ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಕಾಂಗ್ರೆಸ್ ಮುಖಂಡ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಆಪ್ತರಾಗಿರುವ ಗೋಪಾಲಕೃಷ್ಣ ನಾಯಕ ಅವರ ಮೇಲಿನ ಹತ್ಯೆ ಯತ್ನ ಪ್ರಕರಣದ ಬಗ್ಗೆ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಮೌನ ವಹಿಸಿರುವುದು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಮಾರ್ಚ್ 25ರಂದು ಅಂಕೋಲಾ ಪಟ್ಟಣದ ಕಣಕಣೇಶ್ವರ ದೇವಸ್ಥಾನದ ಎದುರು ಆರು ಮಂದಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿದ್ದರು.ಈ ಘಟನೆಯಲ್ಲಿ ನಾಯಕ ಅವರ ತಲೆ ಹಾಗೂ ಕುತ್ತಿಗೆ ಭಾಗಕ್ಕೆ ಗಂಭೀರ ಗಾಯಗಳಾಗಿ, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸದ್ಯ ಗುಣಮುಖರಾಗಿದ್ದಾರೆ. ಹಲ್ಲೆ ನಡೆದ ಕೆಲವೇ ಗಂಟೆಗಳಲ್ಲಿ ಕಾರವಾರ ಪೊಲೀಸರು ನಾಲ್ವರು ಆರೋಪಿಗಳನ್ನು ಮಾಜಾಳಿ ಚೆಕ್ಪೋಸ್ಟ್ ಬಳಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಘಟನೆಯ ಬಳಿಕ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಖುದ್ದಾಗಿ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಆದರೆ ಪಕ್ಷದ ಮುಖಂಡನ ಮೇಲೆ ಇಂತಹ ಗಂಭೀರ ಹತ್ಯೆ ಯತ್ನ ನಡೆದಿದ್ದರೂ ಜಿಲ್ಲೆಯ ಒಬ್ಬನೇ ಒಬ್ಬ ಕಾಂಗ್ರೆಸ್ ನಾಯಕರು ಘಟನೆಯ ಬಗ್ಗೆ ಖಂಡನೆ ವ್ಯಕ್ತಪಡಿಸದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಇದನ್ನ ಗಮನಿಸಿದ್ದರೆ ಗೋಪಾಲಕೃಷ್ಣ ನಾಯ್ಕ ಅವರಿಗೆ ಹಾಗೂ ಜಿಲ್ಲಾ ಕಾಂಗ್ರೇಸ ಘಟಕದ ನಡುವೆ ಸಂಬಂಧ ಅಷ್ಟೊಂದು ಚೆನ್ನಾಗಿರಲಿಲ್ಲ ಎನ್ನುವ ಮಾತುಗಳು ಕೂಡ ಕೇಳಿ ಬರುತ್ತಿದೆ.ಆದರೆ ಅದು ಏನೆ ಇದರೂ ಸಹ ರಾಜ್ಯದಲ್ಲಿ ತಮ್ಮದೆ ಸರಕಾರ ಇದ್ದಾಗಲ್ಲೂ ಪಕ್ಷದ ಮುಖಂಡನ ಹತ್ಯೆಗೆ ಯತ್ನಿಸಿರುವ ಬಗ್ಗೆ ಖಂಡಿಸಿದೆ ಇರೋದು ಮಾತ್ರ ದುರಂತ.
ಹೊನ್ನಾವರದ ಪರೇಶ್ ಮೇಸ್ತಾ ಅನುಮಾನಾಸ್ಪದ ಸಾವಿನ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಖುದ್ದಾಗಿ ಭೇಟಿ ನೀಡಿ ಕುಟುಂಬಕ್ಕೆ ಧೈರ್ಯ ತುಂಬಿದ್ದರು. ಆ ಘಟನೆಯನ್ನು ಆಧರಿಸಿ ವ್ಯಾಪಕ ಹೋರಾಟ ನಡೆಸಿ ಬಿಜೆಪಿ ಜಿಲ್ಲೆಯಲ್ಲಿ ಬಲಿಷ್ಠ ನೆಲೆ ಸಾಧಿಸಿತ್ತು. ಆದರೆ ಇಂತಹ ಗಂಭೀರ ಘಟನೆ ನಡೆದಿದ್ದರೂ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗದೇ ಇರುವುದು ‘ಮೌನವೇ ಮನೆ ದೇವರು’ ಎಂಬಂತಾಗಿದೆ ಎಂಬ ಟೀಕೆ ಕೇಳಿಬರುತ್ತಿದೆ.
ಇದೇ ರೀತಿಯ ಘಟನೆ ಬಿಜೆಪಿ ಕಾರ್ಯಕರ್ತನ ಮೇಲೆ ನಡೆದಿದ್ದರೆ ರಾಜ್ಯಮಟ್ಟದಲ್ಲಿ ದೊಡ್ಡ ಮಟ್ಟದ ಹೋರಾಟಗಳು ನಡೆಯುತ್ತಿದ್ದವು. ರಾಜ್ಯ ಹಾಗೂ ಕೇಂದ್ರದ ನಾಯಕರು ಜಿಲ್ಲೆಗೆ ಆಗಮಿಸಿ ಈ ವಿಚಾರವನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸುತ್ತಿದ್ದರೆಂಬ ಅಭಿಪ್ರಾಯವೂ ವ್ಯಕ್ತವಾಗಿದೆ.ಇನ್ನೊಂದೆಡೆ, ವಿರೋಧ ಪಕ್ಷದ ಸಣ್ಣ ಹೇಳಿಕೆಗೂ ತಕ್ಷಣ ಪ್ರತಿಕ್ರಿಯೆ ನೀಡುವ ಕಾಂಗ್ರೆಸ್ ನಾಯಕರು, ತಮ್ಮದೇ ಪಕ್ಷದ ರಾಜ್ಯಮಟ್ಟದ ಮುಖಂಡನ ಮೇಲೆ ಹತ್ಯೆ ಯತ್ನ ನಡೆದಿದ್ದರೂ ಇದುವರೆಗೆ ಖಂಡನೆ ಮಾಡದಿರುವುದು ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಪಾತಾಳಕ್ಕೆ ಕುಸಿದಿದೆ ಎನ್ನುವುದು ಸ್ಪಷ್ಟ.
ಇದನ್ನೂ ಓದಿ/ಡ್ರಾಮಾ ಜೂನಿಯರ್ಸ್ ಸೂರಜ್ ಅಜ್ಜಿ ನಿಧನ: ಜನಮನ ಗೆದ್ದ ‘ರೀಲ್ಸ್ ಅಜ್ಜಿ’ಗೆ ವಿದಾಯ

