ಸುದ್ದಿಬಿಂದು ಬ್ಯೂರೋ ವರದಿ

ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಮಹತ್ವದ ಸಭೆ ಇದೀಗ ನವದೆಹಲಿಯಲ್ಲಿ ಮುಕ್ತಾಯಗೊಂಡಿದ್ದು, ಜುಲೈ 30ರಂದು ನೂತನ ಸಚಿವರ ಪ್ರಮಾಣವಚನ ಸಮಾರಂಭ ನಡೆಸುವ ಕುರಿತು ಗಂಭೀರ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಸಚಿವ ಸ್ಥಾನಗಳ ಅಂತಿಮ ಪಟ್ಟಿಗೆ ಸಂಬಂಧಿಸಿದಂತೆ ಇನ್ನೂ ಒಂದು ಸುತ್ತಿನ ಚರ್ಚೆಯ ಬಳಿಕ ಅಂತಿಮ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ.

ಅಂತಿಮ ಮಾತುಕತೆ ನಾಳೆ (ಬುಧವಾರ) ರಾಹುಲ್ ಗಾಂಧಿ ಜೊತೆ ನಡೆಯಲಿದ್ದು,ಮಧ್ಯಾಹ್ನ 1.30ಕ್ಕೆ ದೆಹಲಿಯ 10 ಜನಪತ್​​ನ ರಾಹುಲ್ ನಿವಾಸದಲ್ಲಿ ಸಭೆ ನಡೆಯಲಿದ್ದು, ರಾಹುಲ್ ಗಾಂಧಿಯವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬಿ.ಕೆ.ಹರಿಪ್ರಸಾದ್, ಸಿದ್ದರಾಮಯ್ಯ ಜೊತೆ ರಾಹುಲ್ ಮಾತುಕತೆ ನಡೆಸಿ ಪಟ್ಟಿ ಅಂತಿಮಗೊಳಿಸಲಿದ್ದಾರೆ.

ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್ ಹಾಗೂ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಭಾಗವಹಿಸಿದರು. ಆರಂಭದಲ್ಲಿ ರಾಜ್ಯ ನಾಯಕರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ ಕೆ.ಸಿ. ವೇಣುಗೋಪಾಲ್, ಬಳಿಕ ಎಲ್ಲರನ್ನು ಒಟ್ಟಿಗೆ ಕರೆದು ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸುದೀರ್ಘ ಚರ್ಚೆ ನಡೆಸಿದರು.

ಸಭೆಯಲ್ಲಿ ಸಚಿವ ಸ್ಥಾನಗಳಿಗೆ ಸಂಬಂಧಿಸಿದ ಹಲವು ಹೆಸರುಗಳು ಮತ್ತು ಪ್ರಾದೇಶಿಕ ಹಾಗೂ ಸಾಮಾಜಿಕ ಸಮತೋಲನದ ವಿಚಾರಗಳ ಕುರಿತು ಚರ್ಚೆ ನಡೆದಿರುವ ಮಾಹಿತಿ ಲಭ್ಯವಾಗಿದೆ. ಅಂತಿಮ ಪಟ್ಟಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಒಪ್ಪಿಗೆ ಪಡೆಯುವ ಪ್ರಕ್ರಿಯೆ ಮುಂದುವರಿದಿದೆ ಎಂದು ತಿಳಿದುಬಂದಿದೆ.

ಇದೇ ವೇಳೆ, ಜುಲೈ 30ರಂದು ಸಂಜೆ ನೂತನ ಸಚಿವರ ಪ್ರಮಾಣವಚನ ಸಮಾರಂಭ ನಡೆಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕಚೇರಿಯಿಂದ ರಾಜಭವನಕ್ಕೆ ಪ್ರಾಥಮಿಕ ಮಾಹಿತಿ ನೀಡಲಾಗಿದೆ ಎನ್ನಲಾಗಿದೆ. ಆದರೆ, ಸಚಿವರ ಪಟ್ಟಿ ಮತ್ತು ಪ್ರಮಾಣವಚನದ ವೇಳಾಪಟ್ಟಿಯನ್ನು ಅಧಿಕೃತವಾಗಿ ಇನ್ನೂ ಪ್ರಕಟಿಸಲಾಗಿಲ್ಲ