ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ರಾಜ್ಯ ಸರ್ಕಾರವು 2025ನೇ ಸಾಲಿನ ಪ್ರತಿಷ್ಠಿತ ‘ಮುಖ್ಯಮಂತ್ರಿ ಪದಕ’ ವಿಜೇತರ ಪಟ್ಟಿಯನ್ನು ಪ್ರಕಟಿಸಿದ್ದು, ಉತ್ತರ ಕನ್ನಡ ಜಿಲ್ಲೆಯ ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ ರಾಜ್ಯದ ಒಟ್ಟು 153 ಮಂದಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮುಖ್ಯಮಂತ್ರಿ ಚಿನ್ನದ ಪದಕ ಘೋಷಿಸಲಾಗಿದೆ.
ಭಟ್ಕಳ ನಗರ ಪೊಲೀಸ್ ಠಾಣೆಯ ಪಿಎಸ್ಐ ನವೀನ್ ಎಸ್. ನಾಯ್ಕ ಹಾಗೂ ಶಿರಸಿ ನ್ಯೂ ಮಾರ್ಕೆಟ್ ಪೊಲೀಸ್ ಠಾಣೆಯ ಪಿಎಸ್ಐ ರಾಜಕುಮಾರ್ ಸಿದ್ರಾಮಪ್ಪ ಉಕ್ಕಲಿ ಅವರು ತಮ್ಮ ದಕ್ಷತೆ, ಪ್ರಾಮಾಣಿಕತೆ ಮತ್ತು ಸಾರ್ವಜನಿಕ ಸೇವೆಯಲ್ಲಿ ತೋರಿದ ಸಾಧನೆಗಾಗಿ ಈ ಬಾರಿಯ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ.
ಏಪ್ರಿಲ್ 2, ಪದಕ ಪ್ರದಾನ ಸಮಾರಂಭವು ನಡೆಯಲಿದ್ದು, ಅದಕ್ಕೂ ಮುನ್ನ ಮಾರ್ಚ್ 29ರಂದು ಬೆಳಿಗ್ಗೆ 8 ಗಂಟೆಗೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೆ.ಎಸ್.ಆರ್.ಪಿ 3ನೇ ಪಡೆಯ ಕಮಾಂಡೆಂಟ್ ಕಚೇರಿ ಆವರಣದಲ್ಲಿ ಪೂರ್ವಭಾವಿ ತಾಲೀಮು (ರಿಹರ್ಸಲ್) ನಡೆಯಲಿದೆ. ಪದಕ ವಿಜೇತರು ಈ ತಾಲೀಮಿನಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕಿದ್ದು, ಏಪ್ರಿಲ್ 2ರವರೆಗೆ ಬೆಂಗಳೂರಿನಲ್ಲಿ ತಂಗುವಂತೆ ಪೊಲೀಸ್ ಇಲಾಖೆ ಸೂಚಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಇಬ್ಬರು ಅಧಿಕಾರಿಗಳು ರಾಜ್ಯ ಮಟ್ಟದ ಈ ಗೌರವಕ್ಕೆ ಪಾತ್ರರಾಗಿರುವುದು ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದ್ದು, ಪೊಲೀಸ್ ಇಲಾಖೆಯ ಸಾಧನೆಗೆ ಮತ್ತೊಂದು ಮೆಚ್ಚುಗೆ ವ್ಯಕ್ತವಾಗಿದೆ.

