ಸುದ್ದಿಬಿಂದು ಬ್ಯೂರೋ ವರದಿ
ಶಿರಸಿ: ತಾಲೂಕಿನ ಶಿರಸಿ–ಸಿದ್ದಾಪುರ ಭಾಗದ ಹಲವು ಗ್ರಾಮಗಳಲ್ಲಿ ಅಕ್ರಮ ಸಾರಾಯಿ ಮಾರಾಟ ಮತ್ತು ಸೇವನೆಯಿಂದ ರೈತರು, ಕೂಲಿ ಕಾರ್ಮಿಕರು ಹಾಗೂ ಬಡ ಕುಟುಂಬಗಳ ಜನರು ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದು, ಕೆಲವರು ಪ್ರಾಣ ಕಳೆದುಕೊಂಡಿರುವುದಾಗಿ ಆರೋಪಿಸಿ, ಈ ಅಕ್ರಮ ಚಟುವಟಿಕೆಗಳನ್ನು ತಕ್ಷಣವೇ ಸಂಪೂರ್ಣವಾಗಿ ನಿಲ್ಲಿಸುವಂತೆ ಆಗ್ರಹಿಸಿ ಜೂನ್ 16ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಅನಂತ ಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಜೂನ್ 16, 2026ರಂದು ಬೆಳಿಗ್ಗೆ 11 ಗಂಟೆಗೆ ಶಿರಸಿ ಸಹಾಯಕ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಿ, ಬಳಿಕ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಗುವುದು.
ಸಂಘಟಕರು ನೀಡಿರುವ ಪ್ರಕಟಣೆಯಲ್ಲಿ, ಅಕ್ರಮ ಸಾರಾಯಿ ಸೇವನೆಯಿಂದ ಅನೇಕರು ಕಿಡ್ನಿ ಹಾಗೂ ಲಿವರ್ ಸಂಬಂಧಿತ ಕಾಯಿಲೆಗಳಿಗೆ ತುತ್ತಾಗುತ್ತಿದ್ದು, ಕೆಲವರು ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಇದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ಗಾಂಜಾ ಹಾಗೂ ಡ್ರಗ್ಸ್ ಜಾಲವೂ ವ್ಯಾಪಕವಾಗಿ ಹರಡುತ್ತಿದ್ದು, ಇವುಗಳನ್ನು ಪೂರೈಸುವ ಜಾಲವನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ತಾಲೂಕಿನ ಹಲವು ಶಾಲೆ ಹಾಗೂ ಕಾಲೇಜುಗಳ ಸುತ್ತಮುತ್ತ ಗಾಂಜಾ ಮತ್ತು ಡ್ರಗ್ಸ್ ಹಾವಳಿ ಹೆಚ್ಚಾಗಿದ್ದು, ವಿದ್ಯಾರ್ಥಿಗಳು ಇದರ ದುಷ್ಪರಿಣಾಮಕ್ಕೆ ಒಳಗಾಗುತ್ತಿರುವುದು ಪಾಲಕರಲ್ಲಿ ಆತಂಕ ಮೂಡಿಸಿದೆ ಎಂದು ತಿಳಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಹೆಚ್ಚುತ್ತಿರುವ ಇಂತಹ ಅನೈತಿಕ ಚಟುವಟಿಕೆಗಳನ್ನು ತಕ್ಷಣವೇ ನಿಯಂತ್ರಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರತಿಭಟನೆಯ ಮೂಲಕ ಸರ್ಕಾರ ಹಾಗೂ ಜಿಲ್ಲಾಡಳಿತವನ್ನು ಆಗ್ರಹಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರತಿಭಟನೆಯಲ್ಲಿ ಸಾರ್ವಜನಿಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.
ಇದನ್ನೂ ಓದಿ/ಹೈಟೆಕ್ ತಂತ್ರಕ್ಕೆ ಸಿಕ್ಕಿಬಿದ್ದ ಜೂಜುಕೋರರು; ಡ್ರೋಣ್ ಮೂಲಕ ಪತ್ತೆಯಾದ ಇಸ್ಪೀಟ್ ಅಡ್ಡೆ



