ಸುದ್ದಿಬಿಂದು ಬ್ಯೂರೋ ವರದಿ
ಹಾವೇರಿ : ಕ್ಷುಲ್ಲಕ ಜಗಳಕ್ಕೆ ವ್ಯಕ್ತಿ ಓರ್ವ ಕೊಚ್ಚಿ ಕೊಲೆಯಾಗಿರುವ ಘಟನೆ ಹಾವೇರಿ ಜಿಲ್ಲೆಯ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ನಡೆದ ಗಲಾಟೆ ಭೀಕರ ತಿರುವು ಪಡೆದು ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿರುವ ಘಟನೆ ಗ್ರಾಮದಲ್ಲಿ ಆತಂಕ ಮೂಡಿಸಿದೆ.
ಕಬ್ಬೂರು ಗ್ರಾಮದ ನಿವಾಸಿ ನಿಂಗಪ್ಪ ಚನ್ನಬಸಪ್ಪ ಕರಿಗಾರ್ (40) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಅದೇ ಗ್ರಾಮದ ಶಿವು ನಿಂಗಪ್ಪ ಪಟ್ಟೇದವ ಎಂಬಾತ ಕೊಲೆ ಆರೋಪಿಯಾಗಿದ್ದು, ಪೊಲೀಸರ ವಶಕ್ಕೆ ಪಡೆದಿದ್ದಾರೆ. ಮೃತ ನಿಂಗಪ್ಪ ಹಾಗೂ ಆರೋಪಿ ಶಿವು ಮನೆಗಳು ಅಕ್ಕಪಕ್ಕದಲ್ಲೇ ಇದ್ದು, ಇಬ್ಬರ ಮಧ್ಯೆ ಕಳೆದ ಕೆಲವು ತಿಂಗಳುಗಳಿಂದ ವೈಮನಸ್ಸು ಇತ್ತು ಎನ್ನಲಾಗಿದೆ. ಇಬ್ಬರಿಗೂ ಮದ್ಯಪಾನದ ಚಟ ಇದ್ದು, ಇದೇ ವಿಚಾರಕ್ಕೆ ಸಂಬಂಧಿಸಿದ ಹಳೆಯ ಜಗಳವೇ ಕೊಲೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಸುಮಾರು ಒಂದು ತಿಂಗಳ ಹಿಂದೆ ಇಬ್ಬರ ನಡುವೆ ಜಗಳ ನಡೆದಿದ್ದು, ಆ ವೇಳೆ ಆರೋಪಿ ಶಿವು ನಿಂಗಪ್ಪನ ತಲೆಗೆ ಹಲ್ಲೆ ನಡೆಸಿದ್ದ ಎನ್ನಲಾಗಿದೆ. ಬಳಿಕ ಗ್ರಾಮಸ್ಥರು ಹಾಗೂ ಹಿರಿಯರು ಮಧ್ಯಸ್ಥಿಕೆ ವಹಿಸಿ ರಾಜಿ ಮಾಡಿಸಿದ್ದರು. ಆದರೆ ಇಬ್ಬರ ನಡುವಿನ ದ್ವೇಷ ಮಾತ್ರ ಮುಂದುವರಿದಿತ್ತು ಎಂದು ತಿಳಿದುಬಂದಿದೆ.
ಇಂದು ಬೆಳಿಗ್ಗೆ ಮತ್ತೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೋಪಗೊಂಡ ಶಿವು ಕಲ್ಲಿನಿಂದ ನಿಂಗಪ್ಪನ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ತಲೆಗೆ ಗಂಭೀರ ಗಾಯಗೊಂಡ ನಿಂಗಪ್ಪ ಸ್ಥಳದಲ್ಲೇ ರಕ್ತಸ್ರಾವದಿಂದ ಮೃತಪಟ್ಟಿದ್ದಾನೆ.
ಘಟನೆ ಬಳಿಕ “ನಾನೇ ಕೊಲೆ ಮಾಡಿದ್ದೇನೆ” ಎಂದು ಆರೋಪಿ ಶಿವು ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಇದನ್ನೂ ಓದಿ/ಹಣದ ವಿಚಾರವಾಗಿ ಮಾರಕಾಸ್ತ್ರಗಳಿಂದ ಹಲ್ಲೆ : 7ಜನ ಗಂಭೀರ ಗಾಯ

