ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ರಾಜಕೀಯ ಚರ್ಚೆಗಳ ನಡುವೆಯೇ, ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಸಚಿವ ಸಂಪುಟದಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಕ್ಷೇತ್ರದ ಶಾಸಕ ಮಂಕಾಳ ವೈದ್ಯ ಅವರಿಗೆ ಮತ್ತೆ ಸಚಿವ ಸ್ಥಾನ ಸಿಗುವ ಎಲ್ಲಾ ಸಾಧ್ಯತೆಗಳು ಬಹುತೇಕ ಖಚಿತವಾಗಿವೆ ಎನ್ನಲಾಗುತ್ತಿದೆ.
ಈಗಾಗಲೇ ಕಳೆದ ಎರಡುವರೆ ವರ್ಷಗಳಿಂದ ಮೀನುಗಾರಿಕಾ ಇಲಾಖೆ ಸಚಿವರಾಗಿ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮಂಕಾಳ ವೈದ್ಯ, ತಮ್ಮ ಖಾತೆಯನ್ನು ಸಮರ್ಥವಾಗಿ ನಿಭಾಯಿಸಿರುವ ಹಿನ್ನೆಲೆಯಲ್ಲಿ ಅವರಿಗೆ ಮತ್ತೆ ಅದೇ ಖಾತೆ ಮುಂದುವರಿಯುವ ಸಾಧ್ಯತೆ ಇದೆ. ಜೊತೆಗೆ, ಹೆಚ್ಚುವರಿ ಜವಾಬ್ದಾರಿಯನ್ನೂ ನೀಡುವ ಸಾಧ್ಯತೆ ಕೂಡ ಇದೆ ಎನ್ನಲಾಗುತ್ತಿದೆ.
ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಮಂಕಾಳ ವೈದ್ಯ, ಮೀನುಗಾರಿಕಾ ಸಮುದಾಯವನ್ನು ಪ್ರತಿನಿಧಿಸಿದ್ದ ಏಕೈಕ ಶಾಸಕರಾಗಿರುವುದು ಅವರ ಬಲ ಹೆಚ್ಚಿಸಿದೆ.
ಇನ್ನೊಂದೆಡೆ, ಈಡಿಗ ಸಮುದಾಯದ ಕೋಟಾದಲ್ಲಿ ಈಗಾಗಲೇ ಸಚಿವರಾಗಿರುವ ಮಧು ಬಂಗಾರಪ್ಪ ಅವರನ್ನು ಮುಂದುವರಿಸುವ ಸಾಧ್ಯತೆ ಹೆಚ್ಚಿರುವುದರಿಂದ, ಶಿರಸಿ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಕ್ಷೀಣಿಸಿದೆ ಎನ್ನಲಾಗುತ್ತಿದೆ.
ಭೀಮಣ್ಣ ನಾಯ್ಕ ಅವರು ಮಧು ಬಂಗಾರಪ್ಪ ಅವರ ಹತ್ತಿರದ ಸಂಬಂಧಿಯಾಗಿದ್ದು, ಹೀಗಾಗಿ ಮಧು ಬಂಗಾರಪ್ಪ ಅವರನ್ನೆ ಸಚಿವ ಸಂಪುಟದಲ್ಲಿ ಮುಂದುವರಿಸಬೇಕು ಎನ್ನುವ ಅಭಿಪ್ರಾಯವನ್ನ ಶಾಸಕ ಭೀಮಣ್ಣ ನಾಯ್ಕ ವ್ಯಕ್ತಪಡಿಸಿರುವುದೂ ಗಮನಾರ್ಹವಾಗಿದೆ. ಇನ್ನೂ ಆರ್.ವಿ. ದೇಶಪಾಂಡೆ ಅವರು ಹಿರಿಯ ಶಾಸಕರಾಗಿದ್ದರೂ ಕೂಡ ಡಿ.ಕೆ. ಶಿವಕುಮಾರ ಅವರ ಸಚಿವ ಸಂಪುಟದಲ್ಲಿ ಅವರಿಗೆ ಅವಕಾಶ ಸಿಗುವ ಲಕ್ಷಣಗಳು ಸದ್ಯದ ಬೆಳವಣಿಗೆಯನ್ನ ಸೂಕ್ಷ್ಮವಾಗಿ ಗಮನಿಸಿದ್ರೆ ಅವರಿಗೆ ಸ್ಥಾನ ಸಿಗೋದು ಅನುಮಾನ ಎನ್ನಲಾಗುತ್ತಿದೆ. ಕಾರವಾರ ಶಾಸಕ ಸತೀಶ ಸೈಲ್ ಕೆಲ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸೈಲ್ಗೆ ಸಚಿವ ಸ್ಥಾನ ಸಿಕ್ಕೆ ಹೋಯತ್ತು ಎನ್ನುವ ರೀತಿಯಲ್ಲಿ ಪೊಸ್ಟ್ ಮಾಡಿಕೊಳ್ಳುತ್ತಿದ್ದಾರೆ. ಆದರೆ ಇವರು ಸರಿಯಾಗಿ ಕ್ಷೇತ್ರದ ಜನರ ಸಂಕಷ್ಟಗಳಿಗೆ ಸರಿಯಾಗಿ ಸ್ಪಂಧಿಸದೆ ಇರುವುದು ರಾಜ್ಯ ನಾಯಕರಿಗೂ ಗೊತ್ತೆ ಇದೆ. ಅದು ಅಲ್ಲದೆ ಅವರ ವಿರುದ್ಧ ಇರುವ ಇಡಿ ಪ್ರಕರಣಗಳ ಸುತ್ತ ರಾಜಕೀಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆ, ಅವರನ್ನು ಸಚಿವ ಸಂಪುಟಕ್ಕೆ ಸೇರಿಸುವ ಬಗ್ಗೆ ಕಾಂಗ್ರೆಸ್ ನಾಯಕರು ಎಚ್ಚರಿಕೆಯ ನಡೆ ಅನುಸರಿಸುವ ಸಾಧ್ಯತೆ ಇದೆ.
ಈ ಎಲ್ಲಾ ರಾಜಕೀಯ ಲೆಕ್ಕಾಚಾರಗಳ ನಡುವೆ, ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಹಾಗೂ ಡಿ.ಕೆ. ಶಿವಕುಮಾರ ಅವರ ಆಪ್ತರಾಗಿರುವ ಮಂಕಾಳ ವೈದ್ಯ ಅವರೇ ಡಿಕೆ ಶಿವಕುಮಾರ ಸಚಿವ ಸಂಪುಟದಲ್ಲೂ ಸ್ಥಾನ ಉಳಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.
ಇದನ್ನೂ ಓದಿ/ಡಿಕೆ ಶಿವಕುಮಾರ ಸಿಎಂ ಸಚಿವ ಸಂಪುಟದಲ್ಲಿ ಮುಂದುವರಿಯುವ ಸಾಧ್ಯತೆ ಇರುವ ಸಚಿವರು ಯಾರು..?



