ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಕಸ ಸಂಗ್ರಹ ಮತ್ತು ವಿಲೇವಾರಿಗಾಗಿ ಅಗತ್ಯ ವಾಹನಗಳು ಲಭ್ಯವಿದ್ದರೂ ಅವುಗಳನ್ನು ಸಮರ್ಪಕವಾಗಿ ಬಳಸದೇ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದು ಆರೋಪಿಸಿ, ಚಿತ್ತಾಕುಲ ಗ್ರಾಮ ಪಂಚಾಯಿತಿಯ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.ಸಮಸ್ಯೆ ಶೀಘ್ರ ಪರಿಹರಿಸುವಂತೆ ಆಗ್ರಹಿಸಿ ಜುಲೈ 2ರಂದು ಸಂಜೆ 6 ಗಂಟೆಯವರೆಗೆ ಸದಾಶಿವಗಡ ಬಂದ್‌ಗೆ ಕರೆ ನೀಡಲಾಗಿದೆ ಎಂದು ಜಿಲ್ಲಾ ಅಧ್ಯಕ್ಷ ಅಕ್ಷಯ ಎಸ್.ಬಿ ತಿಳಿಸಿದ್ದಾರೆ.

ಕಾರವಾರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ತಾಕುಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಒಂದು ವರ್ಷದಿಂದ ಕಸ ವಿಲೇವಾರಿ ಸಮರ್ಪಕವಾಗಿ ನಡೆಯದೇ ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.
ಮನೆಮನೆಗಳಿಂದ ಕಸ ಸಂಗ್ರಹಿಸುವ ವ್ಯವಸ್ಥೆ ಸ್ಥಗಿತಗೊಂಡಿರುವ ಕಾರಣ, ಜನರು ಅನಿವಾರ್ಯವಾಗಿ ರಸ್ತೆ ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಪರಿಸರ ಮಾಲಿನ್ಯದ ಜೊತೆಗೆ ಆರೋಗ್ಯ ಸಮಸ್ಯೆಗಳೂ ಹೆಚ್ಚಾಗುತ್ತಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಕೆಲವೆಡೆ ವೈದ್ಯಕೀಯ ತ್ಯಾಜ್ಯ, ಬಳಸಿದ ಸಿರಿಂಜ್‌ಗಳು, ಡೈಪರ್‌ಗಳು ಸೇರಿದಂತೆ ಅಪಾಯಕಾರಿ ತ್ಯಾಜ್ಯಗಳು ಬಯಲಲ್ಲಿ ಬಿದ್ದಿರುವುದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ ಎಂದು ಹೇಳಿದರು.ಕಸ ವಿಲೇವಾರಿಗಾಗಿ ಸರ್ಕಾರದಿಂದ ಎರಡು ಆಧುನಿಕ ವಾಹನಗಳನ್ನು ಒದಗಿಸಲಾಗಿದ್ದರೂ ಅವುಗಳನ್ನು ಸೇವೆಗೆ ಬಳಸದೇ ನಿಲ್ಲಿಸಲಾಗಿದೆ ಎಂದು ಆರೋಪಿಸಿದ ಅಕ್ಷಯ, ಸಾರ್ವಜನಿಕರ ಅನುಕೂಲಕ್ಕಾಗಿ ನೀಡಿದ ವಾಹನಗಳು ಕಾರ್ಯಾಚರಣೆಗೆ ಬಾರದಿರುವುದು ಪಂಚಾಯಿತಿಯ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಟೀಕಿಸಿದರು.

ಈ ಸಮಸ್ಯೆ ಕುರಿತು ಹಲವು ಬಾರಿ ಪಂಚಾಯಿತಿ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ದೂರಿದರು. ಅಲ್ಲದೆ, ಸ್ಥಳೀಯ ಜನಪ್ರತಿನಿಧಿಗಳೂ ಸಮಸ್ಯೆ ಪರಿಹಾರದಲ್ಲಿ ಅಗತ್ಯ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದರು.

ಕಸ ವಿಲೇವಾರಿ ಸಮಸ್ಯೆಗೆ ತಕ್ಷಣ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಜುಲೈ 2ರಂದು ಸದಾಶಿವಗಡ ಬಂದ್‌ಗೆ ಕರೆ ನೀಡಲಾಗಿದೆ. ವ್ಯಾಪಾರಿಗಳು, ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಬಂದ್‌ಗೆ ಬೆಂಬಲ ನೀಡುವಂತೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಹೇಶ್ ಬಾಂದೇಕರ, ಸಂದೀಪ್ ಕಲ್ಗುಟ್ಕರ್, ಅರುಣ ನಾಯ್ಕ, ಹಸನ್ ಶೇಖ್, ಗಜಾನನ ಕದಂ, ಅಶೋಕ ರಾಣೆ, ರೂಪೇಶ್ ನಾಯ್ಕ, ಅಮೀನ್ ನದಾಫ್, ಕೃಷ್ಣಾ ಬಂಟ, ಮಾರುತಿ ರಾಯ್ಕರ್ ಸೇರಿದಂತೆ ಹಲವು ಕರವೇ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ/ದೇಶವನ್ನು ಪೋಲಿಯೋ ಮುಕ್ತವಾಗಿಡಲು ಪೋಷಕರು ಕೈಜೋಡಿಸಿ: ಶಾಸಕ ಭೀಮಣ್ಣ ಟಿ. ನಾಯ್ಕ