ಸುದ್ದಿಬಿಂದು ಬ್ಯೂರೋ ವರದಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಬಯಲುಸೀಮೆ ಭಾಗದಲ್ಲಿ ಮಳೆ ಕೊರತೆ ರೈತರ ಬದುಕನ್ನು ಸಂಕಷ್ಟಕ್ಕೆ ತಳ್ಳುತ್ತಿರುವ ನಡುವೆಯೇ, ಮುಂಡಗೋಡ ತಾಲೂಕಿನ ಮತ್ತೋರ್ವ ರೈತ ಬೆಳೆ ನಷ್ಟ ಮತ್ತು ಸಾಲದ ಹೊರೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.

ಮುಂಡಗೋಡ ತಾಲೂಕಿನ ಕರವಳ್ಳಿ ಗ್ರಾಮದ ಚವಡಳ್ಳಿ ನಿವಾಸಿ ಹನುಮಂತ ಯಲ್ಲಪ್ಪ ಭದ್ರಾಪೂರ (30) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದು. ಮಳೆ ಕೊರತೆಯಿಂದ ಬೆಳೆ ಸಂಪೂರ್ಣವಾಗಿ ಹಾಳಾಗಿದ್ದು, ಕೃಷಿಗಾಗಿ ಪಡೆದಿದ್ದ ಸಾಲವನ್ನು ತೀರಿಸಲು ಸಾಧ್ಯವಾಗದೆ ಮನನೊಂದು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ಹನುಮಂತ ಅವರು ತಮ್ಮ ತಾಯಿಯ ಹೆಸರಿನಲ್ಲಿರುವ ಕರವಳ್ಳಿ ಗ್ರಾಮದ ಸರ್ವೇ ನಂ.14ರ 5 ಎಕರೆ 3 ಗುಂಟೆ ಜಮೀನಿನಲ್ಲಿ ಈ ಬಾರಿ ಕೃಷಿ ಮಾಡಿದ್ದರು. ಕೃಷಿ ವೆಚ್ಚಕ್ಕಾಗಿ ಚವಡಳ್ಳಿ–ಮಲವಳ್ಳಿ ಗ್ರೂಪ್ ಸೇವಾ ಸಹಕಾರಿ ಸಂಘದಿಂದ  1.49 ಲಕ್ಷ ಬೆಳೆ ಸಾಲ ಪಡೆದಿದ್ದರು. ಆದರೆ ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಹಾಗೂ ಅಂತರ್ಜಲ ಮಟ್ಟ ಕುಸಿದು ಬೋರ್‌ವೆಲ್‌ನಲ್ಲೂ ನೀರು ಸಿಗದ ಕಾರಣ ಬೆಳೆದಿದ್ದ ಬೆಳೆ ಸಂಪೂರ್ಣ ಒಣಗಿ ಹೋಗಿತ್ತು.

ಬೆಳೆ ನಷ್ಟದಿಂದ ಆರ್ಥಿಕ ಸಂಕಷ್ಟ ಎದುರಿಸಿದ್ದ ಹನುಮಂತ, ಸಾಲ ಮರುಪಾವತಿ ಕುರಿತು ತೀವ್ರ ಚಿಂತೆಯಲ್ಲಿದ್ದರು ಎನ್ನಲಾಗಿದೆ. ಇದೇ ಕಾರಣದಿಂದ ಜುಲೈ 17ರಂದು ಮಧ್ಯಾಹ್ನ ತಮ್ಮ ಹೊಲಕ್ಕೆ ತೆರಳಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕುಟುಂಬಸ್ಥರು ತಕ್ಷಣ ಅವರನ್ನು ಮುಂಡಗೋಡ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜುಲೈ 20ರ ಬೆಳಗಿನ ಜಾವ ಅವರು ಕೊನೆಯುಸಿರೆಳೆದಿದ್ದಾರೆ.

ಈ ಕುರಿತು ಮೃತರ ಸಹೋದರ ನೀಡಿದ ದೂರಿನ ಮೇರೆಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ಮಂಜುನಾಥ ಗೌಡ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ. ಮಳೆ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಬಯಲುಸೀಮೆ ಭಾಗದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಕೆಲವೇ ದಿನಗಳ ಹಿಂದೆ ಕೃಷಿ ನಷ್ಟದಿಂದ ಮತ್ತೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದ ಬೆನ್ನಲ್ಲೇ ಮತ್ತೊಂದು ಜೀವ ಬಲಿಯಾಗಿರುವುದು ರೈತರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

ಇದನ್ನೂ ಓದಿ/ನಾಳೆ ಕುಮಟಾಕ್ಕೆ ಯು.ಟಿ.ಖಾದರ್‌ ಭೇಟಿ : ಟ್ರಾಮಾ ಕೇರ್‌ ಸೆಂಟರ್‌ ಉದ್ಘಾಟನೆ