ಸುದ್ದಿಬಿಂದು ಬ್ಯೂರೋ ವರದಿ

ಬೀಳಗಿ:  ಓವರ್‌ಟೇಕ್ ಮಾಡುವ ವೇಳೆ ಕಾರು ಟಿಪ್ಪರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ತಪ್ಪಿದ ಟಿಪ್ಪರ್ ಕೊರ್ತಿ–ಕೋಲ್ಹಾರ ಸೇತುವೆ ಮೇಲಿಂದ ಕೃಷ್ಣಾ ನದಿಗೆ ಉರುಳಿದ ಭೀಕರ ಘಟನೆ ಶುಕ್ರವಾರ ನಡೆದಿದೆ.

ಅಪಘಾತದಲ್ಲಿ ಟಿಪ್ಪರ್ ಚಾಲಕ ಸಂತೋಷ ಕೊಟಿ ಅವರು ನದಿಯಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಅವರಿಗಾಗಿ ಅಗ್ನಿಶಾಮಕ ದಳ, ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಟಿಪ್ಪರ್‌ನಲ್ಲಿದ್ದ ಕ್ಲೀನರ್ ಸಂಜು ಮಲಪ್ಪ ಮೊಲಗೆ ಅವರನ್ನು ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದು, ಅವರಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಗುರುನಾಥ ರೇಸ್ಮಿ ಮತ್ತು ಅವರ ಪತ್ನಿ ಜ್ಯೋತಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಹಾಗೂ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿದೆ. ನದಿಯಲ್ಲಿ ಚಾಲಕರಿಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಅಪಘಾತದ ನಿಖರ ಕಾರಣ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ಅಪಘಾತದಿಂದ ಕೆಲಕಾಲ ಸೇತುವೆ ಮೇಲೆ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಸ್ಥಳದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.

ಇದನ್ನೂ ಓದಿ: ಮಳವಳ್ಳಿ ಸರ್ಕಾರಿ ಶಾಲಾ ಶಿಕ್ಷಕರ ಗಂಭೀರ ಆರೋಪ ಕ್ರಮಕ್ಕೆ: ಗ್ರಾಮಸ್ಥರ ಒತ್ತಾಯ