ಸುದ್ದಿಬಿಂದು ಬ್ಯೂರೋ ವರದಿ

ಎಸ್‌ಐಆರ್ (Special Intensive Revision) ಕಾರ್ಯದಲ್ಲಿ ತೊಡಗಿದ್ದ ಬಿಎಲ್‌ಒ ಹೃದಯಾಘಾತದಿಂದ ಮೃತಪಟ್ಟಿರುವ ದುರ್ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದಲ್ಲಿ ನಡೆದಿದೆ.

ರತ್ನಮ್ಮ ಬಳಿಗಾರ (43) ಎಂಬುವವರೆ ಹೃದಯಾಘಾದಿಂದಾಗಿ ಮೃತಪಟ್ಟಿರುವ ಶಿಕ್ಷಕಿಯಾಗಿದ್ದಾರೆ. ರತ್ನಮ್ಮ ಬಳಿಗಾರ ಅವರು ಬಾಗೇವಾಡಿ ಗ್ರಾಮದ ಅಂಗನವಾಡಿ ಶಿಕ್ಷಕಿಯಾಗಿದ್ದು, ಬಿಎಲ್‌ಒ ಆಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದರು. ಭಾನುವಾರ ಗ್ರಾಮದಲ್ಲಿ ಎಸ್‌ಐಆರ್ ಕಾರ್ಯದ ಪರಿಶೀಲನೆಗಾಗಿ ಆಗಮಿಸಿದ್ದ ಶಿರಹಟ್ಟಿ ಕ್ಷೇತ್ರದ ಶಾಸಕ ಡಾ. ಚಂದ್ರು ಲಮಾಣಿ ಅವರು, ರತ್ನಮ್ಮ ಅವರ ಕಾರ್ಯವನ್ನು ಶ್ಲಾಘಿಸಿದ್ದರು.

ಪರಿಶೀಲನೆ ಬಳಿಕ ಚಹಾ ಸೇವಿಸುವ ವೇಳೆ ರತ್ನಮ್ಮ ಅವರು ಏಕಾಏಕಿ ಕುಸಿದು ಬಿದ್ದಿದ್ದಾರೆ. ಸ್ಥಳದಲ್ಲೇ ಇದ್ದ ಶಾಸಕ ಡಾ. ಚಂದ್ರು ಲಮಾಣಿ ಅವರು ಅವರ ಆರೋಗ್ಯವನ್ನು ಪರಿಶೀಲಿಸಿ,ತಕ್ಷಣ ಬಾಗೇವಾಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದರು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮುಂಡರಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗಮಧ್ಯೆಯೇ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.