ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ : ಕಾರವಾರದಿಂದ ಕುಮಟಾ ಕಡೆಗೆ ಸಂಚರಿಸುತ್ತಿದ್ದ ರೈಲಿನಲ್ಲಿ ನಡೆದಿದೆ ಎನ್ನಲಾದ ಗಲಾಟೆಯ ವೇಳೆ ಯುವಕನೊಬ್ಬ ರೈಲಿನಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ಕುಮಟಾ ಸಮೀಪದ ನುಶಿಕೋಟೆ ರೈಲ್ವೆ ಮಾರ್ಗದಲ್ಲಿ ನಡೆದಿದೆ.
ಮೃತ ಯುವಕ ಭಟ್ಕಳ ತಾಲೂಕಿನ ತೆಂಗಿನಗುಂಡಿ ನಿವಾಸಿ ಯತೀಂದ್ರ ಲಕ್ಷಣ ಮೊಗೇರ (18) ಎಂದು ಗುರುತಿಸಲಾಗಿದೆ. ಯತೀಂದ್ರ ಕಾರವಾರ ಕಡೆಯಿಂದ ರೈಲ್ವೆಯಲ್ಲಿ ಭಟ್ಕಳ ಕಡೆಗೆ ತೆರಳುತ್ತಿದ್ದ ಎನ್ನಲಾಗಿದ್ದು,. ಈ ವೇಳೆ ರೈಲಿನಲ್ಲಿದ್ದ ಕೆಲವರ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದ್ದು, ಘಟನೆಯ ಸಂದರ್ಭದಲ್ಲಿ ಇನ್ನೊಂದು ಗುಂಪಿನವರು ಯತೀಂದ್ರನನ್ನು ರೈಲಿನಿಂದ ಕೆಳಗಡೆ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇದರಿಂದಾಗಿ ರೈಲಿನಿಂದ ಕೆಳಗೆ ಬಿದ್ದ ಪರಿಣಾಮ ಯತೀಂದ್ರನ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಮೃತದೇಹವನ್ನು ಕುಮಟಾ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು, ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ನಿಖರ ಕಾರಣ ಹಾಗೂ ಗಲಾಟೆಯ ಹಿನ್ನೆಲೆ ಕುರಿತು ತನಿಖೆ ಮುಂದುವರಿದಿದೆ. ಪೊಲೀಸರ ತನಿಖೆಯ ಬಳಿಕ ಘಟನೆಯ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
ಇದನ್ನೂ ಓದಿ/ಉತ್ತರಕನ್ನಡದ ಹಾಸ್ಟೆಲ್ನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಹೆರಿಗೆ : ನವಜಾತ ಶಿಶು ಸಾವು

