ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಮೀನುಗಳ ಸಂತಾನೋತ್ಪತ್ತಿ ರಕ್ಷಣೆ ಹಾಗೂ ಕಡಲಿನ ಭದ್ರತೆಯ ಹಿತದೃಷ್ಟಿಯಿಂದ ಜೂನ್ 1ರಿಂದ ಜುಲೈ 31ರವರೆಗೆ ಒಟ್ಟು 61 ದಿನಗಳ ಕಾಲ ರಾಜ್ಯದ ಕರಾವಳಿಯುದ್ದಕ್ಕೂ ಯಾಂತ್ರೀಕೃತ ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಮೀನುಗಾರಿಕೆ ಇಲಾಖೆ ಆದೇಶ ಹೊರಡಿಸಿದೆ.
ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಒಳಗೊಂಡಂತೆ ಇಡೀ ಕರಾವಳಿ ತೀರದಲ್ಲಿ ಈ ನಿಯಮ ಅನ್ವಯವಾಗಲಿದೆ. ಮಳೆಗಾಲದ ಅವಧಿಯಲ್ಲಿ ಮೀನುಗಳು ಮೊಟ್ಟೆಯಿಟ್ಟು ಸಂತಾನೋತ್ಪತ್ತಿ ಮಾಡುವ ಪ್ರಕ್ರಿಯೆಗೆ ಅಡ್ಡಿಯಾಗಬಾರದು ಎಂಬ ಕಾರಣಕ್ಕೆ ಪ್ರತಿ ವರ್ಷ ಈ ತಾತ್ಕಾಲಿಕ ನಿಷೇಧವನ್ನು ಜಾರಿಗೊಳಿಸಲಾಗುತ್ತದೆ. ಜೊತೆಗೆ, ಮಳೆಗಾಲದಲ್ಲಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವುದರಿಂದ ಮೀನುಗಾರರ ಜೀವ ಸುರಕ್ಷತೆಯೂ ಈ ನಿರ್ಧಾರದ ಪ್ರಮುಖ ಉದ್ದೇಶವಾಗಿದೆ.
10 ಹೆಚ್.ಪಿ ಮೇಲ್ಪಟ್ಟ ದೋಣಿಗಳಿಗೆ ಬ್ರೇಕ್:
ಈ ಆದೇಶದ ಅನ್ವಯ 10 ಹೆಚ್.ಪಿ (HP) ಗಿಂತ ಹೆಚ್ಚಿನ ಸಾಮರ್ಥ್ಯದ ಮೋಟಾರ್ ಅಥವಾ ಇಂಜಿನ್ ಅಳವಡಿಸಿರುವ ಎಲ್ಲಾ ರೀತಿಯ ಸಾಂಪ್ರದಾಯಿಕ ಹಾಗೂ ಯಾಂತ್ರೀಕೃತ ದೋಣಿಗಳ ಮೀನುಗಾರಿಕೆಯನ್ನು ಕಡ್ಡಾಯವಾಗಿ ಸ್ಥಗಿತಗೊಳಿಸಬೇಕಾಗುತ್ತದೆ.
ಉಲ್ಲಂಘಿಸಿದರೆ ಕಠಿಣ ಕ್ರಮ:
ಸರ್ಕಾರದ ನಿಯಮಗಳನ್ನು ಮೀರಿ ಕಡಲಿಗೆ ಇಳಿಯುವ ದೋಣಿ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಸಿದೆ. ನಿಯಮ ಉಲ್ಲಂಘಿಸುವ ಸೌಲಭ್ಯ ವಂಚಿತ ದೋಣಿಗಳಿಗೆ ಸರ್ಕಾರದಿಂದ ಸಿಗುವ ತೆರಿಗೆ ರಹಿತ ಡೀಸೆಲ್ ಸೌಲಭ್ಯವನ್ನು ಶಾಶ್ವತವಾಗಿ ರದ್ದುಗೊಳಿಸಲಾಗುವುದು ಎಂದು ಮೀನುಗಾರಿಕೆ ಇಲಾಖೆಯ ಪ್ರಕಟಣೆ ತಿಳಿಸಿದೆ.ಕರಾವಳಿಯ ಮೀನುಗಾರಿಕಾ ಸಂಪತ್ತಿನ ಸುಸ್ಥಿರತೆ ಹಾಗೂ ಮೀನುಗಾರರ ಸುರಕ್ಷತೆಯ ಹಿತದೃಷ್ಟಿಯಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಎಲ್ಲಾ ದೋಣಿ ಮಾಲೀಕರು ಮತ್ತು ಮೀನುಗಾರರು ಇಲಾಖೆಯೊಂದಿಗೆ ಸಹಕರಿಸಬೇಕಾಗಿ ವಿನಂತಿಸಲಾಗಿದೆ.