ಸುದ್ದಿಬಿಂದು ಬ್ಯೂರೋ ವರದಿ

ಶಿರಸಿ: ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ನಡೆದ ವಸಂತ್ ನಾಯ್ಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ ಏಳು ಆರೋಪಿಗಳು ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಶಿರಸಿಯ ಪ್ರಧಾನ ಸತ್ರ ನ್ಯಾಯಾಲಯ ವಜಾಗೊಳಿಸಿದೆ.

ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಕಮಲಾಕರ್ ಭಟ್ ಸೇರಿದಂತೆ ಆರೋಪಿಗಳು ಕಳೆದ ಆರು ತಿಂಗಳಿಂದ ಕಾರವಾರ ಜಿಲ್ಲಾ ಕಾರಾಗೃಹದಲ್ಲಿದ್ದಾರೆ. ಶಿರಸಿಯ ಪ್ರಧಾನ ಸತ್ರ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿದೆ.

ಸಿದ್ದಾಪುರ ತಾಲೂಕಿನ ಅವರಗುಪ್ಪದಲ್ಲಿ ಫೆಬ್ರವರಿ ತಿಂಗಳಲ್ಲಿ ನಡೆದ ವಸಂತ್ ನಾಯ್ಕ ಹತ್ಯೆ ಪ್ರಕರಣದಲ್ಲಿ ಕಮಲಾಕರ್ ಭಟ್ ಪ್ರಮುಖ ಆರೋಪಿಯಾಗಿದ್ದಾರೆ. ಈ ಪ್ರಕರಣದ ವಿಚಾರಣೆ ಶಿರಸಿ ನ್ಯಾಯಾಲಯದಲ್ಲಿ ನಡೆಯುತ್ತಿದೆ.

ಇದರ ಜೊತೆಗೆ, ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಕಮಲಾಕರ್ ಭಟ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಮತ್ತೊಂದು ಪ್ರಕರಣವೂ ದಾಖಲಾಗಿತ್ತು, ಅದರ ವಿಚಾರಣೆ ಕಾರವಾರ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಹತ್ಯೆ ಪ್ರಕರಣದಲ್ಲಿ ಶಿರಸಿ ನ್ಯಾಯಾಲಯ ಹಾಗೂ ಪೋಕ್ಸೊ ಪ್ರಕರಣದಲ್ಲಿ ಕಾರವಾರ ನ್ಯಾಯಾಲಯದಲ್ಲಿ ಪ್ರತ್ಯೇಕವಾಗಿ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಅವುಗಳಲ್ಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರಸಿ ಪ್ರಧಾನ ಸತ್ರ ನ್ಯಾಯಾಲಯವು ಇಂದು ಮಧ್ಯಂತರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಇದನ್ನೂ ಓದಿ/ ಸಚಿವರ ಪಟ್ಟಿ ಆಯ್ಕೆಗೆ ತೆರೆ : ಮಂಕಾಳ್‌ ವೈದ್ಯರಿಗೆ ಸಚಿವ ಸ್ಥಾನ ಬಹುತೇಕ ಖಚಿತ