ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ತಾಲೂಕಿನ ಕಡ್ಲೆ ಬೀಚ್ನಲ್ಲಿ ಸಮುದ್ರದ ಅಲೆಗಳಿಗೆ ಕೊಚ್ಚಿಹೋಗಿ ನಾಪತ್ತೆಯಾಗಿದ್ದ ಪುಣೆ ಮೂಲದ ಯುವಕನ ಮೃತದೇಹ ಮಂಗಳವಾರ ಬೆಳಿಗ್ಗೆ ಪತ್ತೆಯಾಗಿದೆ.
ಮೃತ ಯುವಕ ಪುಣೆಯ ಐಟಿ ಉದ್ಯೋಗಿ ಜೀವನ್ ಭಟ್ಟರಾಯ್ (26) ಎಂದು ಗುರುತಿಸಲಾಗಿದೆ. ಅವರು ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ಸೋಮವಾರ ಬೆಳಿಗ್ಗೆ ಸಮುದ್ರ ಸ್ನಾನಕ್ಕೆ ಇಳಿದಿದ್ದರು. ಈ ವೇಳೆ ಪ್ರಬಲ ಅಲೆಗಳ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದರು. ಘಟನೆಯ ಬಳಿಕ ಕುಮಟಾ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಕರಾವಳಿ ಕಾವಲು ಪಡೆ ಸಿಬ್ಬಂದಿ ಜಂಟಿಯಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದರು. ಮಂಗಳವಾರ ಬೆಳಿಗ್ಗೆ ಕುಮಟಾದ ಕಡೇಕೊಡಿ ಸಮುದ್ರ ತೀರದಲ್ಲಿ ಕರಾವಳಿ ಕಾವಲು ಪಡೆ ಸಿಬ್ಬಂದಿಗೆ ಮೃತದೇಹ ಪತ್ತೆಯಾಗಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಳೆಗಾಲದಲ್ಲಿ ಸಮುದ್ರ ಪ್ರವೇಶ ಅಪಾಯಕಾರಿ
ಈ ದುರ್ಘಟನೆ ಮಳೆಗಾಲದಲ್ಲಿ ಸಮುದ್ರದ ಅಪಾಯವನ್ನು ಮತ್ತೊಮ್ಮೆ ನೆನಪಿಸಿದೆ. ಜಿಲ್ಲಾಡಳಿತ ಹಾಗೂ ಸಂಬಂಧಿತ ಇಲಾಖೆಗಳು ಪದೇ ಪದೇ ಎಚ್ಚರಿಕೆ ನೀಡುತ್ತಿದ್ದರೂ, ಕೆಲ ಪ್ರವಾಸಿಗರು ಸುರಕ್ಷತಾ ಸೂಚನೆಗಳನ್ನು ನಿರ್ಲಕ್ಷಿಸಿ ಸಮುದ್ರಕ್ಕೆ ಇಳಿಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.ಮಳೆಗಾಲದಲ್ಲಿ ಸಮುದ್ರದ ಅಲೆಗಳ ತೀವ್ರತೆ ಹಾಗೂ ಒಳಹರಿವು (ಕರಂಟ್) ಅತ್ಯಂತ ಅಪಾಯಕಾರಿಯಾಗಿರುತ್ತದೆ. ಹೊರಗಿನಿಂದ ಸಮುದ್ರ ಶಾಂತವಾಗಿ ಕಂಡರೂ ಕೆಲವೇ ಕ್ಷಣಗಳಲ್ಲಿ ಪರಿಸ್ಥಿತಿ ಬದಲಾಗುವ ಸಾಧ್ಯತೆ ಇರುವುದರಿಂದ ಹೆಚ್ಚಿನ ಎಚ್ಚರಿಕೆ ಅಗತ್ಯವಾಗಿದೆ.
ಪ್ರವಾಸಿಗರು ಎಚ್ಚರಿಕೆ ಫಲಕಗಳು, ಕೆಂಪು ಧ್ವಜಗಳು ಹಾಗೂ ಸ್ಥಳೀಯ ಆಡಳಿತದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸೆಲ್ಫಿ, ರೀಲ್ಸ್ ಅಥವಾ ಮನರಂಜನೆಗಾಗಿ ಜೀವವನ್ನು ಪಣಕ್ಕಿಡದೆ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು.
ಇದನ್ನೂ ಓದಿ/ಹೆಂಡ-ಗಾಂಜಾ ದಂಧೆ ವಿರುದ್ದ ಬೀದಿಗಿಳಿದ ಅನಂತಮೂರ್ತಿ ಹೆಗಡೆ

