ಸುದ್ದಿಬಿಂದು ಬ್ಯೂರೋ ವರದಿ
ಶಿರಸಿ: ದನ-ಕರುಗಳನ್ನು ರಕ್ಷಿಸುವ ವೇಳೆ ಕೆರೆಯಲ್ಲಿ ಮುಳುಗಿ ಅಕಾಲಿಕವಾಗಿ ಮೃತಪಟ್ಟ ಇಸಳೂರು ಗ್ರಾಮದ ಯುವಕನ ಮನೆಗೆ ಶಿರಸಿ–ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅವರು ಇಂದು ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಇತ್ತೀಚೆಗೆ ಗ್ರಾಮದ ಕೆರೆಯಲ್ಲಿ ಸಿಲುಕಿದ್ದ ಜಾನುವಾರುಗಳನ್ನು ರಕ್ಷಿಸಲು ಯುವಕ ನೀರಿಗೆ ಇಳಿದಿದ್ದ ವೇಳೆ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದನು. ಈ ದುರ್ಘಟನೆ ಗ್ರಾಮಸ್ಥರಲ್ಲಿ ತೀವ್ರ ದುಃಖವನ್ನುಂಟು ಮಾಡಿತ್ತು. ಮೃತ ಯುವಕನ ಮನೆಗೆ ಭೇಟಿ ನೀಡಿದ ಶಾಸಕ ಭೀಮಣ್ಣ ಟಿ. ನಾಯ್ಕ ಅವರು ಹೆತ್ತವರು ಹಾಗೂ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿ ಧೈರ್ಯ ತುಂಬಿದರು. ದುಃಖದ ಈ ಸಂದರ್ಭದಲ್ಲಿ ಕುಟುಂಬಕ್ಕೆ ನೆರವಾಗುವ ಉದ್ದೇಶದಿಂದ ತಮ್ಮ ವೈಯಕ್ತಿಕ ನಿಧಿಯಿಂದ ಆರ್ಥಿಕ ಸಹಾಯಧನವನ್ನು ಹಸ್ತಾಂತರಿಸಿದರು.

ಈ ವೇಳೆ ಮಾತನಾಡಿದ ಶಾಸಕ ಭೀಮಣ್ಣ ಟಿ. ನಾಯ್ಕ ಅವರು, “ಮೂಕ ಪ್ರಾಣಿಗಳ ಜೀವ ಉಳಿಸುವ ಪ್ರಯತ್ನದಲ್ಲಿ ತನ್ನದೇ ಜೀವವನ್ನು ತ್ಯಾಗ ಮಾಡಿದ ಯುವಕನ ಮಾನವೀಯತೆ, ಜೀವಕಾರುಣ್ಯ ಮತ್ತು ಧೈರ್ಯ ನಿಜಕ್ಕೂ ಶ್ಲಾಘನೀಯ. ಆತನ ಅಗಲಿಕೆ ಕುಟುಂಬಕ್ಕೆ ಮಾತ್ರವಲ್ಲ, ಇಡೀ ಗ್ರಾಮಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತನು ಮೃತನ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ” ಎಂದು ಸಂತಾಪ ಸೂಚಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರು, ಹಿರಿಯರು ಹಾಗೂ ವಿವಿಧ ಪಕ್ಷಗಳ ಮುಖಂಡರು ಉಪಸ್ಥಿತರಿದ್ದು, ಮೃತ ಯುವಕನ ಕುಟುಂಬಕ್ಕೆ ಸಾಂತ್ವನ ವ್ಯಕ್ತಪಡಿಸಿದರು.

ಇದನ್ನೂ ಓದಿ……