ಸುದ್ದಿಬಿಂದು ಬ್ಯೂರೋ ವರದಿ
ಬನವಾಸಿ: ಬನವಾಸಿ ಬ್ಲಾಕ್ ಕಾಂಗ್ರೆಸ್‌ನಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಕುರಿತು ಅಭಿಪ್ರಾಯ ಸಂಗ್ರಹಿಸಲು ಸೋಮವಾರ ನಡೆದ ಸಭೆಯಲ್ಲಿ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು.

ಸಭೆಯಲ್ಲಿ ಮಾತನಾಡಿದ ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷ ಸುನಿಲ್ ನಾಯ್ಕ್, ಬನವಾಸಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ಪಟ್ಟಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ಹಿಂದೆ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಪಟ್ಟಿಯಲ್ಲಿ ಆರ್‌ಎಸ್‌ಎಸ್ ಹಿನ್ನೆಲೆಯವರಿಗೆ ಹುದ್ದೆ ನೀಡಲಾಗಿದೆ ಎಂಬ ಆರೋಪ ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿದ್ದರಿಂದ ಆ ಪಟ್ಟಿಯನ್ನು ತಡೆಹಿಡಿಯಲಾಗಿತ್ತು. ಆದರೆ ಇದೀಗ ಅದೇ ಪಟ್ಟಿಗೆ ಮರು ಅನುಮೋದನೆ ನೀಡಿ, ಅದೇ ಪದಾಧಿಕಾರಿಗಳು ವಿವಿಧ ಸಭೆಗಳಲ್ಲಿ ತಮ್ಮ ಹುದ್ದೆಗಳಲ್ಲಿ ಮುಂದುವರಿದಿದ್ದಾರೆ ಎಂದು ಆರೋಪಿಸಿದರು.

ಮೂಲ ಕಾಂಗ್ರೆಸ್ ಕಾರ್ಯಕರ್ತರಿಗೆ ಯಾವುದೇ ಬೆಲೆ ಇಲ್ಲ. ಕೇವಲ ಹೆಬ್ಬಾರ್ ಬೆಂಬಲಿಗರ ಪ್ರಾಬಲ್ಯದಿಂದ ಪಕ್ಷದಲ್ಲಿ ಏಕಪಕ್ಷೀಯ ನಿರ್ಧಾರಗಳು ನಡೆಯುತ್ತಿವೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಮೂಲ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರಕರಣಗಳನ್ನು ದಾಖಲಿಸುವ ಪ್ರಯತ್ನಗಳು ಮತ್ತೆ ಆರಂಭವಾಗಿವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವ್ಕರ್ ಅವರ ಕಾರ್ಯವೈಖರಿಯನ್ನೂ ಅವರು ತೀವ್ರವಾಗಿ ಟೀಕಿಸಿದರು.

ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವು “ಅಪ್ಪ-ಮಕ್ಕಳ ಪಕ್ಷ”ವಾಗಿ ಮಾರ್ಪಟ್ಟಿದ್ದು, ನಿಷ್ಠಾವಂತ ಕಾರ್ಯಕರ್ತರಿಗೆ ಯಾವುದೇ ಗೌರವ ಅಥವಾ ಅವಕಾಶ ದೊರೆಯುತ್ತಿಲ್ಲ ಎಂದು ಆರೋಪಿಸಿದರು.

ಇದೇ ವೇಳೆ ಬನವಾಸಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಗಜಾನನ ಗೌಡ ಮಾತನಾಡಿ, ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಲ್ಲಿ, ನಿಷ್ಠಾವಂತ ಕಾರ್ಯಕರ್ತರಿಗೆ ಯಾವುದೇ ಗೌರವ ಅಥವಾ ಅವಕಾಶ ದೊರೆಯುತ್ತಿಲ್ಲ ಎಂದು ಆರೋಪಿಸಿದರು