ಸುದ್ದಿಬಿಂದು ಬ್ಯೂರೋ ವರದಿ
ಕೃಷಿ ಜಮೀನಿನ ಹಳೆ ಶರತ್ತು (Old Grant) ದಾಖಲೆ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಕಾಗಿನೆಲೆ ಕಂದಾಯ ನಿರೀಕ್ಷಕ ಆರ್.ಸಿ. ದ್ಯಾಮನಗೌಡ್ರು ಅವರನ್ನು ಲೋಕಾಯುಕ್ತ ( Lokayukta police) ಪೊಲೀಸರು ಬಲೆಗೆ ಬೀಳಿಸಿದ್ದಾರೆ.
ನಾಗರಾಜ್ ಕೆಂಪಲಿಂಗಣ್ಣನವರ್ ಹಾಗೂ ಸುಶೀಲಮ್ಮ ಶೇಖಪ್ಪ ಕೋಟಿಹಾಳ ಅವರ ಕೃಷಿ ಜಮೀನಿನ ಹಳೆ ಶರತ್ತು ದಾಖಲೆ ನೀಡಲು ಆರೋಪಿಯು 12 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಈ ಸಂಬಂಧ ದೂರು ದಾಖಲಾದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿದ್ದಾರೆ.
ಬ್ಯಾಡಗಿ ತಾಲೂಕಿನ ಕುಮ್ಮೂರು ಕ್ರಾಸ್ ಸಮೀಪ ಮುಂಗಡವಾಗಿ 5 ಸಾವಿರ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ರೆಡ್ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಮಧುಸೂಧನ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ದಾಳಿಯ ಬಳಿಕ ಆರೋಪಿಯ ಮನೆ ಹಾಗೂ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.
ಈ ಸಂಬಂಧ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ದಾಳಿಯ ಹಿನ್ನೆಲೆಯಲ್ಲಿ ಹೆಚ್ಚಿನ ದಾಖಲೆಗಳು ಮತ್ತು ಮಾಹಿತಿಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಇದನ್ನೂ ಓದಿ/ಬೈಕ್ಗೆ ಎಮ್ಮೆ ಡಿಕ್ಕಿ: ಅಂಚೆ ಇಲಾಖೆ ಸಿಬ್ಬಂದಿ ಉಮೇಶ್ ಭಟ್ ಸಾವು

