ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಭಾರತೀಯ ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಜೊತೆಗೆ ರಾಜ್ಯಾದ್ಯಂತ ಪಕ್ಷ ಸಂಘಟನೆಯಲ್ಲಿ ಚುರುಕಾಗಿ ತೊಡಗಿಕೊಂಡಿರುವ ರೂಪಾಲಿ ಎಸ್.ನಾಯ್ಕ ಅವರಿಗೆ ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗೆ ಪಕ್ಷದ ಸಂಯೋಜಕರನ್ನಾಗಿ ನಿಯುಕ್ತಿಗೊಳಿಸಲಾಗಿದೆ.
ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳನ್ನು ಗಮನಿಸಲು ರಾಜ್ಯ ಪದಾಧಿಕಾರಿಗಳನ್ನು ವಿವಿಧ ಜಿಲ್ಲೆಗಳಿಗೆ ಸಂಯೋಜಕರನ್ನಾಗಿ ನಿಯುಕ್ತಿ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷರು ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಉಸ್ತುವಾರಿಯಾಗಿ ನೇಮಕ
ಮುಂಬರುವ ಪಶ್ಚಿಮ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಆಗಿರುವ ರೂಪಾಲಿ .ನಾಯ್ಕ ಹಾಗೂ ಮಾಜಿ ಶಾಸಕ ಸುನೀಲ ನಾಯ್ಕ ಅವರನ್ನು ಜಿಲ್ಲಾ ಉಸ್ತುವಾರಿಗಳನ್ನಾಗಿ ಪಕ್ಷದ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ನೇಮಿಸಿ ಆದೇಶ ಹೊರಡಿಸಿದ್ದಾರೆ.
ಕಾರವಾರ-ಅಂಕೋಲಾದಲ್ಲಿ ಪಕ್ಷಕ್ಕೆ ಭದ್ರ ಅಡಿಪಾಯ ಹಾಕಿದ ರೂಪಾಲಿ ನಾಯ್ಕ”
ರೂಪಾಲಿ ಎಸ್.ನಾಯ್ಕ ಅವರು ಮಾಜಿ ಶಾಸಕರಾಗಿ ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಹಕಾರದಿಂದ ಬಲಿಷ್ಠವಾಗಿ ಸಂಘಟಿಸಿದ್ದಾರೆ. ಹಾಗೆಯೇ ರಾಜ್ಯ ಉಪಾಧ್ಯಕ್ಷರಾಗಿ ಉತ್ತರ ಕನ್ನಡ ಜಿಲ್ಲೆ ಹಾಗೂ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷದ ನಾಯಕರು, ಮುಖಂಡರೊಂದಿಗೆ ಪಕ್ಷ ಸಂಘಟನೆಯಲ್ಲಿ ಕ್ರಿಯಾಶೀಲವಾಗಿ ತೊಡಗಿಕೊಂಡಿದ್ದಾರೆ.



