ಸುದ್ದಿಬಿಂದು ಬ್ಯೂರೋ ವರದಿ
ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆ (ಆರ್ಟಿಒ) ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಓವರ್ಲೋಡ್ ಮಾಡಿಕೊಂಡು ಸಂಚರಿಸುತ್ತಿದ್ದ 17ಲಾರಿಗಳನ್ನು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.
ದಕ್ಣಿಣಕನ್ನಡ ಜಿಲ್ಲೆಯ ಕಾಪುವಿನಿಂದ ಹೊನ್ನಾವರದ ಕಡೆಗೆ ಭಾರಿ ಗಾತ್ರದ ಶಿಲೆ ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಗಳು ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಭಾರ ಸಾಗಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಹೊನ್ನಾವರ ವ್ಯಾಪ್ತಿಯಲ್ಲಿ ತಪಾಸಣೆ ನಡೆಸಿದ್ದು. ಈ ವೇಳೆ 17 ಲಾರಿಗಳು ಓವರ್ಲೋಡ್ ಆಗಿರುವುದು ಪತ್ತೆಯಾಗಿದೆ. ಅವುಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.
ವಶಕ್ಕೆ ಪಡೆದ ಲಾರಿಗಳು ಹೊನ್ನಾವರ ತಾಲೂಕಿನ ಕಾಸರಕೋಡದಲ್ಲಿ ನಿರ್ಮಾಣ ಹಂತದಲ್ಲಿರುವ ಖಾಸಗಿ ವಾಣಿಜ್ಯ ಬಂದರಿನ ವಿಸ್ತರಣೆ ಹಾಗೂ ಮೂಲಸೌಕರ್ಯ ಕಾಮಗಾರಿಗಳಿಗೆ ಅಗತ್ಯವಿರುವ ಕಲ್ಲುಗಳನ್ನು ಸಾಗಿಸುತ್ತಿದ್ದವು ಎಂದು ತಿಳಿದುಬಂದಿದೆ. ಸಾಗಾಟದಲ್ಲಿ ತೊಡಗಿದ್ದ ಲಾರಿಗಳ ಪೈಕಿ ಕೆಲವು ಉಡುಪಿ ಜಿಲ್ಲೆಯ ಪ್ರಭಾವಿ ವ್ಯಕ್ತಿಯೊಬ್ಬರಿಗೆ ಸೇರಿರುವುದು ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಈ ಕುರಿತು ಅಧಿಕಾರಿಗಳು ಅಧಿಕೃತವಾಗಿ ಯಾವುದೇ ವಿವರವನ್ನು ಬಹಿರಂಗಪಡಿಸಿಲ್ಲ.
ಓವರ್ಲೋಡ್ ವಾಹನಗಳ ಸಂಚಾರದಿಂದ ಹೆದ್ದಾರಿಗಳಿಗೆ ಹಾನಿಯಾಗುವುದಲ್ಲದೆ ಅಪಘಾತಗಳ ಸಾಧ್ಯತೆಯೂ ಹೆಚ್ಚಾಗುವ ಹಿನ್ನೆಲೆಯಲ್ಲಿ ಇಂತಹ ವಾಹನಗಳ ವಿರುದ್ಧ ಮುಂದಿನ ದಿನಗಳಲ್ಲಿಯೂ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕಾದ ಅನಿವಾರ್ಯತೆ ಇದೆ..

