ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ :ಎಸ್ಐಆರ್ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿರುವ ಪಕ್ಷದ ಬಿಎಲ್ಎ-1, ಬಿಎಲ್ಎ-2 ಹಾಗೂ ತಂಡದ ಎಲ್ಲ ಸದಸ್ಯರ ಕಾರ್ಯ ಶ್ಲಾಘನೀಯವಾಗಿದ್ದು, ಇದೇ ಉತ್ಸಾಹದಿಂದ ಮುಂದೆಯೂ ಎಸ್ಐಆರ್ ಹಾಗೂ ಪಕ್ಷದ ಸಂಘಟನೆಗೆ ಶ್ರಮಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಕಾರವಾರ–ಅಂಕೋಲಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್ ನಾಯ್ಕ್ ಹೇಳಿದರು.
ನಗರದ ಮುರಳೀಧರ ಮಠದ ಇಂದಿರಾಕಾಂತ ಸಭಾಭವನದಲ್ಲಿ ಎಸ್ಐಆರ್ ಕುರಿತು ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಸ್ಐಆರ್ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿರುವ ಎಲ್ಲ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ ಅವರು, ಪ್ರಕ್ರಿಯೆ ಇನ್ನೂ ಮುಂದುವರಿದಿರುವುದರಿಂದ ಇದೇ ಬದ್ಧತೆ ಮತ್ತು ಉತ್ಸಾಹದಿಂದ ಕಾರ್ಯನಿರ್ವಹಿಸುವಂತೆ ಕರೆ ನೀಡಿದರು. ದೆಹಲಿಯಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಅವರು, ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಅನ್ಯಾಯವಾದರೆ ಅದು ಎಲ್ಲರಿಗೂ ನೋವುಂಟು ಮಾಡುವ ವಿಷಯವಾಗಿದೆ. ವಿದ್ಯಾರ್ಥಿಗಳ ಹಿತರಕ್ಷಣೆ ಸರ್ಕಾರದ ಆದ್ಯತೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಆದರೆ ಕೆಲವು ರಾಜಕೀಯ ಪಕ್ಷಗಳು ವಿದ್ಯಾರ್ಥಿಗಳನ್ನು ದಾರಿತಪ್ಪಿಸುವ ಪ್ರಯತ್ನ ನಡೆಸುತ್ತಿವೆ ಎಂದು ಆರೋಪಿಸಿದರು.
ಭಾರತೀಯ ಜನತಾ ಪಕ್ಷವು ಕಾರ್ಯಕರ್ತರ ಆಧಾರಿತ ಸಂಘಟನೆಯಾಗಿದ್ದು, ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಲು ಪ್ರತಿಯೊಬ್ಬ ಕಾರ್ಯಕರ್ತರೂ ಸಂಘಟನೆಯ ಕೆಲಸದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಸಭೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯ್ಕ, ಜಿಲ್ಲಾ ಉಪಾಧ್ಯಕ್ಷರಾದ ಸಂಜಯ ಸಾಳುಂಕೆ ಹಾಗೂ ಗಜಾನನ ಗುನಗ, ನಗರ ಮಂಡಲ ಅಧ್ಯಕ್ಷ ನಾಗೇಶ ಕುರ್ಡೇಕರ, ಗ್ರಾಮೀಣ ಮಂಡಲ ಅಧ್ಯಕ್ಷ ಸುಭಾಷ ಗುನಗಿ, ನಗರಸಭೆ ಮಾಜಿ ಅಧ್ಯಕ್ಷ ರವಿರಾಜ ಅಂಕೋಲೆಕರ, ಬಿಎಲ್ಎ-1 ರಾಘವೇಂದ್ರ ಭಟ್, ನಗರ ಪ್ರಭಾರಿ ರಾಜು ಭಂಡಾರಿ, ಸುನೀಲ ಸೋನಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಇದನ್ನೂ ಓದಿ; ಸಚಿವರ ಪಟ್ಟಿ ಆಯ್ಕೆಗೆ ತೆರೆ : ಉತ್ತರಕನ್ನಡಕ್ಕೆ ಮಂಕಾಳ್ ವೈದ್ಯರಿಗೆ ಬಹುತೇಕ ಖಚಿತ

