ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಳಗಾ ಗ್ರಾಮದಲ್ಲಿ ಚಿರತೆ ಬಾವಿಗೆ ಬಿದ್ದು ಜನತೆಯಲ್ಲಿ ಆತಂಕ ಮೂಡಿಸಿರುವ ಘಟನೆ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಕಾಡಿನಿಂದ ಆಹಾರ ಹುಡುಕಿ ನಾಡಿನತ್ತ ಬಂದಿದ್ದ ಚಿರತೆ, ರಾತ್ರಿ ವೇಳೆ ಗ್ರಾಮದ ಸಮೀಪದ ಬಾವಿಗೆ ಬಿದ್ದು ಪಜೀತಿಗೆ ಒಳಗಾದುದಾಗಿದೆ. ಬೆಳಿಗ್ಗೆ ಬಾವಿಯಿಂದ ಕೇಳಿಬಂದ ದೊಡ್ಡ ಶಬ್ದವನ್ನವನ್ನ ಗಮನಿಸಿದ ಗ್ರಾಮಸ್ಥರು ಸ್ಥಳಕ್ಕೆ ಹೋಗಿ ನೋಡಿದಾಗ ಬಾವಿಯೊಳಗೆ ಚಿರತೆ ಸಿಲುಕಿಕೊಂಡಿರುವುದು ಕಂಡುಬಂದಿದೆ.

ತಕ್ಷಣ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಸುರಕ್ಷಿತವಾಗಿ ರಕ್ಷಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಬಾವಿಗೆ ಬಿದ್ದ ಚಿರತೆಯನ್ನು ಮೇಲಕ್ಕೆತ್ತಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಘಟನೆಯಿಂದ ಹಳಗಾ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ. ಚಿರತೆಯನ್ನು ಸುರಕ್ಷಿತವಾಗಿ ರಕ್ಷಿಸಿ ಕಾಡಿಗೆ ಬಿಡುವ ಪ್ರಯತ್ನ ನಡೆಯುತ್ತಿದೆ. .

ಇದನ್ನೂ ಓದಿ/ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಜನಸೌಲಭ್ಯಕ್ಕೆ ಕುಮಟಾ ಸೂಕ್ತ ಕೇಂದ್ರ