ಸುದ್ದಿಬಿಂದು ಬ್ಯೂರೋ ವರದಿ
ದಾಂಡೇಲಿ: ಮದ್ಯದ ಅಮಲಿನಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯದಲ್ಲಿದ್ದ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನನ್ನು ದಾಂಡೇಲಿ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ನಗರದ ಸೋಮಾನಿ ವೃತ್ತದಲ್ಲಿ ನಡೆದಿದೆ.
ದಿನೇಶ್ ಎಂಬ ಯುವಕ ಮದ್ಯಪಾನ ಮಾಡಿದ ಸ್ಥಿತಿಯಲ್ಲಿ ಸೈಲೆನ್ಸರ್ ಇಲ್ಲದ ಬೈಕ್ ಚಲಾಯಿಸುತ್ತಾ ಜೋರಾಗಿ ಶಬ್ದ ಮಾಡುತ್ತಿದ್ದ ಎನ್ನಲಾಗಿದೆ. ಇದನ್ನು ಗಮನಿಸಿದ ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಲು ಮುಂದಾಗಿದ್ದರು. ಈ ವೇಳೆ ಆತ ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದು,ಅವಾಚ್ಯವಾಗಿ ಮಾತನಾಡುವುದರ ಜೊತೆಗೆ ಬೆದರಿಕೆ ಕೂಡ ಹಾಕಿದ್ದ.
ಪೊಲೀಸರು ಮದ್ಯಪಾನ ಮಾಡಿ ವಾಹನ ಚಲಾಯಿಸುವುದು ಕಾನೂನುಬಾಹಿರ ಎಂದು ಮನವರಿಕೆ ಮಾಡಲು ಪ್ರಯತ್ನಿಸಿದರೂ, ಆತ ಸಹಕರಿಸದೇ ಉದ್ಧಟತನದಿಂದ ವರ್ತಿಸಿದ್ದಾನೆ. ಪರಿಸ್ಥಿತಿ ಉದ್ವಿಗ್ನಗೊಂಡಾಗ ಸಾರ್ವಜನಿಕರೂ ಆತನನ್ನು ಸಮಾಧಾನಪಡಿಸಲು ಯತ್ನಿಸಿದರೂ ಪ್ರಯೋಜನವಾಗಿರಲಿಲ್ಲ. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಸೋಮಾನಿ ವೃತ್ತದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು,
ವಿಷಯ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಪಿಎಸ್ಐ ಅಮೀನ್ ಅತ್ತಾರ್ ಪರಿಸ್ಥಿತಿಯನ್ನು ನಿಯಂತ್ರಿಸಿ, ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಠಾಣೆಯಲ್ಲಿಯೂ ಯುವಕ ಸಹಕರಿಸದೇ ಗಲಾಟೆ ಮಾಡಿದ್ದಾನೆ ಎನ್ನಲಾಗಿದೆ. ಈ ಸಂಬಂಧ ದಾಂಡೇಲಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ/ಅಸಭ್ಯ ಸಂದೇಶ ಆರೋಪ: ದಾಂಡೇಲಿ ಪೊಲೀಸ್ ಕಾನ್ಸ್ಟೇಬಲ್ ಮಹಾಂತೇಶ್ ಅಮಾನತು

