡುಗೆ ನೀಡಬೇಕೆಂದು ರೂಪಾಲಿ ಎಸ್. ನಾಯ್ಕ ಒತ್ತಾಯಿಸಿದ್ದಾರೆ.
“ಕಳೆದ ಮೂರು ವರ್ಷಗಳಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಕಾಂಗ್ರೆಸ್ ಸರ್ಕಾರ ನೀಡಿದ ವಿಶೇಷ ಕೊಡುಗೆ ಏನು? ಯಾವ ಹೊಸ ಯೋಜನೆ ಜಾರಿಗೆ ತಂದಿದ್ದೀರಿ ಎಂಬುದನ್ನು ಬಹಿರಂಗವಾಗಿ ತಿಳಿಸಬೇಕು” ಎಂದು ಅವರು ಪ್ರಶ್ನಿಸಿದ್ದಾರೆ.ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರಾಗಿದ್ದು, ಕಾರವಾರದ ಮೆಡಿಕಲ್ ಕಾಲೇಜಿನಲ್ಲಿ ಸೂಪರ್ ಸ್ಪೆಷಾಲಿಟಿ ಸೌಲಭ್ಯ ಕಲ್ಪಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಬಜೆಟ್ನಲ್ಲಿಯೂ ಈ ಬಗ್ಗೆ ಘೋಷಣೆ ನಡೆದಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಯೋಜನೆಗಳಿಗೆ ಆದ್ಯತೆ ನೀಡದೇ ಜಿಲ್ಲೆಯ ಜನತೆಯ ಆರೋಗ್ಯದೊಂದಿಗೆ ಚೆಲ್ಲಾಟವಾಡಿದೆ ಎಂದು ಆರೋಪಿಸಿದರು.
ಕಾರವಾರದ ಮೆಡಿಕಲ್ ಕಾಲೇಜಿನಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗೆ 160 ಕೋಟಿ ರೂ. ಅನುದಾನ ಮಂಜೂರಾಗಿ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದರೂ, ನ್ಯೂರೋ ಸರ್ಜನ್, ಕಾರ್ಡಿಯಾಲಾಜಿಸ್ಟ್ ಸೇರಿದಂತೆ ತಜ್ಞ ವೈದ್ಯರ ನೇಮಕಾತಿ ಹಾಗೂ ಎಂಆರ್ಐ ಯಂತ್ರ ಸ್ಥಾಪನೆ ಇನ್ನೂ ಆಗಿಲ್ಲ ಎಂದು ರೂಪಾಲಿ ಎಸ್. ನಾಯ್ಕ ಅಸಮಾಧಾನ ವ್ಯಕ್ತಪಡಿಸಿದರು.
“ಎಂಆರ್ಐ ಪರೀಕ್ಷೆಗೆ ಜನರು 200–250 ಕಿಲೋಮೀಟರ್ ದೂರದ ಆಸ್ಪತ್ರೆಗೆ ಹೋಗಬೇಕಾಗಿದೆ. ಟೆಂಡರ್ ಆಗಿದೆ ಎಂದು ಹೇಳುತ್ತಿದ್ದರೂ ಯಂತ್ರ ಅಳವಡಿಕೆ ವಿಳಂಬವಾಗುತ್ತಿದೆ. ಹೃದಯ ಹಾಗೂ ನರರೋಗ ತಜ್ಞರಿಲ್ಲದೆ ಕೇವಲ ಕಟ್ಟಡ ಉದ್ಘಾಟನೆ ಮಾಡುವುದು ಜನವಿರೋಧಿ ನೀತಿಯಾಗಿದೆ” ಎಂದು ಅವರು ಕಿಡಿಕಾರಿದರು.
ಐದು ಗ್ಯಾರಂಟಿಗಳನ್ನು ನೀಡಿರುವುದಾಗಿ ಹೆಮ್ಮೆಪಡುವ ಕಾಂಗ್ರೆಸ್ ಸರ್ಕಾರ ಉತ್ತರ ಕನ್ನಡ ಜಿಲ್ಲೆಯ ಜನರ ಆರೋಗ್ಯಕ್ಕೆ ಗ್ಯಾರಂಟಿ ನೀಡಲು ವಿಫಲವಾಗಿದೆ. ತುರ್ತು ಸಂದರ್ಭಗಳಲ್ಲಿ ಚಿಕಿತ್ಸೆ ದೊರೆಯದ ಪರಿಸ್ಥಿತಿ ಮುಂದುವರಿದರೂ ಸರ್ಕಾರ ಗಂಭೀರವಾಗಿ ಸ್ಪಂದಿಸದಿರುವುದು ಖಂಡನೀಯ ಎಂದು ಅವರು ಹೇಳಿದರು.
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕೇವಲ ಘೋಷಣೆಗೆ ಸೀಮಿತವಾಗದೇ, ಶೀಘ್ರದಲ್ಲಿ ಸಂಪೂರ್ಣ ಸೌಲಭ್ಯಗಳೊಂದಿಗೆ ಕಾರ್ಯಾರಂಭ ಮಾಡಬೇಕು. ಜೊತೆಗೆ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವ ವಿಶೇಷ ಯೋಜನೆಗಳನ್ನು ಜಾರಿಗೆ ತರಬೇಕೆಂದು ರೂಪಾಲಿ ಎಸ್. ನಾಯ್ಕ ಆಗ್ರಹಿಸಿದ್ದಾರೆ.
ಇದನ್ನೂ ಓದಿ/ನಕಲಿ ಪತ್ರಕರ್ತರ ಆಟ ಬಯಲು : ರಹಸ್ಯ ಕ್ಯಾಮರಾ ಅಳವಡಿಸಿ ಖಾಸಗಿ ವಿಡಿಯೋ ಸೆರೆ ಹಿಡಿದ ಮೂವರ ಬಂಧನ





