ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ ಇಂದಿನಿಂದ ಜುಲೈ 9ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಅವಧಿಯಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಹಾಗೂ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಜಿಲ್ಲೆಯಾದ್ಯಂತ ಅಗತ್ಯ ಮುಂಗಾರು ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 24×7 ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರು ಹವಾಮಾನ ಮಾಹಿತಿ ಹಾಗೂ ತುರ್ತು ಪರಿಸ್ಥಿತಿಗಳ ಬಗ್ಗೆ ನಿರಂತರವಾಗಿ ಗಮನಹರಿಸುವಂತೆ ಸೂಚಿಸಲಾಗಿದೆ.

ಭಾರೀ ಗಾಳಿ ಮತ್ತು ಮಳೆಯ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ತೆರಳಬಾರದು ಹಾಗೂ ಈಗಾಗಲೇ ಸಮುದ್ರದಲ್ಲಿರುವವರು ತಕ್ಷಣ ಸುರಕ್ಷಿತ ಬಂದರುಗಳಿಗೆ ಮರಳುವಂತೆ ಸೂಚಿಸಲಾಗಿದೆ. ಪ್ರವಾಸಿಗರು ಹಾಗೂ ಸಾರ್ವಜನಿಕರು ಸಮುದ್ರತೀರ, ನದಿತೀರ, ಜಲಾಶಯ ಮತ್ತು ಅಪಾಯ ಸಂಭವಿಸಬಹುದಾದ ಪ್ರದೇಶಗಳಿಗೆ ತೆರಳದಂತೆ ಮನವಿ ಮನಿಲ್ಲಬಾರದು ಭಾರೀ ಗಾಳಿಯ ವೇಳೆ ಮರಗಳು, ಮರದ ಕೊಂಬೆಗಳು, ವಿದ್ಯುತ್ ಕಂಬಗಳು, ಜಾಹೀರಾತು ಫಲಕಗಳು ಹಾಗೂ ಶಿಥಿಲಾವಸ್ಥೆಯ ಕಟ್ಟಡಗಳ ಸಮೀಪ ನಿಲ್ಲಬಾರದು ಅಥವಾ ವಾಹನಗಳನ್ನು ನಿಲ್ಲಿಸಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಅಗತ್ಯವಿಲ್ಲದಿದ್ದರೆ ಮನೆಯಿಂದ ಹೊರಗೆ ಸಂಚರಿಸದಂತೆ ಹಾಗೂ ತುರ್ತು ಸಂದರ್ಭಗಳಲ್ಲಿ ಮಾತ್ರ ಹೊರಹೋಗಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ.

ತುಂಡಾದ ವಿದ್ಯುತ್ ತಂತಿಗಳು, ವಾಲಿರುವ ವಿದ್ಯುತ್ ಕಂಬಗಳು ಅಥವಾ ಶಿಥಿಲಾವಸ್ಥೆಯ ಕಟ್ಟಡಗಳು ಕಂಡುಬಂದರೆ ತಕ್ಷಣ ಸಂಬಂಧಿಸಿದ ಇಲಾಖೆ ಅಥವಾ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರಕ್ಕೆ ಮಾಹಿತಿ ನೀಡುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ತುರ್ತು ಸಹಾಯಕ್ಕಾಗಿ 24×7 ಕಂಟ್ರೋಲ್ ರೂಂ – 08382-229857 ಹಾಗೂ ವಾಟ್ಸ್ಆ್ಯಪ್ ಸಂಖ್ಯೆ – 9483511015 ಅನ್ನು ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ/ಪ್ರಕೃತಿ ರೌದ್ರಾವತಾರ; ಸರ್ಕಾರಿ ಕಚೇರಿ ಮೇಲೆ ಬೃಹತ್ ಮರ!