ಸುದ್ದಿಬಿಂದು ಬ್ಯೂರೋ ವರದಿ
ನವದೆಹಲಿ : ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ನೀಡಿರುವ ಆದೇಶವನ್ನು ಪ್ರಶ್ನಿಸಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮುಂದೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ದೆಹಲಿಯ ಕರ್ನಾಟಕ ಭವನದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾವೇರಿ ನೀರು ಬಿಡುಗಡೆ ಕುರಿತಂತೆ ಅಡ್ವೊಕೇಟ್ ಜನರಲ್, ಕಾನೂನು ತಜ್ಞರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಸಿಡಬ್ಲ್ಯುಎಂಎ ಮುಂದೆ ಮೇಲ್ಮನವಿ ಸಲ್ಲಿಸಲು ಅಗತ್ಯ ಸಿದ್ಧತೆಗಳು ನಡೆಯುತ್ತಿವೆ” ಎಂದರು.

ಕಾವೇರಿ ನೀರು ಬಿಡುಗಡೆ ಕುರಿತು ಪ್ರತಿಕ್ರಿಯಿಸಿದ ಅವರು, “ಈ ಬಾರಿ ಮಳೆ ನಮ್ಮ ಪರವಾಗಿಲ್ಲ. ಈ ಹಿಂದೆ ತಮಿಳುನಾಡಿನ ನೀರು ಬಿಡುಗಡೆ ಬೇಡಿಕೆಯನ್ನು ಸಮಿತಿ ಎರಡು ಬಾರಿ ತಿರಸ್ಕರಿಸಿತ್ತು. ಆದರೆ ಈ ಬಾರಿ ಕರ್ನಾಟಕದಿಂದ ನೀರು ಬಿಡುಗಡೆ ಮಾಡಲು ಆದೇಶಿಸಿದೆ. ಈ ಕುರಿತು ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಅಧಿಕಾರಿಗಳೊಂದಿಗೆ ಕಾನೂನು ಆಯ್ಕೆಗಳ ಬಗ್ಗೆ ಚರ್ಚೆ ನಡೆಸಿದ್ದೇವೆ” ಎಂದು ಹೇಳಿದರು.

“ಬೆಂಗಳೂರುಗೆ ಹಿಂತಿರುಗಿದ ಬಳಿಕ ಈ ವಿಷಯವನ್ನು ಪ್ರತಿಪಕ್ಷ ನಾಯಕರೊಂದಿಗೂ ಚರ್ಚಿಸಲಾಗುವುದು” ಎಂದು ತಿಳಿಸಿದರು.
ತಮಿಳುನಾಡು ಸಿಎಂ ವಿಜಯ್ ಭೇಟಿ ಕುರಿತು
“ತಮಿಳುನಾಡು ಮುಖ್ಯಮಂತ್ರಿ ವಿಜಯ್ ನನ್ನನ್ನು ಭೇಟಿ ಮಾಡಲು ಆಸಕ್ತಿ ವ್ಯಕ್ತಪಡಿಸಿದ್ದಾರೆ. ಅವರು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ದೂರವಾಣಿಯಲ್ಲೂ ಮಾತನಾಡಿದ್ದಾರೆ. ಅವರಿಗೆ ಸಲ್ಲಬೇಕಾದ ಗೌರವ ನೀಡಿ ಸಭೆಗೆ ಆಹ್ವಾನಿಸಿದ್ದೇನೆ. ನಮ್ಮ ರಾಜ್ಯಕ್ಕೆ ಬರುವ ಅತಿಥಿಗಳನ್ನು ಸೌಜನ್ಯದಿಂದ ಸ್ವಾಗತಿಸುವುದು ನಮ್ಮ ಕರ್ತವ್ಯವಾಗಿದ್ದು, ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ” ಎಂದರು.

ಕಾವೇರಿ ಜಲಾನಯನ ಪ್ರದೇಶಕ್ಕೆ ಭೇಟಿ ನೀಡುವಂತೆ ಮನವಿ
“ಕಾವೇರಿ ಜಲಾನಯನ ಪ್ರದೇಶದ ನೈಜ ಪರಿಸ್ಥಿತಿಯನ್ನು ಸ್ವತಃ ಬಂದು ಪರಿಶೀಲಿಸುವಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ಮನವಿ ಮಾಡಿದ್ದೇವೆ. ಅವರ ಭೇಟಿಿಗಾಗಿ ಹೆಲಿಕಾಪ್ಟರ್ ವ್ಯವಸ್ಥೆಯನ್ನೂ ಸರ್ಕಾರ ಮಾಡಲಿದೆ ಎಂದು ತಿಳಿಸಿದ್ದೇನೆ. ಅವರು ಸ್ಥಳಕ್ಕೆ ಬಂದು ವಾಸ್ತವ ಸ್ಥಿತಿಯನ್ನು ನೋಡಲಿ. ನಂತರ ಅವರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡೋಣ” ಎಂದು ಹೇಳಿದರು.

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಖಂಡನೆ
ಸಂಸತ್ತಿನಲ್ಲಿ ರಾಹುಲ್ ಗಾಂಧಿ, ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದ ಪೊಲೀಸ್ ಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊಣೆ ಎಂದು ಆರೋಪಿಸಿದ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, “ಇದು ಕೇವಲ ರಾಹುಲ್ ಗಾಂಧಿಯವರ ಹೇಳಿಕೆ ಅಲ್ಲ, ರಾಷ್ಟ್ರದ ಮಹತ್ವದ ವಿಷಯವಾಗಿದೆ. ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲು ಅನುಮತಿ ನೀಡಿದವರು ಯಾರು ಎಂಬ ಮೂಲಭೂತ ಪ್ರಶ್ನೆಯನ್ನು ಅವರು ಎತ್ತಿದ್ದಾರೆ. ದೆಹಲಿ ಪೊಲೀಸರು ಕೇಂದ್ರ ಸರ್ಕಾರದ ಅಧೀನದಲ್ಲಿದ್ದಾರೆ. ಆದ್ದರಿಂದ ಇಂತಹ ಘಟನೆ ಹೇಗೆ ನಡೆಯಿತು ಎಂಬುದನ್ನು ಕೇಂದ್ರ ಗೃಹ ಸಚಿವರು ಸ್ಪಷ್ಟಪಡಿಸಬೇಕು. ನನ್ನ ರಾಜಕೀಯ ಜೀವನದಲ್ಲೇ ಮೊದಲ ಬಾರಿಗೆ ವಿದ್ಯಾರ್ಥಿಗಳ ವಿರುದ್ಧ ಪೆಲೆಟ್ ಗನ್ ಬಳಸಿರುವುದನ್ನು ನೋಡುತ್ತಿದ್ದೇನೆ” ಎಂದು ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಕುರಿತು ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಅವರು, “ಈ ಕುರಿತು ಚರ್ಚೆಗಳು ನಡೆದಿವೆ. ಪಕ್ಷದ ಹೈಕಮಾಂಡ್ ಜೊತೆಗಿನ ಅಂತಿಮ ಹಂತದ ಸಮಾಲೋಚನೆ ಮಾತ್ರ ಬಾಕಿಯಿದೆ. ಶೀಘ್ರದಲ್ಲೇ ಮತ್ತೊಂದು ಸಭೆ ನಡೆಸಲಾಗುವುದು ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ/ತಮಿಳುನಾಡಿಗೆ ಕಾವೇರಿ ನೀರು ಬಿಡಬೇಡಿ; ಕಾರವಾರದಲ್ಲಿ ಕನ್ನಡ ಪರ ಹೋರಾಟಗಾರರ ಪ್ರತಿಭಟನೆ