ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕುಮಟಾ ತಾಲೂಕಿನ ಗೋಕರ್ಣ–ತದಡಿ ರಸ್ತೆ ಹಾಗೂ ಮಾನಗೇರಿ ಅಂಕೋಲಾ ಹೆದ್ಬಾರಿಯ ಘಟ್ಟದ ರಾಷ್ಟ್ರೀಯ ಹೆದ್ದಾರಿ 66ರಲ್ಲಿಯೂ ಗುಡ್ಡ ಕುಸಿತ ಉಂಟಾಗಿರುವ ಘಟನೆ ನಡೆದಿದೆ

ಹೆದ್ದಾರಿಯಲ್ಲಿ ಗುಡ್ಡಕುಸಿತ ಉಂಟಾದ ಪರಿಣಾಮವಾಗಿ ಗೋಕರ್ಣ–ತದಡಿ ನಡುವೆ ಸದ್ಯ ವಾಹನ ಸಂಚಾರ ಬಂದ್ ಮಾಡಲಾಗಿದೆ. ಗುಡ್ಡ ಕುಸಿತದಿಂದ ಭಾರೀ ಪ್ರಮಾಣದ ಮಣ್ಣು ಹಾಗೂ ಬಂಡೆಗಳು ರಸ್ತೆಯ ಮೇಲೆ ಬಿದ್ದಿರುವುದರಿಂದ ಯಾವುದೇ ವಾಹನಗಳು ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನೂ ಮಾದನಗೇರಿಯಿಂದ ಅಂಕೋಲಾ ಹೆದ್ದಾರಿಯ ಬಳಲೆ ಘಟ್ಟದಲ್ಲಿ ಸಹ ಗುಡ್ಡಕುಸಿತ ಉಂಟಾಗಿದ್ದು, ಈ ಹೆದ್ದಾರಿಯಲ್ಲಿ ಏಕಮುಖ ಸಂಚಾರ ನಡೆಸಲಾಗುತ್ತಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಸುಗಮ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಕಂದಾಯ ಇಲಾಖೆ ಅಧಿಕಾರಿಗಳ ತಂಡ ಸ್ಥಳಕ್ಕೆ ದೌಡಾಯಿಸಿದ್ದು, ಪರಿಸ್ಥಿತಿಯನ್ನು ಪರಿಶೀಲಿಸುತ್ತಿದೆ. ರಸ್ತೆ ಮೇಲಿನ ಮಣ್ಣು ಮತ್ತು ಬಂಡೆಗಳನ್ನು ತೆರವುಗೊಳಿಸಿ ಸಂಚಾರ ಪುನಃ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ಗುಡ್ಡ ಕುಸಿತದ ಅಪಾಯ ಹೆಚ್ಚಾಗಿದ್ದು,ಗುಡ್ಡದ ಸಮೀಪ ವಾಸಿಸುವ ಜನರು ಹಾಗೂ ಪ್ರಯಾಣಿಕರು ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ರಸ್ತೆ ಸಂಪೂರ್ಣ ಸುರಕ್ಷಿತವಾದ ಬಳಿಕವೇ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗುವ ಸಾಧ್ಯತೆ ಇದೆ.

ಇದನ್ನೂ ಓದಿ/ ಶಾಲೆ, ಅಂಗನವಾಡಿಗಳಿಗೆ ಇಂದು ರಜೆ