ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 30 ಮಧ್ಯಾಹ್ನ 1 ಗಂಟೆಯಿಂದ ಜುಲೈ 2 ಬೆಳಿಗ್ಗೆ 8.30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಈ ಅವಧಿಯಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಜೊತೆಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಸಾರ್ವಜನಿಕರಿಗೆ ಕಟ್ಟೆಚ್ಚರ ವಹಿಸುವಂತೆ ಮನವಿ ಮಾಡಿದೆ.ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮುಂಗಾರು ಪೂರ್ವ ಸಿದ್ಧತೆಗಳನ್ನು ಈಗಾಗಲೇ ಕೈಗೊಳ್ಳಲಾಗಿದ್ದು, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ (Emergency Operation Centre) ಅನ್ನು 24×7 ಕಾರ್ಯನಿರ್ವಹಿಸುವಂತೆ ತೆರೆಯಲಾಗಿದೆ. ಹವಾಮಾನ ಪರಿಸ್ಥಿತಿಯ ಕುರಿತ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಅಧಿಕೃತ ಸಾಮಾಜಿಕ ಜಾಲತಾಣಗಳು ಹಾಗೂ ಸ್ಥಳೀಯ ಮಾಧ್ಯಮಗಳ ಮೂಲಕ ಸಾರ್ವಜನಿಕರು ನಿರಂತರವಾಗಿ ಗಮನಿಸುವಂತೆ ಸೂಚಿಸಲಾಗಿದೆ.
ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಸೂಚನೆ
ಆರೆಂಜ್ ಅಲರ್ಟ್ ಜಾರಿಯಲ್ಲಿರುವ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಬಾರದು ಎಂದು ಜಿಲ್ಲಾಡಳಿತ ಸ್ಪಷ್ಟ ಸೂಚನೆ ನೀಡಿದೆ. ಸಮುದ್ರದ ಅಲೆಗಳ ಅಬ್ಬರ ಹಾಗೂ ಬಿರುಗಾಳಿಯ ಸಾಧ್ಯತೆ ಇರುವುದರಿಂದ ಈ ಎಚ್ಚರಿಕೆ ನೀಡಲಾಗಿದೆ.
ನದಿ, ಕೆರೆ ಹಾಗೂ ಸಮುದ್ರ ತೀರಗಳಿಂದ ದೂರವಿರಿ
ಸಾರ್ವಜನಿಕರು ಹಾಗೂ ವಿಶೇಷವಾಗಿ ಮಕ್ಕಳು ನದಿ, ಕೆರೆ, ತಗ್ಗು ಪ್ರದೇಶ, ಹೊಳೆ ಮತ್ತು ಸಮುದ್ರ ತೀರಗಳಿಗೆ ತೆರಳದಂತೆ ಪಾಲಕರು ಜಾಗ್ರತೆ ವಹಿಸಬೇಕು. ಪ್ರವಾಸಿಗರು ಸಹ ನೀರಿನ ಪ್ರದೇಶಗಳಿಗೆ ಇಳಿಯದಂತೆ ಸೂಚಿಸಲಾಗಿದೆ.
ರೈತರು ಹಾಗೂ ಕಾರ್ಮಿಕರಿಗೆ ಮುನ್ನೆಚ್ಚರಿಕೆ
ಗುಡುಗು, ಸಿಡಿಲು ಹಾಗೂ ಭಾರೀ ಮಳೆಯ ಸಂದರ್ಭಗಳಲ್ಲಿ ರೈತರು ಕೃಷಿ ಚಟುವಟಿಕೆಗಳಿಂದ ದೂರವಿರಬೇಕು. ಸಾರ್ವಜನಿಕರು ಹಾಗೂ ಕಾರ್ಮಿಕರು ಮಳೆಯ ಸಮಯದಲ್ಲಿ ಹೊರಗಡೆ ತಿರುಗಾಡದೆ ಸುರಕ್ಷಿತ ಕಟ್ಟಡಗಳಲ್ಲಿ ಆಶ್ರಯ ಪಡೆಯಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.
ವಿದ್ಯುತ್ ಕಂಬ, ಮರಗಳ ಬಳಿ ಹೋಗದಿರಿ
ಮಳೆ ಹಾಗೂ ಬಿರುಗಾಳಿಯ ಸಮಯದಲ್ಲಿ ಮಕ್ಕಳು ಮತ್ತು ಸಾರ್ವಜನಿಕರು ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳು ಹಾಗೂ ತುಂಡಾಗಿ ಬಿದ್ದಿರುವ ವಿದ್ಯುತ್ ತಂತಿಗಳಿಂದ ದೂರವಿರಬೇಕು. ಹಳೆಯ ಅಥವಾ ಶಿಥಿಲಗೊಂಡ ಕಟ್ಟಡಗಳು, ಕಂಪೌಂಡ್ ಗೋಡೆಗಳು ಹಾಗೂ ಮರಗಳ ಕೆಳಗೆ ನಿಲ್ಲಬಾರದು ಎಂದು ಸೂಚಿಸಲಾಗಿದೆ.
ಅಪಾಯಕಾರಿ ಪ್ರದೇಶದಲ್ಲಿದ್ದರೆ ಸುರಕ್ಷಿತ ಸ್ಥಳಕ್ಕೆ ತೆರಳಿ
ತಗ್ಗು ಪ್ರದೇಶಗಳು ಅಥವಾ ಮಳೆಯಿಂದ ಅಪಾಯ ಉಂಟಾಗುವ ಸ್ಥಳಗಳಲ್ಲಿ ವಾಸಿಸುವವರು ಹಾಗೂ ಶಿಥಿಲಗೊಂಡ ಮನೆಗಳು ಅಥವಾ ಕಂಪೌಂಡ್ ಗೋಡೆಗಳ ಸಮೀಪ ವಾಸಿಸುವವರು ಅಗತ್ಯವಿದ್ದರೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಬೇಕು. ಸಂಬಂಧಿಸಿದ ತಹಶೀಲ್ದಾರರು ಗುರುತಿಸಿರುವ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆಯುವಂತೆ ಜಿಲ್ಲಾಡಳಿತ ಸೂಚಿಸಿದೆ.
ಗ್ರಾಮೀಣ ಪ್ರದೇಶಗಳಲ್ಲಿ ವಿಶೇಷ ಎಚ್ಚರಿಕೆ
ಗ್ರಾಮೀಣ ಭಾಗಗಳಲ್ಲಿರುವ ಕಾಲುಸಂಕ, ಕಿರು ಸೇತುವೆ ಹಾಗೂ ನೀರು ಹರಿಯುವ ಪ್ರದೇಶಗಳನ್ನು ದಾಟುವಾಗ ಸಾರ್ವಜನಿಕರು ಅತ್ಯಂತ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಲಾಗಿದೆ.
ತುರ್ತು ಸಂದರ್ಭದಲ್ಲಿ ಸಂಪರ್ಕಿಸಿ. ಶಿಥಿಲಗೊಂಡ ಕಟ್ಟಡಗಳು, ಕುಸಿಯುವ ಹಂತದಲ್ಲಿರುವ ಕಂಪೌಂಡ್ ಗೋಡೆಗಳು ಅಥವಾ ಯಾವುದೇ ವಿಪತ್ತು ಸಂಬಂಧಿತ ಅಪಾಯ ಕಂಡುಬಂದರೆ ತಕ್ಷಣ ಜಿಲ್ಲಾ ವಿಪತ್ತು ನಿರ್ವಹಣಾ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ.
ತುರ್ತು ಸಹಾಯವಾಣಿ ಸಂಖ್ಯೆ:
08382-229857
9483511015
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಸಾರ್ವಜನಿಕರು ಹವಾಮಾನ ಇಲಾಖೆಯ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಅನಗತ್ಯವಾಗಿ ಹೊರಗೆ ಸಂಚರಿಸದೇ ಸುರಕ್ಷತೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದ್ದಾರೆ.

