ಸುದ್ದಿಬಿಂದು ಬ್ಯೂರೋ ವರದಿ
ಗೋಕರ್ಣ: ಮಳೆಗಾಲ ಆರಂಭವಾಗುತ್ತಿದ್ದಂತೆ ಗೋಕರ್ಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸಮಸ್ಯೆ ಮತ್ತೆ ತಲೆದೋರಿದ್ದು, ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸುವಂತಾಗಿದೆ.
ಗೋಕರ್ಣ ಗ್ರೀಡ್ ವ್ಯಾಪ್ತಿಯಲ್ಲಿ ನಿತ್ಯವೂ ಒಂದಲ್ಲ ಒಂದು ತಾಂತ್ರಿಕ ಸಮಸ್ಯೆ ಎದುರಾಗುತ್ತಿದ್ದು, ಆಗಾಗ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಮೋಡ ಕವಿದರೂ ಸಾಕು, ಗಾಳಿ-ಮಳೆಯ ಮುನ್ಸೂಚನೆ ಕಂಡರೂ ಸಾಕು ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳುತ್ತಿರುವುದರಿಂದ ಜನಜೀವನ ಅಸ್ತವ್ಯಸ್ತವಾಗುತ್ತಿದೆ. ಲೈನ್ ಮೇಲೆ ಸಣ್ಣ ಕೊಂಬೆ ಬಿದ್ದರೂ ಕೆಲವೊಮ್ಮೆ ಇಡೀ ದಿನ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳುತ್ತಿದ್ದು, ವ್ಯಾಪಾರಸ್ಥರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದಾರೆ.ಕೆಲವು ಸಲ ಸಂಜೆ ಸಮಯದಲ್ಲಿ ವಿದ್ಯುತ್ ಕೈಕೊಟ್ಟರೆ ರಾತ್ರಿಯಿಂದ ಬೆಳಿಗ್ಗೆ ಆಗೋ ತನಕ ಜನರು ಕತ್ತಲೆಯಲ್ಲೆ ಕಾಲ ಕಳೆಯಬೇಕಾದ ಪರಿಸ್ಥಿತಿ ಇದೆ. ಇದರಿಂದಾಗಿ ಕೆಲವೊಮ್ಮೆ ಇಲ್ಲಿನ ಜನ ಯಾವುದೋ ಒಂದು ದಟ್ಟ ಅರಣ್ಯದಲ್ಲಿ ವಾಸವಾಗಿದ್ದಾರೋ ಎನ್ನುವ ಅನುಭವ ಆಗುವಂತಾಗಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.
ವಿದ್ಯುತ್ ಕಡಿತವಾದ ತಕ್ಷಣವೇ ಸಂಬಂಧಿತ ಕಚೇರಿಯ ದೂರವಾಣಿ ಸಂಪರ್ಕವೂ ಸ್ಥಗಿತಗೊಳ್ಳುತ್ತಿರುವುದರಿಂದ ಸಾರ್ವಜನಿಕರಿಗೆ ಮಾಹಿತಿ ಪಡೆಯಲು ಸಾಧ್ಯವಾಗುತ್ತಿಲ್ಲ. ದೂರು ಸಲ್ಲಿಸಲು ಕರೆ ಮಾಡಿದರೆ ಸಂಪರ್ಕ ಸಿಗದೇ ಇರುವುದರಿಂದ ಜನರು ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ.
ಪ್ರತಿವರ್ಷ ಮಳೆಗಾಲ ಆರಂಭವಾದಾಗ ಇದೇ ಸಮಸ್ಯೆ ಮರುಕಳಿಸುತ್ತಿದ್ದು, ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಇಲಾಖೆ ವಿಫಲವಾಗಿದೆ ಎಂಬ ಟೀಕೆಗಳು ವ್ಯಕ್ತವಾಗಿವೆ. ಮಳೆಗಾಲದ ಅವಧಿಯಲ್ಲಿ ವಿದ್ಯುತ್ ಪೂರೈಕೆ ಸುಧಾರಿಸಲು ಹಾಗೂ ತುರ್ತು ಪರಿಸ್ಥಿತಿಗಳಿಗೆ ತಕ್ಷಣ ಸ್ಪಂದಿಸುವ ವ್ಯವಸ್ಥೆ ಕಲ್ಪಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಗೋಕರ್ಣ ಭಾಗದಲ್ಲಿ ನಿರಂತರವಾಗಿ ಉಂಟಾಗುತ್ತಿರುವ ವಿದ್ಯುತ್ ಸಮಸ್ಯೆಗೆ ಸಂಬಂಧಿಸಿದಂತೆ ಹೆಸ್ಕಾಂ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಂಡು ಸಾರ್ವಜನಿಕರ ಸಮಸ್ಯೆಯನ್ನ ನಿವಾರಿಸಬೇಕು ಎಂಬುದು ಸ್ಥಳೀಯರ ಒತ್ತಾಯವಾಗಿದೆ.
ಇದನ್ನೂ ಓದಿ/ಮತದಾರರ ಪಟ್ಟಿ ಪಾರದರ್ಶಕವಾಗಿರುವಂತೆ ಜಾಗರೂಕತೆ ವಹಿಸಿಃ ರೂಪಾಲಿ ನಾಯ್ಕ

