ಸುದ್ದಿಬಿಂದು ಬ್ಯೂರೋ ವರದಿ /ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿ ಶಿಕ್ಷಕ ಅಬ್ಬು ತಲಹ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಜೂನ್ 9ರಂದು ಶಾಲೆಯ ವಿದ್ಯಾರ್ಥಿ ಗೋಕುಲ್ ಗೌಡ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಆರಂಭದಲ್ಲಿ ಆತ್ಮಹತ್ಯೆ ಪ್ರಕರಣವಾಗಿ ದಾಖಲಾಗಿದ್ದ ಈ ಪ್ರಕರಣದಲ್ಲಿ, ಮೃತ ವಿದ್ಯಾರ್ಥಿಯ ತಾಯಿ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಮರು ತನಿಖೆ ನಡೆಸಿದ್ದರು.
ತನಿಖೆ ವೇಳೆ ಹಿಂದಿ ಶಿಕ್ಷಕ ಅಬ್ಬು ತಲಹ ಅವರು ವಿದ್ಯಾರ್ಥಿ ಗೋಕುಲ್ ಗೌಡನ ಮೇಲೆ ಹಲ್ಲೆ ನಡೆಸಿದ್ದ ವಿಚಾರ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಹೊಸ ತಿರುವು ದೊರೆತಿದ್ದು, ಶಿಕ್ಷಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಪ್ರಕರಣದ ತನಿಖೆಯನ್ನು ಮೂವರು ಪೊಲೀಸ್ ಅಧಿಕಾರಿಗಳ ವಿಶೇಷ ತಂಡ ನಡೆಸಿದ್ದು, ಲಭ್ಯವಾದ ಸಾಕ್ಷ್ಯಾಧಾರಗಳ ಆಧಾರದಲ್ಲಿ ಹಿಂದಿ ಶಿಕ್ಷಕ ಅಬ್ಬು ತಲಹ ಅವರನ್ನು ಕಾರವಾರ ಉಪವಿಭಾಗದ ಡಿಎಸ್ಪಿ ಗಿರೀಶ ಅವರ ನೇತೃತ್ವದಲ್ಲಿ ಬಂಧಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದು, ತನಿಖೆಯ ಬಳಿಕ ಇನ್ನಷ್ಟು ಮಹತ್ವದ ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.
ಇದನ್ನೂ ಓದಿ/ವನ್ಯಜೀವಿಗೂ ಕಿರುಕುಳ! ದಾಂಡೇಲಿಯಲ್ಲಿ ಕರಡಿ ಬೆನ್ನಟ್ಟಿದ ಪ್ರವಾಸಿಗರ ವಿರುದ್ಧ ಆಕ್ರೋಶ

