ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಐಆರ್.ಬಿ ಕಂಪನಿಯ ಅವೈಜ್ಙಾನಿಕ ಕಾಮಗಾರಿಯಿಂದಾಗಿ ಕಾರ ಪಲ್ಟಿಯಾಗಿ ಕಾರಿನಲ್ಲಿ ಇದ್ದ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಬಿಣಗಾ ಬಳಿ ನಡೆದಿದೆ.

ಐಟಿಐ ಕಾಲೇಜು ಎದುರು ಹೆದ್ದಾರಿ ಕಾಮಗಾರಿ ಅಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಆ ಭಾಗದಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದ್ದು, ಆ ರಸ್ತೆಯಲ್ಲಿ ಜಲ್ಲಿ ರಾಶಿ ಹಾಕಿ ವಾಹನ ಸಂಚಾರ ಮಾಡದಂತೆ ಬಂದ ಮಾಡಲಾಗಿದೆ. ಆದರೆ ಆ ಭಾಗದಲ್ಲಿ ರಸ್ತೆ ದೀಪವನ್ನು ಸಹ ಹಾಕದೆ ಬಿಟ್ಟಿರುವುದರಿಂದ ವಾಹನ ಸವಾರರಿಗೆ ಸರಿಯಾಗಿ ಕಾಣದ ಕಾರಣ ಅಪಘಾತಕ್ಕೆ ಕಾರಣವಾಗುತ್ತಿದೆ.

ಕಾರವಾರದಿಂದ ದಾವಣಗೆರೆ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ವೈದ್ಯರು ಕತ್ತಲಿನ ಕಾರಣದಿಂದ ರಸ್ತೆಗೆ ಹಾಕಿದ್ದ ಕಲ್ಲುಗಳನ್ನು ಗಮನಿಸದೇ ಅದರ ಮೇಲೆ ಕಾರು ಚಲಾಯಿಸಿದ್ದಾರೆ. ಪರಿಣಾಮ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ.ಕಾರಿನಲ್ಲಿದ್ದ ಎಲ್ಲರೂ ಸುರಕ್ಷಿತವಾಗಿದ್ದಾರೆ. ಘಟನೆಗೆ ಕುರಿತು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೂಕ್ತ ಎಚ್ಚರಿಕೆ ಫಲಕಗಳು ಹಾಗೂ ಸುರಕ್ಷತಾ ಬ್ಯಾರಿಕೇಡ್‌ಗಳನ್ನು ಅಳವಡಿಸದೇ ನಿರ್ಲಕ್ಷ್ಯ ವಹಿಸಿರುವುದೇ ಈ ಅಪಘಾತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.

ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಎಚ್ಚರಿಕೆ ಫಲಕಗಳನ್ನು ಅಳವಡಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ/ಕೊಂಕಣ ರೈಲ್ವೆ ಮಾರ್ಗದಲ್ಲಿಚಲಿಸುತ್ತಿದ್ದ ರೈಲ್ಬೆಗೆ ತಲೆಕೊಟ್ಟು ವ್ಯಕ್ತಿ ಓರ್ವ ಸಾವು