ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಂದು ಕೊಲೆ ಹಾಗೂ ಒಂಬತ್ತು ಮನೆಕಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಕಾರವಾರ ನಗರ ಪೊಲೀಸರು ಮಣಿಪಾಲದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿಯನ್ನು ವಿವೇಕ @ ವಿವೇಕಾನಂದ ತಂದೆ ದುರ್ಗಯ್ಯ ಖಾರ್ವಿ, ಮೂಲತಃ ಅಂಕೋಲಾ ತಾಲೂಕಿನ ಬೆಳಂಬಾರದ ನಿವಾಸಿಯಾಗಿದ್ದು ಹಾಲಿ ಹಾರವಾಡದಲ್ಲಿ ವಾಸವಾಗಿದ್ದವನಾಗಿ ಗುರುತಿಸಲಾಗಿದೆ. ಜಿಲ್ಲೆಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕಾರವಾರದಲ್ಲಿ ವಿಚಾರಣೆಯಲ್ಲಿರುವ ಎಸ್.ಸಿ. ನಂ.20/2018ರ ಕೊಲೆ ಪ್ರಕರಣ ಸೇರಿದಂತೆ ಕಾರವಾರ, ಅಂಕೋಲಾ, ಕುಮಟಾ ಹಾಗೂ ಗೋಕರ್ಣ ಪೊಲೀಸ್ ಠಾಣೆಗಳ ವ್ಯಾಪ್ತಿಯ ಒಟ್ಟು 10 ಪ್ರಕರಣಗಳಲ್ಲಿ ಈತ ಆರೋಪಿಯಾಗಿದ್ದನು. ಕಳೆದ ಸುಮಾರು ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ದೀಪನ್ ಎಂ., ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕೃಷ್ಣಮೂರ್ತಿ ಜಿ. ಹಾಗೂ ಕಾರವಾರ ಉಪವಿಭಾಗದ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಯ ಪತ್ತೆಗೆ ಕಾರ್ಯಾಚರಣೆ ನಡೆಸಲಾಯಿತು. ಮೊಬೈಲ್ ತಾಂತ್ರಿಕ ಮಾಹಿತಿ ಸೇರಿದಂತೆ ವಿವಿಧ ಸುಳಿವುಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ತಂಡವು ಜೂನ್ 15ರಂದು ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಆರೋಪಿಯನ್ನು ಬಂಧಿಸಿಲಾಗಿದೆ.
ಬಳಿಕ ಆರೋಪಿಯನ್ನು ಜೂನ್ 16ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಕಾರವಾರ ನಗರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸಿಸಿದ್ದಾರೆ.
ಇದನ್ನೂ ಓದಿ/ಬಿಡದಿ ಟೌನ್ಶಿಪ್ ಯೋಜನೆ ಕೈಬಿಡಲು ಆಗ್ರಹಿಸಿ ಉತ್ತರ ಕನ್ನಡ ಜೆಡಿಎಸ್ನಿಂದ ಮನವಿ



