ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಕುರಿತು ಮತ್ತೆ ಚರ್ಚೆಗಳು ಗರಿಗೆದರಿವೆ. ಜುಲೈ 15ರೊಳಗೆ ಸಚಿವ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಕಾಂಗ್ರೆಸ್ ವಲಯದಲ್ಲಿ ಮಹತ್ವದ ಚಟುವಟಿಕೆಗಳು ಆರಂಭವಾಗಿವೆ.

ವಿದೇಶ ಪ್ರವಾಸಕ್ಕೆ ತೆರಳಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿನ್ನೆ ರಾತ್ರಿ ದೆಹಲಿಗೆ ವಾಪಸ್ ಆಗಿದ್ದು, ಸಂಪುಟ ವಿಸ್ತರಣೆ ನಿರೀಕ್ಷೆ ಮೂಡಿದೆ. ಇಂದು ಅಥವಾ ನಾಳೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್‌ನಿಂದ ಬುಲಾವ್ ಬರಬಹುದೆಂಬ ಮಾಹಿತಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

ಈಗಾಗಲೇ ಡಿ.ಕೆ. ಶಿವಕುಮಾರ ಹಾಗೂ ಸಿದ್ದರಾಮಯ್ಯ ಅವರು ಸಚಿವ ಸ್ಥಾನಕ್ಕೆ ಆಕಾಂಕ್ಷಿಗಳ ಪ್ರತ್ಯೇಕ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್‌ಗೆ ಸಲ್ಲಿಸಿರುವುದಾಗಿ ಹೇಳಲಾಗುತ್ತಿದೆ. ಈ ಪಟ್ಟಿಯ ಆಧಾರದ ಮೇಲೆ ಅಂತಿಮ ಹಂತದ ಚರ್ಚೆಗಳು ನಡೆಯಲಿದ್ದು, ಬಳಿಕ ಸಚಿವರ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ.
ಸಂಪುಟ ವಿಸ್ತರಣೆಯಲ್ಲಿ ಹಿಂದಿನ ಸಚಿವ ಸಂಪುಟದಲ್ಲಿದ್ದ ಬಹುತೇಕ ಸಚಿವರಿಗೆ ಮತ್ತೆ ಅವಕಾಶ ದೊರೆಯುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಜೊತೆಗೆ ತಮ್ಮ ಆಪ್ತರಿಗೆ ಸಚಿವ ಸ್ಥಾನ ದೊರೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಒತ್ತಡ ಮುಂದುವರಿಸಿದ್ದಾರೆ ಎಂಬ ಮಾತುಗಳು ಪಕ್ಷದ ವಲಯದಲ್ಲಿ ಕೇಳಿಬರುತ್ತಿವೆ.

ಇನ್ನೊಂದೆಡೆ, ಪಕ್ಷ ಸಂಘಟನೆ ಬಲಪಡಿಸುವುದು ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗುವ ಉದ್ದೇಶದಿಂದ ಸಚಿವ ಸಂಪುಟ ವಿಸ್ತರಣೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸುವಂತೆ ಹಲವು ಕಾಂಗ್ರೆಸ್ ಶಾಸಕರು ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ. ಆದರೆ ಜುಲೈ 15ರೊಳಗೆ ಸಂಪುಟ ವಿಸ್ತರಣೆ ಸಾಧ್ಯವಾಗದಿದ್ದರೆ, ಒಂದು ತಿಂಗಳವರೆಗೆ ವಿಳಂಬವಾಗುವ ಸಾಧ್ಯತೆಯನ್ನೂ ತಳ್ಳಿಹಾಕಲಾಗುವುದಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಚಿವ ಸಂಪುಟ ವಿಸ್ತರಣೆಯ ಕುರಿತು ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಂಡ ಬಳಿಕ ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ.