ಬೆಂಗಳೂರು: ರಾಜ್ಯದ 2026–27ನೇ ಸಾಲಿನ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 10.15ಕ್ಕೆ ವಿಧಾನಸಭೆಯಲ್ಲಿ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿಯ ಆಯವ್ಯಯದ ಮೇಲೆ ರಾಜ್ಯದ ಜನರಲ್ಲಿ ಸಾಕಷ್ಟು ನಿರೀಕ್ಷೆಗಳು ವ್ಯಕ್ತವಾಗಿವೆ.

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಜೊತೆಗೆ ಶಿಕ್ಷಣ, ಕೃಷಿ, ಕೈಗಾರಿಕೆ, ಸಾರಿಗೆ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡಲಾಗುತ್ತದೆಯೇ ಎಂಬ ಕುತೂಹಲ ಹೆಚ್ಚಾಗಿದೆ. ವಿವಿಧ ವಲಯಗಳ ಅಭಿವೃದ್ಧಿಗೆ ವಿಶೇಷ ಘೋಷಣೆಗಳಾಗುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯಗಳಲ್ಲಿ ಚರ್ಚೆ ನಡೆಯುತ್ತಿದೆ.

ಹಣಕಾಸು ಇಲಾಖೆ ಸಿದ್ಧಪಡಿಸಿರುವ ಬಜೆಟ್‌ನಲ್ಲಿ ಜನಪರ ಯೋಜನೆಗಳಿಗೆ ಒತ್ತು ನೀಡಲಾಗುತ್ತದೆಯೇ, ದೀರ್ಘಕಾಲಿಕ ಅಭಿವೃದ್ಧಿ ಯೋಜನೆಗಳಿಗೆ ಎಷ್ಟು ಅನುದಾನ ಮೀಸಲಿಡಲಾಗುತ್ತದೆ ಎಂಬುದನ್ನು ಕಾದು ನೋಡಲಾಗುತ್ತಿದೆ. ಈ ಬಾರಿ ರಾಜ್ಯದ ಒಟ್ಟು ಬಜೆಟ್ ಗಾತ್ರವು ಸುಮಾರು ₹4.50 ಲಕ್ಷ ಕೋಟಿ ಮಟ್ಟ ತಲುಪುವ ನಿರೀಕ್ಷೆಯಿದ್ದು, ಸಾಲದ ಪ್ರಮಾಣವೂ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ಸೂಚಿಸಿವೆ.

ಇನ್ನೊಂದೆಡೆ ಗ್ಯಾರಂಟಿ ಯೋಜನೆಗಳ ನಿರ್ವಹಣೆ, ವಿವಿಧ ಇಲಾಖೆಗಳ ಅಭಿವೃದ್ಧಿ, ರೈತರ ಸಮಸ್ಯೆಗಳಿಗೆ ಪರಿಹಾರ, ಮಹಿಳೆಯರಿಗಾಗಿ ಹೊಸ ಯೋಜನೆಗಳು, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚುವರಿ ಅನುದಾನ ನೀಡುವ ಸವಾಲುಗಳ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 17ನೇ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ.
ರಾಜ್ಯದ ಅಭಿವೃದ್ಧಿ ದಿಕ್ಕನ್ನು ನಿರ್ಧರಿಸುವ ಈ ಬಜೆಟ್‌ನಲ್ಲಿ ಜನಪರ ಘೋಷಣೆಗಳು ಯಾವ ಮಟ್ಟಿಗೆ ಇರಲಿವೆ ಎಂಬುದನ್ನು ರಾಜ್ಯದ ಜನತೆ ಕುತೂಹಲದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ/ಭಾರತದ ಭರ್ಜರಿ ಜಯ: ಇಂಗ್ಲೆಂಡ್ ವಿರುದ್ಧ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ 7 ರನ್‌ಗಳಿಂದ ಗೆಲುವು