ಸುದ್ದಿಬಿಂದು ಬ್ಯೂರೋ‌ ವರದಿ
ಬೆಂಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದ ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಪ್ರಕಟವಾಗಿದೆ. ಮಾಜಿ ಸಚಿವ ಹಾಗೂ ಪ್ರಸ್ತುತ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಈ ಪ್ರಕರಣದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಆಗಿದ್ದ ಚನ್ನಕೇಶವ ಟಿಂಗರೀಕರ್ ಅವರಿಗೆ ಮಾತ್ರ ಜೀವಾವಧಿ ಶಿಕ್ಷೆ ವಿಧಿಸಲಾಗದೇ, 7 ವರ್ಷಗಳ ಜೈಲು ಶಿಕ್ಷೆ ಹಾಗೂ ₹30,000 ದಂಡ ವಿಧಿಸಲಾಗಿದೆ. ಉಳಿದ ಆರೋಪಿಗಳಿಗೆ ನ್ಯಾಯಾಲಯವು ವಿಧಿಸಿದ ಶಿಕ್ಷೆಯ ವಿವರಗಳನ್ನು ಸಹ ಪ್ರಕಟಿಸಿದೆ.ಇದಲ್ಲದೆ, ನ್ಯಾಯಾಲಯವು ಒಟ್ಟು 16 ಲಕ್ಷ ದಂಡ ವಿಧಿಸಿದ್ದು, ಆ ಮೊತ್ತವನ್ನು ಯೋಗೇಶ್ ಗೌಡ ಅವರ ಮಕ್ಕಳಿಗೆ ಹಾಗೂ ಸಹೋದರ ಗುರುನಾಥ್ ಗೌಡ ಅವರಿಗೆ ಪರಿಹಾರವಾಗಿ ನೀಡುವಂತೆ ಸೂಚಿಸಿದೆ.

ಇದಕ್ಕೂ ಮುನ್ನ ಏಪ್ರಿಲ್ 15ರಂದು ಇದೇ ನ್ಯಾಯಾಲಯವು ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿಯನ್ನು ದೋಷಿಗಳೆಂದು ಘೋಷಿಸಿತ್ತು. ಬಳಿಕ ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿ, ಸಿಬಿಐ ಹಾಗೂ ಆರೋಪಿಗಳ ಪರ ವಕೀಲರ ವಾದಗಳನ್ನು ಆಲಿಸಿತು. ಆರೋಪಿಗಳ ಪರ ವಕೀಲರು ಶಿಕ್ಷೆಯನ್ನು ಕಡಿಮೆ ಮಾಡುವಂತೆ ಮನವಿ ಮಾಡಿದ್ದರೆ, ಸಿಬಿಐ ಪರ ವಕೀಲರು ಕಠಿಣ ಶಿಕ್ಷೆಗೆ ಒತ್ತಾಯಿಸಿದ್ದರು.ಈ ಎಲ್ಲ ವಾದಗಳನ್ನು ಪರಿಗಣಿಸಿದ ಬಳಿಕ, ಏಪ್ರಿಲ್ 17ರಂದು ನ್ಯಾಯಾಲಯವು ಅಂತಿಮವಾಗಿ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.

2016ರ ಜೂನ್ ತಿಂಗಳಲ್ಲಿ ನಡೆದ ಈ ಕೊಲೆ ಪ್ರಕರಣವು ಸುಮಾರು 8 ವರ್ಷಗಳ ಕಾಲ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, ದೀರ್ಘ ವಿಚಾರಣೆ ನಂತರ ತೀರ್ಪು ಹೊರಬಂದಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ವಿನಯ್ ಕುಲಕರ್ಣಿ ಸೇರಿದಂತೆ ಇತರ ಆರೋಪಿಗಳಿಗೂ ಶಿಕ್ಷೆ ವಿಧಿಸುವ ಮೂಲಕ ಅಂತಿಮ ತೀರ್ಪು ನೀಡಿದ್ದಾರೆ.

ಇದನ್ನೂ ಓದಿ/ಖಾಸಗಿ ಬಸ್‌‌ಗೆ ಕಾರು ಡಿಕ್ಕಿ : 7 ಮಂದಿ ಸಜೀವ ದಹನ