ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಸೀಬರ್ಡ ನೌಕಾನೆಲೆ ನಿರಾಶ್ರಿತರಿಗೆ 27.70 ಕೋಟಿ ರೂಪಾಯಿ ಹೆಚ್ಚುವರಿ ಪರಿಹಾರ ಬಿಡುಗಡೆ ಹಾಗೂ ರಾಷ್ಟ್ರೀಯ ಹೆದ್ದಾರಿ (52ರ) ಅಂಕೋಲಾ ಯಲ್ಲಾಪುರ ನಡುವೆ ಸಮಗ್ರ ಅಭಿವೃದ್ಧಿಗೆ 101.21 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು ಸ್ವಾಗತಾರ್ಹವಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ.
ಸೀಬರ್ಡ ನೌಕಾನೆಲೆ ಸಂತ್ರಸ್ಥರಿಗೆ 28 ಬಿ ಅಡಿಯಲ್ಲಿನ 112 ಪ್ರಕರಣಗಳಿಗೆ ಒಟ್ಟೂ 27 ಕೋಟಿ ರೂ.ಗಳ ಹೆಚ್ಚುವರಿ ಪರಿಹಾರ ಬಿಡುಗಡೆಯಾಗಿದೆ. ಇದರಲ್ಲಿ ದಾಖಲೆ ನೀಡಿದ 6.87 ಕೋಟಿ ರೂ. ಪರಿಹಾರವನ್ನು ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಶನಿವಾರ ವಿತರಣೆ ಮಾಡಿದ್ದಾರೆ. ಇದುವರೆಗೆ 35 ಕೋಟಿ ರೂ. ಬಿಡುಗಡೆಯಾಗಿದ್ದು ಬಾಕಿ ಇರುವ 215 ಪ್ರಕರಣಗಳಿಗೆ 28.82 ಕೋಟಿ ರೂ. ಶೀಘ್ರದಲ್ಲಿ ಬಿಡುಗಡೆಯಾಗಲಿದೆ ಎಂದು ಸಂಸದರು ತಿಳಿಸಿದ್ದಾರೆ. ಈ ಹಣ ಬಿಡುಗಡೆಗೆ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ವಿಶೇಷ ಪ್ರಯತ್ನ ನಡೆಸಿದ್ದರು.
ನಾನೂ ಕೂಡ ಈ ಹಿಂದೆ ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟ ಸಚಿವರು ಹಾಗೂ ಸಂಸದರಿಗೆ ಮನವಿ ಮಾಡಿದ್ದು, ಹಣ ಬಿಡುಗಡೆಯಿಂದ ಸಂತಸವಾಗಿದೆ. ಅದೇ ರೀತಿ ಅಂಕೋಲಾ ಯಲ್ಲಾಪುರ ಹೆದ್ದಾರಿ ಹೊಸಳ್ಳಿಯಿಂದ ಯಲ್ಲಾಪುರ ಹಾಗೂ ಮಾಸ್ತಿಕಟ್ಟೆಯಿಂದ ಬಾಳೆಗುಳಿ ತನಕ ರಸ್ತೆ ಸುಧಾರಣೆಗೆ ಕೇಂದ್ರ ಸರ್ಕಾರ 101.21 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಈ ಯೋಜನೆಯಡಿ 44.74 ಕಿ.ಮೀ. ರಸ್ತೆಯನ್ನು ಅತ್ಯಾಧುನಿಕ ತಂತ್ರಜ್ಞಾನದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಸಂಸದರು ತಿಳಿಸಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಾರವಾರ ಅಂಕೋಲಾ ಕ್ಷೇತ್ರದಲ್ಲಿ ಪರಿಹಾರ ಹಾಗೂ ಅನುದಾನ ನೀಡುವ ಮೂಲಕ ಅಭಿವೃದ್ಧಿಗೆ ಒತ್ತು ನೀಡಿದೆ. ಈ ಹಣ ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ ಸಿಂಗ್, ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಹಾಗೂ ಹಣ ಬಿಡುಗಡೆಗೆ ನಿರಂತರ ಪ್ರಯತ್ನಿಸಿದ ನಮ್ಮ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ರೂಪಾಲಿ ಎಸ್.ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೀಬರ್ಡ ನಿರಾಶ್ರಿತರ ಪರಿಹಾರಕ್ಕೆ ಧನ್ಯವಾದ ಹೇಳಿದ ರೂಪಾಲಿ ನಾಯ್ಕ
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಸೀಬರ್ಡ ನಿರಾಶ್ರಿತರಿಗೆ ಹೆಚ್ಚುವರಿ ಪರಿಹಾರ ಬಿಡುಗಡೆಯಾಗುತ್ತಿದೆ. ಈ ಹಿಂದೆ ಸಂಸದರಾಗಿದ್ದ ಅನಂತಕುಮಾರ ಹೆಗಡೆ ಅವರ ಪ್ರಯತ್ನದಿಂದ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಕಾರವಾರಕ್ಕೆ ಆಗಮಿಸಿ ಸುಮಾರು 600 ಕೋಟಿ ರೂ.ಗಳಷ್ಟು ಪರಿಹಾರ ವಿತರಣೆ ಮಾಡಲಾಗಿತ್ತು. ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಬಾಕಿ ಉಳಿದ ಪರಿಹಾರವನ್ನೂ ಆದಷ್ಟು ಶೀಘ್ರದಲ್ಲಿ ಬಿಡುಗಡೆಗೆ ಪ್ರಯತ್ನಿಸಿ, ವಿತರಣೆ ಮಾಡಲಿದ್ದಾರೆ ಎಂಬ ಭರವಸೆ ಇದೆ. ಹಣ ಬಿಡುಗಡೆಗೆ ಪ್ರಯತ್ನಿಸಿದ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುವುದಾಗಿ ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ.
ಇದನ್ನೂ ಓದಿ/Multi-Speciality-Hospital/ಕುಮಟಾದಲ್ಲೇ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಒತ್ತಾಯ

