ಸುದ್ದಿಬಿಂದು ಬ್ಯೂರೋ ವರದಿ
ಶಿರಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಈ ಬಾರಿಯ ರಾಜ್ಯ ಬಜೆಟ್ ಸರ್ವವ್ಯಾಪಿ ಹಾಗೂ ಸರ್ವಸ್ಪರ್ಶಿಯಾಗಿದ್ದು, ವಿಶೇಷವಾಗಿ ಉತ್ತರ ಕನ್ನಡ ಜಿಲ್ಲೆಯ ದಶಕಗಳ ಕನಸನ್ನು ನನಸು ಮಾಡಿದೆ ಎಂದು ಶಿರಸಿ–ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ಟಿ. ನಾಯ್ಕ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಉತ್ತರ ಕನ್ನಡ ಜಿಲ್ಲೆಯಲ್ಲಿ ತುರ್ತು ಚಿಕಿತ್ಸೆಗಾಗಿ ಜನರು ಮಂಗಳೂರು, ಉಡುಪಿ ಅಥವಾ ಗೋವಾ ಕಡೆಗೆ ತೆರಳಬೇಕಾದ ಪರಿಸ್ಥಿತಿ ಇತ್ತು. ಇದನ್ನು ಮನಗಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ 100 ಕೋಟಿ ರೂಪಾಯಿ ವೆಚ್ಚದಲ್ಲಿ ಹೈಟೆಕ್ ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಘೋಷಿಸಿರುವುದು ಜಿಲ್ಲೆಯ ಆರೋಗ್ಯ ಕ್ಷೇತ್ರಕ್ಕೆ ಮಹತ್ವದ ಬೆಳವಣಿಗೆಯಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಂತಹ ಸುಸಜ್ಜಿತ ಆರೋಗ್ಯ ಸೌಲಭ್ಯ ನಿರ್ಮಾಣವಾಗುವುದರಿಂದ ಸಾವಿರಾರು ಜನರಿಗೆ ತುರ್ತು ಹಾಗೂ ವಿಶೇಷ ಚಿಕಿತ್ಸೆಯನ್ನು ಸ್ಥಳೀಯವಾಗಿಯೇ ಪಡೆಯಲು ಅವಕಾಶ ದೊರೆಯಲಿದೆ. ಇದು ಜಿಲ್ಲೆಯ ಇತಿಹಾಸದಲ್ಲೇ ಆರೋಗ್ಯ ಕ್ಷೇತ್ರದ ಮಹತ್ವದ ಮೈಲಿಗಲ್ಲಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
“ಸಿದ್ದರಾಮಯ್ಯ ಅವರು ಕೇವಲ ರಾಜಕಾರಣಿಯಲ್ಲ, ಜನರ ನಾಡಿಮಿಡಿತ ಅರಿತ ಮುತ್ಸದ್ದಿ ನಾಯಕರು. ಉತ್ತರ ಕನ್ನಡ ಜಿಲ್ಲೆಯ ಜನರ ಸಮಸ್ಯೆಯನ್ನು ಅರಿತು 100 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿರುವುದು ಜಿಲ್ಲೆಯ ಮೇಲಿನ ಅವರ ಕಾಳಜಿಯನ್ನು ತೋರಿಸುತ್ತದೆ. ಈ ಮಹತ್ವದ ನಿರ್ಧಾರಕ್ಕಾಗಿ ಜಿಲ್ಲೆಯ ಜನರ ಪರವಾಗಿ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ಶಾಸಕ ಭೀಮಣ್ಣ ಟಿ. ನಾಯ್ಕ ತಿಳಿಸಿದ್ದಾರೆ.
ಇದನ್ನೂ ಓದಿ/ಸಿದ್ದರಾಮಯ್ಯ ಬಜೆಟ್ ಜಿಲ್ಲೆಯ ಜನರ ಕಿವಿಗೆ ಹೂವಿಡುವ ತಂತ್ರ: ಅನಂತಮೂರ್ತಿ ಹೆಗಡೆ



