ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ರಾಜ್ಯ ಕಾಂಗ್ರೆಸ್ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಜಿಲ್ಲಾ ಘಟಕಗಳ ಪುನರ್ರಚನೆಗೆ ಕೈ ಹಾಕಿದ್ದು, ಅದರ ಭಾಗವಾಗಿ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದೆ. ನೂತನ ಜಿಲ್ಲಾಧ್ಯಕ್ಷರ ಆಯ್ಕೆ ಸಂಬಂಧ ನಾಳೆ ಶಿರಸಿಯಲ್ಲಿ ಎಐಸಿಸಿ ಹಾಗೂ ಕೆಪಿಸಿಸಿ ಮುಖಂಡರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಹಲವು ನಾಯಕರು ಅಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ ನಡೆದಿದೆ..
ಈ ಬಾರಿ ಅಧ್ಯಕ್ಷರ ಆಯ್ಕೆಗೆ ಕಾಂಗ್ರೆಸ್ ಹೊಸ ವಿಧಾನವನ್ನು ಅನುಸರಿಸುತ್ತಿದೆ. ಆಸಕ್ತ ಅಭ್ಯರ್ಥಿಗಳಿಂದ ಮೊದಲು ಉಮೇದುವಾರಿಕೆ ಸ್ವೀಕರಿಸಲಾಗುತ್ತಿದ್ದು, ಬಳಿಕ ಎಐಸಿಸಿ ಹಾಗೂ ಕೆಪಿಸಿಸಿ ಪ್ರತಿನಿಧಿಗಳು ಜಿಲ್ಲೆಯ ವಿವಿಧ ಬ್ಲಾಕ್ ಕಾಂಗ್ರೆಸ್ ಘಟಕಗಳಿಗೆ ಭೇಟಿ ನೀಡಿ ಸ್ಥಳೀಯ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಈ ಅಭಿಪ್ರಾಯಗಳ ಆಧಾರದ ಮೇಲೆ ಸಮಗ್ರ ವರದಿ ಸಿದ್ಧಪಡಿಸಿ ಹತ್ತು ದಿನಗಳೊಳಗೆ ಕೆಪಿಸಿಸಿಗೆ ಸಲ್ಲಿಸಲಾಗುತ್ತದೆ ಎನ್ನಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಹತ್ತಕ್ಕೂ ಹೆಚ್ಚು ಆಕಾಂಕ್ಷಿಗಳ ಹೆಸರು ಕೇಳಿಬರುತ್ತಿದೆ. ಹಾಲಿ ಜಿಲ್ಲಾಧ್ಯಕ್ಷ ಸಾಯಿ ಗಾಂವ್ಕರ್ ಕರಾವಳಿ ಭಾಗವನ್ನು ಪ್ರತಿನಿಧಿಸುತ್ತಿರುವ ಹಿನ್ನೆಲೆಯಲ್ಲಿ, ಈ ಬಾರಿ ಘಟ್ಟದ ಮೇಲ್ಭಾಗದ ನಾಯಕರಿಗೆ ಅವಕಾಶ ಸಿಗಬಹುದು ಎಂಬ ಚರ್ಚೆ ಪಕ್ಷದ ವಲಯದಲ್ಲಿ ಕೇಳಿ ಬರುತ್ತಿದೆ.
ಶಿರಸಿಯ ದೀಪಕ್ ದೊಡ್ಡೂರು, ಸಿದ್ದಾಪುರದ ವಸಂತ ನಾಯ್ಕ ಹಾಗೂ ನ್ಯಾಯವಾದಿ ಜಿ.ಟಿ. ನಾಯ್ಕ ಅವರ ಹೆಸರುಗಳು ಪ್ರಮುಖ ಆಕಾಂಕ್ಷಿಗಳ ಪಟ್ಟಿಯಲ್ಲಿದೆ. ಜೊತೆಗೆ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಸತೀಶ ನಾಯ್ಕ, ಮಂಜುನಾಥ ಎಲ್. ನಾಯ್ಕ ಹಾಗೂ ಆರ್.ಎಚ್. ನಾಯ್ಕ ಅವರ ಹೆಸರೂ ಚರ್ಚೆಯಲ್ಲಿದೆ.
ಹಾಲಿ ಜಿಲ್ಲಾಧ್ಯಕ್ಷ ಸಾಯಿ ಗಾಂವ್ಕರ್ ಮತ್ತೊಂದು ಅವಧಿಗೆ ಅವಕಾಶ ಕೇಳುವ ಸಾಧ್ಯತೆ ಇದ್ದು, ಒಂದು ವೇಳೆ ಅವರು ಸ್ಪರ್ಧೆಯಿಂದ ಹಿಂದೆ ಸರಿದರೆ ಶಿರಸಿ ಶಾಸಕ ಭೀಮಣ್ಣ ನಾಯ್ಕ ಅವರ ಹೆಸರು ಮುನ್ನೆಲೆಗೆ ಬರಬಹುದು ಎಂಬ ಮಾತುಗಳೂ ಪಕ್ಷದೊಳಗೆ ಕೇಳಿಬರುತ್ತಿವೆ.
ಮುಂದಿನ ದಿನಗಳಲ್ಲಿ ವಿಧಾನಸಭೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳು ಎದುರಾಗಲಿರುವ ಹಿನ್ನೆಲೆಯಲ್ಲಿ ಸಂಘಟನಾ ಸಾಮರ್ಥ್ಯ, ಕಾರ್ಯಕರ್ತರನ್ನು ಒಗ್ಗೂಡಿಸುವ ಶಕ್ತಿ ಹಾಗೂ ಚುನಾವಣಾ ನಿರ್ವಹಣೆಯ ಅನುಭವ ಹೊಂದಿರುವ ನಾಯಕರಿಗೆ ಪಕ್ಷ ಆದ್ಯತೆ ನೀಡುವ ಸಾಧ್ಯತೆ ಇದೆ.
ಶಿರಸಿ ಶಾಸಕರಾಗಿರುವ ಭೀಮಣ್ಣ ನಾಯ್ಕ ಅವರು ಈ ಹಿಂದೆ ಹಲವು ವರ್ಷಗಳ ಕಾಲ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು, ಬಳಿಕವೂ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ. ಇನ್ನೂ ಎಸ್ಐಆರ್ ಪ್ರಕ್ರಿಯೆ ವೇಳೆ ಹೈಕಮಾಂಡ ನೀಡಿದ ಜವಾಬ್ದಾರಿಯನ್ನೂ ಅವರು ಸಮರ್ಥವಾಗಿ ನಿರ್ವಹಿಸಿರುವ ಹಿನ್ನೆಲೆಯಲ್ಲಿ ಅವರಿಗೆ ಮತ್ತೊಮ್ಮೆ ಅವಕಾಶ ದೊರೆಯುವ ಸಾಧ್ಯತೆ ಇದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.
ಇನ್ನೊಂದೆಡೆ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಮಂಜುನಾಥ ಎಲ್. ನಾಯ್ಕ ಅವರೂ ಪೈಪೋಟಿ ನಡೆಸುತ್ತಿದ್ದಾರೆ. ಕೆಪಿಸಿಸಿ ಅಧ್ಹಕ್ಷರ ಬೆಂಬಲವೂ ಅವರಿಗೆ ದೊರೆಯುವ ಸಾಧ್ಯತೆ ಸಹ ಇದೆ.
ಆದರೆ ಅಂತಿಮವಾಗಿ ಜಿಲ್ಲಾಧ್ಯಕ್ಷ ಪಟ್ಟ ಯಾರಿಗೆ ಒಲಿಯಲಿದೆ ಎಂಬುದು ಶಿರಸಿಯಲ್ಲಿ ನಡೆಯಲಿರುವ ಸಭೆ ಹಾಗೂ ನಂತರದ ಅಭಿಪ್ರಾಯ ಸಂಗ್ರಹ ಪ್ರಕ್ರಿಯೆಯ ಬಳಿಕವೇ ಸ್ಪಷ್ಟವಾಗಲಿದೆ. ಉತ್ತರ ಕನ್ನಡ ಕಾಂಗ್ರೆಸ್ ಸಂಘಟನೆಯ ಮುಂದಿನ ದಿಕ್ಕನ್ನು ನಿರ್ಧರಿಸುವ ಮಹತ್ವದ ಆಯ್ಕೆ ಪ್ರಕ್ರಿಯೆಯತ್ತ ಜಿಲ್ಲೆಯ ರಾಜಕೀಯ ವಲಯದ ಗಮನ ನೆಟ್ಟಿದೆ.

