ಸುದ್ದಿಬಿಂದು ಬ್ಯೂರೋ ವರದಿ
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.

ಧಾರವಾಡದಿಂದ ಉತ್ತರ ಕನ್ನಡ ಪ್ರವಾಸಕ್ಕಾಗಿ ಒಟ್ಟು ಒಂಬತ್ತು ಮಂದಿ ಸ್ನೇಹಿತರು ತೂಪಾನ್ ಕ್ರೂಸರ್ ವಾಹನದಲ್ಲಿ ಅಂಕೋಲಾ ಕಡೆಗೆ ಪ್ರಯಾಣಿಸುತ್ತಿದ್ದರೆ. ಗೋಕರ್ಣ, ಮುರುಡೇಶ್ಬರ ಪ್ರವಾಸ ಮಾಡಿ ಬಳಿಕ ಧರ್ಮಸ್ಥಳ ಹಾಗೂ ಚಿಕ್ಕಮಂಗಳೂರಿಗೆ ಪ್ರವಾಸಕೈಗೊಂಡಿದ್ದರು ಈ ವೇಳೆ ಯಲ್ಲಾಪುರ ಸಮೀಪದ ಆರತಿಬೈಲ್ ಘಟ್ಟದಲ್ಲಿ ಎದುರಿನಿಂದ ಬಂದ ಲಾರಿಗೆ ತೂಪಾನ್ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿತು.
ಅಪಘಾತದಲ್ಲಿ ವಾಹನ ಚಾಲಕ ಸಂಜಯ್ ಅಂಗಡಿ, ಅಭಿಷೇಕ ಈಶ್ವರ, ಅಭಿಷೇಕ ಮಡಬಾವಿ, ಬಸವರಾಜ, ಅಕ್ಷಯ್, ಮಂಜುನಾಥ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಸಚಿನ್ ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನಿಬ್ಬರು ಗಾಯಾಳುಗಳು ಕಿಮ್ಸ್ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮೃತರೆಲ್ಲರೂ ಧಾರವಾಡ ಮೂಲದವರಾಗಿದ್ದು, ವಿವಿಧ ಖಾಸಗಿ ಕಂಪನಿಗಳಲ್ಲಿ ಡೆಲಿವರಿ ಬಾಯ್ಗಳಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಶಾಸಕ ಶಿವರಾಮ ಹೆಬ್ಬಾರ್ ಭೇಟಿ
ಘಟನೆಯ ಮಾಹಿತಿ ತಿಳಿದ ತಕ್ಷಣ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಮೃತರ ಕುಟುಂಬಗಳ ದುಃಖದಲ್ಲಿ ತಾವು ಭಾಗಿಯಾಗಿರುವುದಾಗಿ ತಿಳಿಸಿದ ಅವರು, ಈ ದುರಂತದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಅಧಿಕಾರಿಗಳಿಂದ ಪರಿಶೀಲನೆ
ಅಪಘಾತ ನಡೆದ ಸ್ಥಳಕ್ಕೆ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್, ಜಿಲ್ಲಾ ಪಂಚಾಯತ್ ಸಿಇಒ ದಿಲೀಶ್, ಡಿವೈಎಸ್ಪಿ ಗೀತಾ ಪಾಟೀಲ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
.
ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.
ಇದನ್ನೂ ಓದಿ/ Breaking ಯಲ್ಲಾಪುರ ಘಟ್ಟದಲ್ಲಿ ಭೀಕರ ಅಪಘಾತ: ಲಾರಿ–ಕ್ರೂಸರ್ ಡಿಕ್ಕಿ, ಏಳು ಮಂದಿ ದುರ್ಮರಣ

