ಸುದ್ದಿಬಿಂದು ಬ್ಯೂರೋ ವರದಿ
ದಾಂಡೇಲಿ: ತಾಲ್ಲೂಕಿನ ಆಲೂರು ಗ್ರಾಮದಲ್ಲಿ ನಸುಕಿನ ವೇಳೆ ಕಾಡಾನೆ ದಾಳಿ ನಡೆಸಿದ್ದು, ದನದ ಕೊಟ್ಟಿಗೆ ನುಗ್ಗಿ ಧ್ಬಂಸಗೊಳಿಸಿದ್ದು, ದನಕರುಗಳಿಗೆ ಗಾಯವಾಗಿದ್ದು, ರೈತರಲ್ಲಿ ಭೀತಿ‌ ಉಂಟಾಗುವಂತೆ ಮಾಡಿದೆ.

ಆಲೂರು ಗ್ರಾಮದ ಪುಂಡಲೀಕ ಜಾಧವ ಅವರಿಗೆ ಸೇರಿದ ದನದ ಕೊಟ್ಟಿಗೆಗೆ ಕಾಡಾನೆ ನುಗ್ಗಿ ಕೊಟ್ಟಿಗೆಯನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿದೆ. ಈ ದಾಳಿಯಲ್ಲಿ ಕೊಟ್ಟಿಗೆಯಲ್ಲಿದ್ದ ಎಮ್ಮೆ ಹಾಗೂ ಕರುಗಳಿಗೆ ಗಾಯಗಳಾಗಿದ್ದು, ಅವುಗಳಿಗೆ ಚಿಕಿತ್ಸೆ ನೀಡಲಾಗಿದೆ.
ಕಾಡಾನೆ ದಾಳಿ ನಿರಂತರವಾಗಿ ನಡೆಯುತ್ತಿರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದ್ದು, ರಾತ್ರಿ ಸಮಯದಲ್ಲಿ ಮನೆಗಳಿಂದ ಹೊರಬರಲು ಸಹ ಭಯಪಡುವ ಸ್ಥಿತಿ ನಿರ್ಮಾಣವಾಗಿದೆ.

ದನ-ಕರುವಿನಂತಹ ಪಶುಗಳಿಗೆ ಅಪಾಯ ಹೆಚ್ಚುತ್ತಿರುವುದು ರೈತರ ಜೀವನೋಪಾಯಕ್ಕೂ ತೀವ್ರ ತೊಂದರೆ ಉಂಟಾಗುತ್ತಿದೆ.ಗ್ರಾಮದ ಸುತ್ತಮುತ್ತಲ ಪ್ರದೇಶದಲ್ಲಿ ಕಾಡಾನೆಗಳ ಓಡಾಟ ಹೆಚ್ಚಾಗಿರುವುದರಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಅನಾಹುತ ಸಂಭವಿಸುವ ಭೀತಿ ಎದುರಾಗಿದೆ.

ಇದರಿಂದಾಗಿ ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು ಕಾಡಾನೆಗಳನ್ನು ಅರಣ್ಯ ಪ್ರದೇಶಕ್ಕೆ ಮರಳಿಸುವಂತೆ ಹಾಗೂ ಗ್ರಾಮಕ್ಕೆ ರಕ್ಷಣಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ/ವೆಸ್ಟ್ ಇಂಡೀಸ್ ಮಣಿಸಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಭಾರತ : ಕರೀಬಿಯನ್ ಸಿಂಹಗಳಿಗೆ ಶಾಕ್