ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು : “ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ” ಎಂಬ ಘೋಷವಾಕ್ಯದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026–27ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದರು. ಈ ಬಜೆಟ್‌ನಲ್ಲಿ ಕೃಷಿ, ಶಿಕ್ಷಣ, ಆರೋಗ್ಯ, ನೀರಾವರಿ, ವಸತಿ, ಕೌಶಲ್ಯಾಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸರ್ಕಾರ ಮಹತ್ವದ ಘೋಷಣೆಗಳನ್ನು ಮಾಡಿದೆ. ಸಿದ್ದಿ ಬಜೆಟ್‌ಗೆ ಸಂಪೂರ್ಣ ಮಾಹಿತಿ ಇಲ್ಲಿದೆ..

“ಕೃಷಿ ಕ್ಷೇತ್ರದ ಅಭಿವೃದ್ಧಿ”
• ಉತ್ಪಾದನೋತ್ತರ ಕೃಷಿ ಚಟುವಟಿಕೆಗಳ ಬಲವರ್ಧನೆಯ ಮೂಲಕ ರೈತರ ಆದಾಯ ವೃದ್ಧಿಗಾಗಿ ರೂ.100 ಕೋಟಿ ವೆಚ್ಚದಲ್ಲಿ ಮುಂದಿನ 3 ವರ್ಷಗಳಲ್ಲಿ “ಮುಖ್ಯಮಂತ್ರಿ ಕೃಷಿ ವಿಸ್ತಾರ” ಯೋಜನೆಯ ಅನುಷ್ಠಾನ

• ಪರಿಸರ ಸ್ನೇಹಿ ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸಲು ಮುಂದಿನ 3 ವರ್ಷಗಳಲ್ಲಿ “ವಸುಧಾಮೃತ” ಕಾರ್ಯಕ್ರಮದ ಜಾರಿ

• ಬೆಳೆಗಳಿಗೆ ಕೀಟ ಹಾಗೂ ರೋಗಗಳಿಂದ ರಕ್ಷಣೆ, ಜೈವಿಕ ಕೀಟನಾಶಕಗಳ ಬಳಕೆ ಹಾಗೂ ಸುರಕ್ಷಿತ ನಿರ್ವಹಣಾ ಕ್ರಮಗಳ ಮಾಹಿತಿಯನ್ನು ರೈತರಿಗೆ ಸಕಾಲದಲ್ಲಿ ಒದಗಿಸಲು ಮುಂದಿನ 3 ವರ್ಷಗಳಲ್ಲಿ ಸಸ್ಯ ಸಂಜೀವಿನಿ ಯೋಜನೆ ಜಾರಿ

“ಶಿಕ್ಷಣ ಕ್ಷೇತ್ರಕ್ಕೆ ಪ್ರಾತಿನಿಧ್ಯ”
•ಮುಂದಿನ 3 ವರ್ಷಗಳಲ್ಲಿ ರೂ.3,900 ಕೋಟಿ ಅನುದಾನದಡಿ ʼಉತ್ತಮ ಕಲಿಕೆ ಉಜ್ವಲ ಭವಿಷ್ಯʼ ಎಂಬ ಘೋಷವಾಕ್ಯದೊಂದಿಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ಒಟ್ಟಾರೆ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್‌ ಶಾಲೆಗಳಾಗಿ ಉನ್ನತೀಕರಿಸಲಾಗುವುದು

• ಸರ್ಕಾರಿ, ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಕೊಠಡಿ ನಿರ್ಮಾಣ ಮತ್ತು ಕೊಠಡಿಗಳ ದುರಸ್ತಿ ಕಾಮಗಾರಿಗಳಿಗೆ ರೂ.565 ಕೋಟಿ, ಶೌಚಾಲಯ ನಿರ್ಮಾಣಕ್ಕಾಗಿ ರೂ.75 ಕೋಟಿ ಹಾಗೂ ಶಾಲೆಗಳಿಗೆ ಪೀಠೋಪಕರಣಗಳನ್ನು ಖರೀದಿಸಲು ರೂ.25 ಕೋಟಿ ಅನುದಾನ ಹಂಚಿಕೆ

• ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ 125 ಕೋಟಿ ರೂ.ಗಳ ಅನುದಾನ

ಶಿಕ್ಷಣ ಕ್ಷೇತ್ರಕ್ಕೆ ಪ್ರಾತಿನಿಧ್ಯ”
• 2026-27 ಸಾಲಿನಲ್ಲಿ ಶಾಲಾ – ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳ ಭರ್ತಿಗೆ ಕ್ರಮ

• ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 BRC ಕೇಂದ್ರಗಳಲ್ಲಿ ಪ್ರತಿ ಕೇಂದ್ರಕ್ಕೆ ಒಬ್ಬರು ಅರ್ಹ ಮಾನಸಿಕ ಆರೋಗ್ಯ ಸಲಹೆಗಾರರ ನೇಮಕ

• ವಿಜಯಪುರದ ಸೈನಿಕ ಶಾಲೆಯ ಹಾಸ್ಟೆಲ್ ಕಟ್ಟಡಗಳನ್ನು ಹಂತ ಹಂತವಾಗಿ ಪುನರ್ ನಿರ್ಮಿಸಲು ಪ್ರಸಕ್ತ ಸಾಲಿನಲ್ಲಿ ರೂ.10 ಕೋಟಿ ಅನುದಾನ

• ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡ ಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಗೆ ನಿಷೇಧ

“ತೋಟಗಾರಿಕೆ ಕ್ಷೇತ್ರದ ಅಭಿವೃದ್ಧಿ”
• ಉತ್ಕೃಷ್ಟ ಮೌಲ್ಯದ ತೋಟಗಳ ಅಭಿವೃದ್ಧಿ, ಕೊಯ್ಲೋತ್ತರ ಸೌಲಭ್ಯಗಳು ಹಾಗೂ ತೋಟಗಾರಿಕೆ ಆಧಾರಿತ ಕೈಗಾರಿಕೆಗಳು ಪಿಪಿಪಿ ಮಾದರಿಯಲ್ಲಿ ಸ್ಥಾಪನೆ

• ಅಡಿಕೆ ಬೆಳೆಯ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳ ಮತ್ತು ತೆಂಗು ಬೆಳೆಯ ಕಪ್ಪು ತಲೆ ಹುಳು ಹಾಗೂ ಬಿಳಿ ನೊಣಗಳ ನಿಯಂತ್ರಣಕ್ಕಾಗಿ ₹10 ಕೋಟಿ ವೆಚ್ಚದಲ್ಲಿ ಸಮುದಾಯ ಆಧಾರಿತ ರೋಗ – ಕೀಟ ನಿಯಂತ್ರಣ ಕ್ರಮಗಳ ಜಾರಿ

• ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆಗಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಮತ್ತು ವಿಜಯಪುರ ಜಿಲ್ಲೆಯ ತೊರವಿಯಲ್ಲಿ ರೂ.64 ಕೋಟಿ ವೆಚ್ಚದಲ್ಲಿ ಒಟ್ಟು 12,000 ಮೆಟ್ರಿಕ್‌ ಟನ್‌ ಸಾಮರ್ಥ್ಯದ ಎರಡು ಶೀತಲಗೃಹಗಳ ಸ್ಥಾಪನೆ

• ಹೆಚ್ಚಿನ ಪ್ರವಾಸಿಗರನ್ನು ಹಾಗೂ ಪರಿಸರ ಪ್ರೇಮಿಗಳನ್ನು ಆಕರ್ಷಿಸುವ ದೃಷ್ಟಿಯಿಂದ ಮೈಸೂರಿನ ಲಿಂಗಾಂಬುಧಿ ಸಸ್ಯ ತೋಟದ ಸಮಗ್ರ ಅಭಿವೃದ್ಧಿ

ರೇಷ್ಮೆ ವಲಯದ ಅಭಿವೃದ್ಧಿ”
• ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಉತ್ಪಾದಿಸುವ ರೇಷ್ಮೆಗೂಡನ್ನು ಸರ್ಕಾರದ ಯಾವುದೇ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಪ್ರತಿ ಕೆ.ಜಿ. ಗೂಡಿಗೆ ಇರುವ 10 ರೂ. ಸಾಗಾಣಿಕಾ ವೆಚ್ಚ 20 ರೂ.ಗೆ ಹೆಚ್ಚಳ

• ರಾಮನಗರ, ಶಿಡ್ಲಘಟ್ಟ, ಹಾವೇರಿ, ತಾಂಡವಪುರ (ಮೈಸೂರು) ಹಾಗೂ ಕಲಬುರಗಿಯಲ್ಲಿ ಸಿಲ್ಕ್‌ ಪಾರ್ಕ್‌ಗಳ ಸ್ಥಾಪನೆ

• ರೇಷ್ಮೆ ಇಲಾಖೆಯ ಆಯ್ದ ಕ್ಷೇತ್ರಗಳಲ್ಲಿ ಲಭ್ಯವಿರುವ ಜಮೀನಿನಲ್ಲಿ ರೈತ ಉದ್ಯಮಿ ಹಾಗೂ ರೈತ ಉತ್ಪಾದಕ ಸಂಸ್ಥೆಗಳ ಸಹಯೋಗದೊಂದಿಗೆ ಚಾಕಿ ಸಾಕಾಣಿಕೆ ಕೇಂದ್ರಗಳ ಸ್ಥಾಪನೆ.

“ಹೈನುಗಾರಿಕೆ ವಲಯದ ಅಭಿವೃದ್ಧಿ”
•  2026-27 ನೇ ಸಾಲಿನಲ್ಲಿ ನಬಾರ್ಡ್‌ ಸಹಯೋಗದೊಂದಿಗೆ 100 ಹೊಸ ಪಶು ವೈದ್ಯಕೀಯ ಕಟ್ಟಡಗಳ ನಿರ್ಮಾಣ

•  ರೂ.10 ಕೋಟಿ ವೆಚ್ಚದಲ್ಲಿ 15 ತಾಲೂಕು ಪಶು ಆಸ್ಪತ್ರೆಗಳು ಪಾಲಿಕ್ಲಿನಿಕ್‌ಗಳಾಗಿ ಮೇಲ್ದರ್ಜೆಗೆ

•  ಸ್ಥಳೀಯ ಮೇಕೆ ತಳಿಗಳ ಉನ್ನತೀಕರಣಕ್ಕಾಗಿ ಮೈಸೂರಿನಲ್ಲಿ ಬೋಯರ್‌ ಮೇಕೆ ತಳಿ ಸಂವರ್ಧನಾ ಕೇಂದ್ರವನ್ನು ಸ್ಥಾಪನೆ

•  ಜಾನುವಾರುಗಳ ಸಂತಾನೋತ್ಪತ್ತಿ ಸಮಸ್ಯೆಗಳನ್ನು ನಿವಾರಿಸಲು ʼವರ್ಷಕ್ಕೊಂದು ಕರುʼ ಎಂಬ ಘೋಷವಾಕ್ಯದೊಂದಿಗೆ ರೂ.5 ಕೋಟಿ ವೆಚ್ಚದಲ್ಲಿ ರಾಜ್ಯದ 1,000 ಗ್ರಾಮ ಪಂಚಾಯಿತಿಗಳಲ್ಲಿ ʼಫಲಧಾರೆʼ ಶಿಬಿರಗಳ ಆರಂಭ.

“ಮೀನುಗಾರಿಕೆ ವಲಯದ ಅಭಿವೃದ್ಧಿ”
• ಮೀನುಗಾರರಿಗೆ ಉಚಿತವಾಗಿ ನೀಡುವ ಮೀನುಗಾರಿಕೆ ಸಲಕರಣೆ ಕಿಟ್‌ ದರ 10,000 ರೂ.ಗಳಿಂದ 20,000 ರೂ.ಗಳಿಗೆ ಹೆಚ್ಚಳ

• ಜೈವಿಕ ತಂತ್ರಜ್ಞಾನದ ಉದ್ಯಮಗಳು, ನವೀನ ತಂತ್ರಜ್ಞಾನದ ಅಭಿವೃದ್ಧಿ ಮತ್ತು ಸಮುದ್ರ ಕೃಷಿಯನ್ನು ಪ್ರೋತ್ಸಾಹಿಸಲು ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಸೆಂಟರ್‌ ಆಫ್‌ ಎಕ್ಸಲೆನ್ಸ್ ಸ್ಥಾಪನೆ

• ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಮತ್ಸ್ಯದರ್ಶಿನಿಗಳ ಸ್ಥಾಪನೆ

• ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮೀನು ಮಾರುಕಟ್ಟೆಯನ್ನು ನಿರ್ಮಿಸಲಾಗುವುದು.

“ಸಹಕಾರಿ ವಲಯದ ಅಭಿವೃದ್ಧಿ”
• ಪ್ರಸಕ್ತ ಸಾಲಿನಲ್ಲಿ 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 30,000 ಕೋಟಿ ರೂ. ಕೃಷಿ ಸಾಲ ವಿತರಿಸುವ ಗುರಿ

• ಸಹಕಾರ ಸಂಘಗಳ ನಿಬಂಧಕರ ಹಂತದಲ್ಲಿ ವಿವಿಧ ಸೇವೆಗಳನ್ನು (ಕಾಯ್ದೆಗಳು) ಜನಸಾಮಾನ್ಯರಿಗೆ ಸುಲಭವಾಗಿ ಒದಗಿಸಲು ದತ್ತಾಂಶವನ್ನು ಆನ್‌ಲೈನ್‌ನಲ್ಲಿ ನಿರ್ವಹಿಸಲು ಕ್ರಮ

• ಪ್ರಸಕ್ತ ಸಾಲಿನಲ್ಲಿ ಮೈಸೂರು (ಬಂಬೂ ಬಜಾರ್‌) ಮತ್ತು ಹುಬ್ಬಳ್ಳಿ (ಕಾಟನ್‌ ಮಾರ್ಕೆಟ್‌) ಕೇಂದ್ರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ

• ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಕಾರ್ಯಚಟುವಟಿಕೆಗಳನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸಲು 10 ಕೋಟಿ ರೂ. ವೆಚ್ಚದಲ್ಲಿ ERP (Enterprise Resource Planning) ವ್ಯವಸ್ಥೆ ಜಾರಿ.

“ನೀರಾವರಿ ವಲಯದ ಅಭಿವೃದ್ಧಿ”
• ಮೇಕೆದಾಟು ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಯನ್ನು (DPR) ಶೀಘ್ರವೇ ಸಿದ್ಧಪಡಿಸಿ ಅನುಮೋದನೆಗೆ ಹಾಗೂ ಅರಣ್ಯ ಪ್ರದೇಶದ ಬಳಕೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದು

• ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ ಹಂತದಲ್ಲಿ ಬಾಕಿ ಇರುವ 18.73 ಕಿ.ಮೀ ಉದ್ದದ ಕಾಲುವೆ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು. ಹೆಚ್ಚುವರಿಯಾಗಿ ನೀರನ್ನು ಸಂಗ್ರಹಿಸಿ ಸದ್ಬಳಕೆ ಮಾಡಿಕೊಳ್ಳಲು ಕೊರಟಗೆರೆ ತಾಲೂಕಿನ ವಡೇರಹಳ್ಳಿ ಸಮೀಪ 1.2 ಟಿ.ಎಂ.ಸಿ. ಸಾಮರ್ಥ್ಯದ ಸಮತೋಲನಾ ಜಲಾಶಯವನ್ನು ನಿರ್ಮಿಸಲಾಗುವುದು.

“ನೀರಾವರಿ ವಲಯದ ಅಭಿವೃದ್ಧಿ”
• ಚಾಮರಾಜನಗರದ ಹನೂರು ತಾಲೂಕಿನಲ್ಲಿ ಅಂತರ್ಜಲ ವೃದ್ಧಿ ಹಾಗೂ 12 ಸಾವಿರ ಎಕರೆ ಬಾಧಿತ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಒದಗಿಸಲು ರೂ.490 ಕೋಟಿ ವೆಚ್ಚದಲ್ಲಿ ಉಡುತೊರೆಹಳ್ಳ ಯೋಜನೆ ಅನುಷ್ಠಾನ

• ವಿಜಯಪುರ ಜಿಲ್ಲೆಯ ಬಾಬಾ ನಗರದಲ್ಲಿ 0.67 ಟಿಎಂಸಿ ಸಾಮರ್ಥ್ಯದ ಸಂಗ್ರಹಣಾ ಜಲಾಶಯವನ್ನು ತುಬಚಿ – ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ನಿರ್ಮಿಸಲು ತಾತ್ವಿಕ ಅನುಮೋದನೆ

• ಕೃಷ್ಣಾ, ಕಾವೇರಿ, ಗೋದಾವರಿ ಹಾಗೂ ಇತರೆ ನದಿ ಕಣಿವೆಗಳಲ್ಲಿ ಒಟ್ಟಾರೆ ರೂ. 8,045 ಕೋಟಿ ಮೊತ್ತದ 75 ನೀರಾವರಿ ಕಾಮಗಾರಿಗಳ ಅನುಷ್ಠಾನ.

“ಸಣ್ಣ ನೀರಾವರಿ ಕ್ಷೇತ್ರಕ್ಕೆ ಆದ್ಯತೆ”
•  ರೂ.237 ಕೋಟಿ ಅಂದಾಜು ವೆಚ್ಚದಲ್ಲಿ ಹೆಬ್ಬಾಳ – ನಾಗವಾರ ಕಣಿವೆಯ ಮೂರನೇ ಹಂತದಲ್ಲಿ ಶಿಡ್ಲಘಟ್ಟದ ಅಮಾನಿ ಕೆರೆಯಿಂದ ಶಿಡ್ಲಘಟ್ಟ ತಾಲೂಕಿನ 45 ಕೆರೆಗಳಿಗೆ ಮತ್ತು ಚಿಂತಾಮಣಿ ತಾಲೂಕಿನ 119 ಕೆರೆಗಳೂ ಸೇರಿ ಒಟ್ಟಾರೆ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಅನುಷ್ಠಾನ

•  ರೂ.140 ಕೋಟಿ ಅಂದಾಜು ಮೊತ್ತದಲ್ಲಿ ಹೆಚ್‌.ಎನ್‌ ವ್ಯಾಲಿ ಯೋಜನೆಯಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಹೊಸಕೋಟೆ ತಾಲೂಕಿನ ಸೂಲಿಬೆಲೆ ಮತ್ತು ನಂದಗುಡಿ ಹೋಬಳಿಗಳ 59 ಕೆರೆಗಳಿಗೆ ಏತ ನೀರಾವರಿ ಮೂಲಕ ತುಂಬಿಸುವ ಕಾಮಗಾರಿಯ ಅನುಷ್ಠಾನ.

“ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಒತ್ತು”
• ರೂ.2,500 ಕೋಟಿ ವೆಚ್ಚದಲ್ಲಿ ‘ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆ’ ಅನುಷ್ಠಾನ. ಈ ಯೋಜನೆಯಡಿ 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು 11 ಪಾಲಿಟೆಕ್ನಿಕ್‌ಗಳು ಮಾದರಿ ಸಂಸ್ಥೆಗಳಾಗಿ ಅಭಿವೃದ್ಧಿ. ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಮತ್ತು ಸ್ಟಾರ್ಟ್-ಅಪ್‌ ಸಂಸ್ಕೃತಿಯ ಪ್ರೋತ್ಸಾಹಕ್ಕಾಗಿ 9 ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ

• ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 1,000 ಬೋಧಕ ಹುದ್ದೆಗಳನ್ನು ತರ್ಕಬದ್ಧಗೊಳಿಸಿ ಹಂತ ಹಂತವಾಗಿ ಭರ್ತಿ ಮಾಡಲು ಕ್ರಮ

• ರಾಜ್ಯದ 25 ಸರ್ಕಾರಿ ಪದವಿ ಕಾಲೇಜು, ಮೂರು ಪಾಲಿಟೆಕ್ನಿಕ್ ಹಾಗೂ ಮೂರು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಒಟ್ಟು ರೂ.31 ಕೋಟಿ ವೆಚ್ಚದಲ್ಲಿ ವಿದ್ಯಾರ್ಥಿನಿಯರಿಗೆ ಅವಶ್ಯವಿರುವ ಮೂಲ ಸೌಲಭ್ಯ ವ್ಯವಸ್ಥೆ ನಿರ್ಮಾಣ

• ವಿಜಯಪುರ ಜಿಲ್ಲೆಯ ಚಡಚಣ, ಬೆಳಗಾವಿ ಗ್ರಾಮಾಂತರ ಹಾಗೂ ಮೈಸೂರು ನಗರದ ನರಸಿಂಹರಾಜ ಕ್ಷೇತ್ರ ಹಾಗೂ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸ್ಥಾಪನೆಗೆ ಕ್ರಮ.

“ಆರೋಗ್ಯ ಕ್ಷೇತ್ರಕ್ಕೆ ಪ್ರಾಶಸ್ತ್ಯ”
• ರೂ.900 ಕೋಟಿ ಅನುದಾನದಡಿ ಆರೋಗ್ಯ ಇಲಾಖೆಯಲ್ಲಿನ ಮೂಲಸೌಕರ್ಯ ಅಭಿವೃದ್ಧಿ

• ರೂ. 45 ಕೋಟಿ ಅನುದಾನದಡಿ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಸಮಗ್ರ ಆಘಾತ ಆರೈಕೆ (Trauma Care) ಸೇವೆಗಳನ್ನು ಒದಗಿಸಲು ತುರ್ತು ಚಿಕಿತ್ಸಾ ವಿಭಾಗ, ಶಸ್ತ್ರಚಿಕಿತ್ಸಾ ಕೊಠಡಿ ಮತ್ತು ಐಸಿಯುಗಳಿಗೆ ವೈದ್ಯಕೀಯ ಉಪಕರಣಗಳು ಮತ್ತು ಸಾಧನಗಳನ್ನು ಹಂತ ಹಂತವಾಗಿ ಪೂರೈಸುವ ಮೂಲಕ ಮೇಲ್ದರ್ಜೆಗೆ

• ಟೈಪ್-1 ಮಧುಮೇಹದಿಂದ (Type-1 Diabetes) ಬಳಲುತ್ತಿರುವ 18 ವರ್ಷ ವಯಸ್ಸಿನವರೆಗಿನ ಮಕ್ಕಳ ಆರೋಗ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಉಚಿತ ಇನ್ಸುಲಿನ್ ಪೆನ್‌ಗಳನ್ನು ನೀಡಲಾಗುವುದು.

• ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆಗಳ ಭರ್ತಿ

“ವೈದ್ಯಕೀಯ ಶಿಕ್ಷಣಕ್ಕೆ ಮಹತ್ವ
• ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ ಕಾಮಗಾರಿಗಳಿಗೆ 620 ಕೋಟಿ ರೂ.ಗಳ ಅನುದಾನವನ್ನು ಮತ್ತು ಉಪಕರಣಗಳ ಖರೀದಿಗಾಗಿ 220 ಕೋಟಿ ರೂ.ಗಳ ಅನುದಾನ ಮೀಸಲು

• ರೂ.180 ಕೋಟಿ ವೆಚ್ಚದಲ್ಲಿ ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯನ್ನು 600 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯಾಗಿ ಮೇಲ್ದರ್ಜೆಗೆ

• ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಸೂಪ‌ರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸ್ಥಾಪನೆ

• ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ‘ಶಾಂತವೇರಿ ಗೋಪಾಲಗೌಡ ಆಸ್ಪತ್ರೆ’ ಎಂದು ಮರುನಾಮಕರಣ.

“ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ”
• ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 1,39,844 ಅಂಗನವಾಡಿ ಕಾರ್ಯಕರ್ತೆಯರು / ಸಹಾಯಕಿಯರಿಗೆ ಹೆಚ್ಚುವರಿ ಒಂದು ಜೊತೆ ಸಮವಸ್ತ್ರ ವಿತರಣೆ

• ಮಾಜಿ ದೇವದಾಸಿಯರು, ಲಿಂಗತ್ವ ಅಲ್ಪಸಂಖ್ಯಾತರು, ಚೇತನ ಹಾಗೂ ಧನಶ್ರೀ ಯೋಜನೆಯ ಫಲಾನುಭವಿಗಳಿಗೆ ಆದಾಯೋತ್ಪನ್ನ ಚಟುವಟಿಕೆಗಳಿಗಾಗಿ ನೀಡಲಾಗುವ ಪ್ರೋತ್ಸಾಹಧನ ರೂ.45,000ಕ್ಕೆ ಹೆಚ್ಚಳ

• ಮಾದಕ ವ್ಯಸನಕ್ಕೆ ಒಳಗಾದ 18 ವರ್ಷದೊಳಗಿನ ಮಕ್ಕಳಿಗಾಗಿ ಪ್ರಾಯೋಗಿಕವಾಗಿ ಬೆಂಗಳೂರಿನ ನಿಮ್ಹಾನ್ಸ್ ಹಾಗೂ ಧಾರವಾಡದ ಡಿಮ್ಹಾನ್ಸ್ ಸಂಸ್ಥೆಗಳ ಸಹಯೋಗದಲ್ಲಿ ‘ಮಾದಕ ವ್ಯಸನಿಗಳ ಪುನರ್ವಸತಿ ಕೇಂದ್ರʼಗಳ ಆರಂಭ

• ರೂ.200 ಕೋಟಿ ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಲಭ್ಯವಿರುವ 1,668 ನಿವೇಶನಗಳಲ್ಲಿ ನೂತನ ಅಂಗನವಾಡಿ ಕಟ್ಟಡಗಳ ನಿರ್ಮಾಣ.

“ಪರಿಶಿಷ್ಟ ಜಾತಿಗಳ ಕಲ್ಯಾಣ”
• ಪ್ರತಿ ಜಿಲ್ಲೆಗೆ 150 ಸಂಖ್ಯಾಬಲದ ಒಂದು ಬಾಲಕಿಯರ ಮತ್ತು ಒಂದು ಬಾಲಕರ ಒಟ್ಟು 62 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಸ್ಥಾಪನೆ

• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣಕ್ಕೆ ಅನುವು ಮಾಡಿಕೊಡಲು ಒಟ್ಟು 31 ವಸತಿ ಶಾಲೆಗಳನ್ನು ಉನ್ನತೀಕರಿಸಲಾಗುವುದು

• ವಸತಿ ಶಾಲೆಗಳಿಲ್ಲದ ಹೋಬಳಿಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಒಟ್ಟು 40 ಹೊಸ ವಸತಿ ಶಾಲೆಗಳ ಸ್ಥಾಪನೆ

• ಕ್ರೈಸ್ ವಸತಿ ಶಾಲೆಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ನೀಡಲು 50 ಕೋಟಿ ರೂ.ಗಳನ್ನು ಒದಗಿಸಲಾಗುವುದು.

“ಪರಿಶಿಷ್ಟ ಪಂಗಡಗಳ ಕಲ್ಯಾಣ”
• 150 ಸಂಖ್ಯಾಬಲದ 50 ಮೆಟ್ರಿಕ್ ನಂತರದ ಹೊಸ ವಿದ್ಯಾರ್ಥಿ ನಿಲಯಗಳ ಆರಂಭ

•ಪರಿಶಿಷ್ಟ ಪಂಗಡಗಳ ನಿರುದ್ಯೋಗಿ ಯುವಕ/ಯುವತಿಯರಿಗೆ ಫಾಸ್ಟ್ ಫುಡ್ ಟ್ರಕ್ ಟ್ರೈಲರ್ / ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್‌ (Kiosk) ಆರಂಭಿಸಲು ಘಟಕ ವೆಚ್ಚದ ಶೇ.75 ರಷ್ಟು ಅಥವಾ ಗರಿಷ್ಠ ನಾಲ್ಕು ಲಕ್ಷ ರೂ.ಗಳ ಸಹಾಯಧನ

• ಪರಿಶಿಷ್ಟ ಪಂಗಡದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ಆಶ್ರಮ ಶಾಲೆಗಳಲ್ಲಿನ ವಿದ್ಯಾರ್ಥಿಗಳ ಆರೈಕೆಗಾಗಿ 119 ಮಹಿಳಾ ಕೇರ್‌ಟೇಕ‌ರ್ ಹುದ್ದೆಗಳಿಗೆ ಮಂಜೂರಾತಿ

• ಪರಿಶಿಷ್ಟ ಪಂಗಡದ ಸಮುದಾಯದವರ ಹಕ್ಕುಗಳನ್ನು ಸಂರಕ್ಷಿಸಲು ಪ್ರತ್ಯೇಕ ಪರಿಶಿಷ್ಟ ಪಂಗಡಗಳ ಆಯೋಗ ಸ್ಥಾಪನೆ.

“ಹಿಂದುಳಿದ ವರ್ಗಗಳ ಕಲ್ಯಾಣ”
• ಬೆಂಗಳೂರು, ಮೈಸೂರು, ಮಂಗಳೂರು, ಧಾರವಾಡ, ಬೆಳಗಾವಿ, ಕಲಬುರಗಿ, ದಾವಣಗೆರೆ, ಶಿವಮೊಗ್ಗ ಹಾಗೂ ಬಳ್ಳಾರಿಯಲ್ಲಿ 150 ಸಂಖ್ಯಾಬಲದ 50 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಸ್ಥಾಪನೆ

• ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ 5 ಕೋಟಿ ರೂ. ಘಟಕ ವೆಚ್ಚದಲ್ಲಿ 50 ಸ್ವಂತ ಕಟ್ಟಡಗಳ ನಿರ್ಮಾಣ

• ಸವಿತಾ ಸಮಾಜದವರು ಸಲೂನ್‌ಗಳನ್ನು ತೆರೆಯಲು ಶೇ.4 ರಷ್ಟು ಬಡ್ಡಿದರದಲ್ಲಿ ರೂ.10 ಲಕ್ಷದ ವರೆಗೆ ಸಾಲ ಮತ್ತು ಸಹಾಯಧನ ಸೌಲಭ್ಯ

• ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಹಾಗೂ ದುರಸ್ತಿ ಕಾಮಗಾರಿಗಳಿಗೆ ರೂ.50 ಕೋಟಿ ಅನುದಾನ

“ಅಲ್ಪಸಂಖ್ಯಾತರ ಕಲ್ಯಾಣ”
• 150 ಸಂಖ್ಯಾಬಲದ 25 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಆರಂಭ ಹಾಗೂ ಹಾಲಿ ಕಾರ್ಯನಿರ್ವಹಿಸುತ್ತಿರುವ 25 ವಿದ್ಯಾರ್ಥಿನಿಲಯಗಳಲ್ಲಿ 50 ವಿದ್ಯಾರ್ಥಿಗಳ ಸಂಖ್ಯಾಬಲವನ್ನು ಹೆಚ್ಚಿಸಲಾಗುವುದು

• ಸಂತ ಶಿಶುನಾಳ ಶರೀಫರವರ ಹೆಸರಿನಲ್ಲಿ 10 ಹೊಸ ವಸತಿ ಶಾಲೆಗಳನ್ನು CBSE ಪಠ್ಯಕ್ರಮದಡಿಯಲ್ಲಿ ಪ್ರಾರಂಭಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ರೂ.10 ಕೋಟಿ ಅನುದಾನ

• 100 ಮೌಲಾನಾ ಆಜಾದ್ ಮಾದರಿ ಶಾಲೆಗಳು ಹಾಗೂ ಉರ್ದು ಶಾಲೆಗಳನ್ನು ರೂ.400 ಕೋಟಿ ವೆಚ್ಚದಲ್ಲಿ ಕೆ.ಪಿ.ಎಸ್‌. ಮಾದರಿ ಶಾಲೆಗಳಾಗಿ ಉನ್ನತೀಕರಣ

• ಜೈನ, ಬೌದ್ಧ ಮತ್ತು ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಹಾಗೂ ಬೌದ್ಧ ಧರ್ಮದ ಧಮ್ಮಾಚಾರಿಗಳಿಗೆ ರೂ.6,000 ಮಾಸಿಕ ಗೌರವಧನ ಸೌಲಭ್ಯ ನೀಡಲು ಕ್ರಮ

“ವಸತಿ ಯೋಜನೆಗಳಿಗೆ ಆದ್ಯತೆ”
• ಪ್ರಸಕ್ತ ಸಾಲಿನಲ್ಲಿ 3 ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದ್ದು, ಹಿಂದಿನ ಸರ್ಕಾರವು ಅನುದಾನ ನೀಡದೇ ಮಂಜೂರಾತಿ ನೀಡಿರುವ 4.90 ಲಕ್ಷ ಮನೆಗಳನ್ನು ಪೂರ್ಣಗೊಳಿಸಲು ಕ್ರಮ

• ‘ಕೆ.ಹೆಚ್.ಬಿ ಸೂರ್ಯ ಕ್ರೀಡಾ ಗ್ರಾಮ’ ಎಂಬ ಹೆಸರಿನಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನಲ್ಲಿ 80,000 ಆಸನ ಸಾಮರ್ಥ್ಯವುಳ್ಳ ಕ್ರಿಕೆಟ್ ಕ್ರೀಡಾಂಗಣ ಹಾಗೂ ಕ್ರೀಡಾಕೂಟಗಳನ್ನು ನಡೆಸಲು ಅನುಕೂಲವಾಗುವಂತೆ ಅಂತಾರಾಷ್ಟ್ರೀಯ ಕ್ರೀಡಾಂಗಣವನ್ನು ನಿರ್ಮಾಣ ಮಾಡಲಾಗುವುದು.

• ಕೆ.ಹೆಚ್.ಬಿ. ವತಿಯಿಂದ ನಮ್ಮ ಮನೆ ಯೋಜನೆಯಡಿಯಲ್ಲಿ ಮುಂದಿನ ಎರಡು ವರ್ಷಗಳಲ್ಲಿ 50 ಸಾವಿರ ನಿವೇಶನಗಳು ರಿಯಾಯತಿ ದರದಲ್ಲಿ ವಿತರಣೆ.

“ಆಹಾರ ಭದ್ರತೆಗೆ ಒತ್ತು”
• ಆಹಾರ ಧಾನ್ಯಗಳ ವಿತರಣೆಗಾಗಿ ನೀಡಲಾಗುವ ಚಿಲ್ಲರೆ ಹಾಗೂ ಸಗಟು ಲಾಭಾಂಶದ ಪಾವತಿಯಲ್ಲಿ ವಿಳಂಬವನ್ನು ನಿವಾರಿಸಲು FIST Application ಮೂಲಕ ಲಾಭಾಂಶದ ನೇರ ಪಾವತಿ

• ಪ್ರಸ್ತುತ ಜಾರಿಯಲ್ಲಿರುವ ಇಲಾಖೆಯ ಸಹಾಯವಾಣಿ (1967) ವ್ಯವಸ್ಥೆಯನ್ನು ಸ್ವಯಂ ಚಾಲಿತ ದೂರು ಕೇಂದ್ರ, ಧ್ವನಿ ಚಾಟ್‌ಬಾಟ್ ಮತ್ತು ಲೈವ್ ಕರೆ ವರ್ಗಾವಣೆ ವ್ಯವಸ್ಥೆಗಳನ್ನು ಒಳಗೊಂಡ AI ಆಧಾರಿತ “ಸ್ಮಾರ್ಟ್‌ ಅನ್ನವಾಣಿ”ಯಾಗಿ ಪರಿವರ್ತನೆ

• ದಾಸೋಹ ಯೋಜನೆಯಡಿ 34 ಹೊಸ ಕಲ್ಯಾಣ ಸಂಸ್ಥೆಗಳಲ್ಲಿ ಇರುವ 6,701 ಫಲಾನುಭವಿಗಳಿಗೆ ಆಹಾರ ಭದ್ರತೆ ಒದಗಿಸಲು ಕ್ರಮ

“ಕಾರ್ಮಿಕರ ಕಲ್ಯಾಣಕ್ಕೆ ಪ್ರಾಶಸ್ತ್ಯ”
• ಕಟ್ಟಡ ಕಾರ್ಮಿಕರ ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸಲು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ರೂ.600 ಕೋಟಿ ವೆಚ್ಚದಲ್ಲಿ 10 ಜಿಟಿಟಿಸಿ ಕೇಂದ್ರಗಳ ಸ್ಥಾಪನೆ

• 6 ರಿಂದ 12ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಪ್ರಸಕ್ತ ಸಾಲಿನಲ್ಲಿ 62 ನೂತನ ಶ್ರಮಿಕ ವಸತಿ ಶಾಲೆಗಳ ಆರಂಭ

“ಕಾರ್ಮಿಕರ ಕಲ್ಯಾಣಕ್ಕೆ ಪ್ರಾಶಸ್ತ್ಯ”
• ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರು ಹಾಗೂ ಅವರ ಮಕ್ಕಳಿಗೆ ವೃತ್ತಿ ಬುನಾದಿ ಹಾಗೂ ಉನ್ನತಿ ಕೌಶಲ್ಯ ತರಬೇತಿಯನ್ನು ನೀಡಲು ರೂ.200 ಕೋಟಿ ವೆಚ್ಚದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಅತ್ಯಾಧುನಿಕ ಮೂಲಸೌಕರ್ಯವನ್ನು ಒಳಗೊಂಡ ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ

• ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಕೌಶಲ್ಯಾಧಾರಿತ ಉದ್ಯೋಗ ದೊರಕಿಸಿಕೊಡುವ ಉದ್ದೇಶದಿಂದ ಆನ್‌ಲೈನ್ ಉದ್ಯೋಗ ವಿನಿಮಯ ಕೇಂದ್ರವನ್ನು ಸ್ಥಾಪಿಸಲು ರೂ.5 ಕೋಟಿ ವೆಚ್ಚದಲ್ಲಿ ‘ಕಾಯಕ ಭಾಗ್ಯ’ ಯೋಜನೆ ಜಾರಿಗೆ.

“ಕೌಶಲ್ಯಾಭಿವೃದ್ಧಿಗೆ ಉತ್ತೇಜನ”
• ಐದು ವರ್ಷಗಳ ಅವಧಿಯಲ್ಲಿ ರಾಜ್ಯದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳು, ಕೆಜಿಟಿಟಿಐಗಳು, ಕೆಎಸ್‌ಡಿಎ ಮತ್ತು ಜೆಟಿಎಸ್‌ಗಳ ಮೂಲಭೂತ ಸೌಕರ್ಯ ಮತ್ತು ತರಬೇತಿ ಗುಣಮಟ್ಟವನ್ನು ಹೆಚ್ಚಿಸಲು ಒಟ್ಟು ರೂ.1,386 ಕೋಟಿ ವೆಚ್ಚದಲ್ಲಿ “K-QUEST” (ಕರ್ನಾಟಕ – ಕ್ವಾಲಿಟಿ ಅಪ್‌ಗ್ರಡೆಷನ್‌ ಫಾರ್‌ ಎಂಪ್ಲಾಯ್ಮೆಂಟ್‌ ಎಂಡ್‌ ಸ್ಕಿಲ್‌ ಟ್ರಾನ್ಸ್‌ಫಾರ್ಮೇಷನ್) ಯೋಜನೆಯ ಜಾರಿ

• ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಕೇಂದ್ರ ಸರ್ಕಾರವು ಘೋಷಣೆ ಮಾಡಿರುವ PM- SETU ಯೋಜನೆ ಅಡಿಯಲ್ಲಿ ಕೇಂದ್ರ, ರಾಜ್ಯ ಮತ್ತು ಉದ್ದಿಮೆಗಳ ಸಹಭಾಗಿತ್ವದಲ್ಲಿ ಹಬ್‌ ಎಂಡ್‌ ಸ್ಪೋಕ್ ಮಾದರಿಯಲ್ಲಿ ಕ್ಲಸ್ಟರ್‌ಗಳನ್ನಾಗಿ ಉನ್ನತೀಕರಿಸಲಾಗುವುದು. ಈ ಸಾಲಿನಲ್ಲಿ ಎರಡು ಕ್ಲಸ್ಟರ್ ಗಳನ್ನು 241 ಕೋಟಿ ರೂ. ಘಟಕ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು

• ಮೈಸೂರು ಮತ್ತು ಕಲಬುರಗಿಯಲ್ಲಿ ತಲಾ 16 ಕೋಟಿ ರೂ.ವೆಚ್ಚದಲ್ಲಿ ಷ್ನೈಡರ್‌ ಎಲೆಕ್ಟ್ರಿಕ್‌ (Schneider Electric) ಯೂತ್ ಇಂಪ್ಯಾಕ್ಟ್ ಕೇಂದ್ರವನ್ನು ಸ್ಥಾಪಿಸಲಾಗುತ್ತಿದ್ದು, ಇದರಿಂದ ಪ್ರತಿ ವರ್ಷ ಒಟ್ಟಾರೆ 2,000 ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಮತ್ತು ಉದ್ಯೋಗವಕಾಶ ಕಲ್ಪಿಸಲು ಅನುಕೂಲ.

ಇದನ್ನೂ ಓದಿ/ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆ: ರಾಜ್ಯ ಬಜೆಟ್‌ನಲ್ಲಿ ₹100 ಕೋಟಿ ಅನುದಾನ