ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ–ಶಿರಸಿ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕಾಲಿಕ ಮಳೆಯ ಪರಿಣಾಮವಾಗಿ ರಸ್ತೆ ಸಂಪೂರ್ಣವಾಗಿ ಕೆಸರುಗದ್ದೆಯಂತಾಗಿ ಮಾರ್ಪಟ್ಟಿದ್ದು, ವಾಹನ ಸವಾರರು ಭಾರೀ ಸಂಕಷ್ಟ ಅನುಭವಿಸುವಂತಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದು, ನೆಟ್ಟಿಗರು ಕಿಡಿಕಾರುತ್ತಿದ್ದಾರೆ.

ಅವೈಜ್ಞಾನಿಕ ರೀತಿಯಲ್ಲಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿಯಿಂದಾಗಿ ರಸ್ತೆ ಮಧ್ಯೆಲ್ಲೆಲ್ಲೂ ಕೆಸರು, ಗುಂಡಿ ಹಾಗೂ ಜಾರಿ ಮಣ್ಣು ಕಾಣಿಸಿಕೊಂಡಿದ್ದು, ಸಂಚಾರವೇ ದುಸ್ಸಾಧ್ಯವಾಗಿದೆ.ಶಿರಸಿಯಲ್ಲಿ ನಡೆಯುತ್ತಿರುವ ವಾರ್ಷಿಕ ಜಾತ್ರೆಯ ಹಿನ್ನಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಾಹನಗಳು ಈ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದು, ಸಂಚಾರ ದಟ್ಟಣೆ ಹೆಚ್ಚಾಗಿದೆ. ಆದರೆ ರಸ್ತೆ ಪರಿಸ್ಥಿತಿ ಅತಿದಯನೀಯವಾಗಿರುವುದರಿಂದ ಹಲವು ವಾಹನಗಳು ಹೆದ್ದಾರಿಯ ಮಧ್ಯದಲ್ಲೇ ಸಿಲುಕಿಕೊಳ್ಳುತ್ತಿರುವ ದೃಶ್ಯಗಳು ಕಂಡುಬಂದಿವೆ. ಕೆಲವೆಡೆ ಕಾರು, ಲಾರಿ, ಬಸ್‌ಗಳು ಚಲಿಸಲು ಪರದಾಡುತ್ತಿದ್ದು, ವಾಹನ ಚಾಲಕರು ಜೀವ ಕೈಯಲ್ಲಿ ಹಿಡಿದು ಸಾಗಬೇಕಾದ ಪರಿಸ್ಥಿತಿ ಎದುರಾಗಿದೆ.

ವಿಶೇಷವಾಗಿ ಬೈಕ್ ಸವಾರರು ಅತೀ ಅಪಾಯಕರ ಸ್ಥಿತಿಯಲ್ಲಿ ಸಂಚರಿಸುತ್ತಿದ್ದು, ಸ್ವಲ್ಪ ಯಾಮಾರಿದ್ರೂ ಅಪಘಾತಕ್ಕೆ ಆಹ್ವಾನ ನೀಡುವಂತಾಗಿದೆ. ಕೆಸರಿನಲ್ಲಿ ಜಾರಿ ಬಿದ್ದು ಗಾಯಗೊಂಡ ಪ್ರಕರಣಗಳೂ ವರದಿಯಾಗಿವೆ. ಹೆದ್ದಾರಿಯಲ್ಲಿ ವಾಹನ ಓಡಿಸಲು ಪರದಾಡುತ್ತಿರುವ ಚಾಲಕರು ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅವೈಜ್ಞಾನಿಕ ಕಾಮಗಾರಿಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಂಕಷ್ಟಕ್ಕೆ ತಕ್ಷಣ ಪರಿಹಾರ ಕಲ್ಪಿಸಬೇಕು. ಮಳೆಗಾಲದಲ್ಲಿ ರಸ್ತೆ ಹಾಳಾಗದಂತೆ ವೈಜ್ಞಾನಿಕವಾಗಿ ಕಾಮಗಾರಿ ನಡೆಸಿ, ತಾತ್ಕಾಲಿಕವಾಗಿ  ಕೆಸರು ತೆರವು, ಗುಂಡಿ ಮುಚ್ಚುವ ಹಾಗೂ ಸರಿಯಾದ ಡ್ರೈನೇಜ್ ವ್ಯವಸ್ಥೆ ಕಲ್ಪಿಸುವಂತೆ ವಾಹನ ಸವಾರರು ಒತ್ತಾಯಿಸುತ್ತಿದ್ದಾರೆ. ಇಲ್ಲದಿದ್ದರೆ ಯಾವುದೇ ಕ್ಷಣದಲ್ಲಿ ದೊಡ್ಡ ಅವಘಡ ಸಂಭವಿಸುವ ಆತಂಕ ಮನೆಮಾಡಿದೆ.

ಇದನ್ನೂ ಓದಿ/ಶಿರಸಿ ಜಾತ್ರೆಯಲ್ಲಿ ಕಳ್ಳತನಕ್ಕೆ ಸ್ಕೆಚ್: ಮಾರಕಾಸ್ತ್ರಗಳೊಂದಿಗೆ ಹೊಂಚು ಹಾಕುತ್ತಿದ್ದ 8 ಅಂತರ್‌ರಾಜ್ಯ ದರೋಡೆಕೋರರ ಸೆರೆ