ಸುದ್ದಿಬಿಂದು ಬ್ಯೂರೋ ವರದಿ
ಭಟ್ಕಳ: ತಾಲೂಕು ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಹಾಗೂ ಸರ್ಜನ್ ಡಾ. ಅರುಣ್ ಕುಮಾರ್ ಅವರ ವಿರುದ್ಧ ಅನಾಮಧೇಯ ವ್ಯಕ್ತಿಯೊಬ್ಬರು ರಾಜ್ಯ ಸರ್ಕಾರ ಹಾಗೂ ಆರೋಗ್ಯ ಸಚಿವರಿಗೆ ವಾಟ್ಸಾಪ್ ಮೂಲಕ ದೂರು ಸಲ್ಲಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ದೂರಿನಲ್ಲಿರುವ ಆರೋಪಗಳ ಸತ್ಯಾಸತ್ಯತೆ ಪರಿಶೀಲಿಸಿ, ದೂರು ಸಲ್ಲಿಸಿದ ವ್ಯಕ್ತಿಯನ್ನು ಪತ್ತೆಹಚ್ಚಿ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಸಾರ್ವಜನಿಕರ ಪ್ರಕಾರ, ಡಾ. ಅರುಣ್ ಕುಮಾರ್ ಅವರು ಹಲವು ವರ್ಷಗಳಿಂದ ಭಟ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, 2023–24ನೇ ಸಾಲಿನ ಅತ್ಯುತ್ತಮ ವೈದ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬಡ ಹಾಗೂ ಮಧ್ಯಮ ವರ್ಗದ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆಗಳನ್ನು ನೀಡುವ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ. ತುರ್ತು ಸಂದರ್ಭಗಳಲ್ಲಿಯೂ ಹಗಲು–ರಾತ್ರಿ ಎನ್ನದೆ ಸೇವೆ ಸಲ್ಲಿಸುತ್ತಿದ್ದು, ಪ್ರತಿದಿನ ಹಲವು ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ನಡೆಸುತ್ತಿದ್ದಾರೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.
ವೈದ್ಯರು ಹಾಗೂ ಸಿಬ್ಬಂದಿ ಕೊರತೆಯ ನಡುವೆಯೂ ತುರ್ತು ಮತ್ತು ಸಂಕೀರ್ಣ ಶಸ್ತ್ರಚಿಕಿತ್ಸೆಗಳನ್ನು ಸಮರ್ಥವಾಗಿ ನಿರ್ವಹಿಸುತ್ತಿರುವ ಅವರ ಸೇವೆಯಿಂದ ಸರ್ಕಾರಿ ಆಸ್ಪತ್ರೆಯು ಉತ್ತಮ ಚಿಕಿತ್ಸಾ ಕೇಂದ್ರವಾಗಿ ಬೆಳೆದಿದೆ. 2026–27ನೇ ಸಾಲಿನ ಆಯುಷ್ಮಾನ್ ಭಾರತ–ಆರೋಗ್ಯ ಕರ್ನಾಟಕ (ಎಬಿ–ಆರ್ಕೆ) ಯೋಜನೆಯ ರಾಜ್ಯಮಟ್ಟದ ಶ್ರೇಯಾಂಕದಲ್ಲಿ 37ನೇ ಸ್ಥಾನ ಪಡೆದಿರುವುದನ್ನೂ ಸಾರ್ವಜನಿಕರು ಉಲ್ಲೇಖಿಸಿದ್ದಾರೆ.
ಅನಾಮಧೇಯ ದೂರುಗಳ ಮೂಲಕ ಪ್ರಾಮಾಣಿಕ ಅಧಿಕಾರಿಗಳ ವಿರುದ್ಧ ಅಪಪ್ರಚಾರ ನಡೆಸುವ ಪ್ರವೃತ್ತಿಗೆ ಕಡಿವಾಣ ಹಾಕಬೇಕು. ಆರೋಪಗಳು ಸಾಬೀತಾಗದಿದ್ದರೆ ಸುಳ್ಳು ದೂರು ನೀಡಿದವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಅಲ್ಲದೆ, ತನಿಖೆ ಪೂರ್ಣಗೊಳ್ಳುವವರೆಗೆ ಡಾ. ಅರುಣ್ ಕುಮಾರ್ ಅವರ ವಿರುದ್ಧ ಯಾವುದೇ ಏಕಪಕ್ಷೀಯ ಆಡಳಿತಾತ್ಮಕ ಕ್ರಮ ಕೈಗೊಳ್ಳಬಾರದು. ತನಿಖೆ ನಡೆಸದೆ ಯಾವುದೇ ಕ್ರಮ ಕೈಗೊಂಡರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸೈನಿಕ ಶ್ರೀಕಾಂತ ನಾಯ್ಕ, “ಡಾ. ಅರುಣ್ ಕುಮಾರ್ ಅವರ ಸೇವೆಯಿಂದ ವಿವಿಧ ಭಾಗಗಳಿಂದಲೂ ರೋಗಿಗಳು ಚಿಕಿತ್ಸೆಗಾಗಿ ಭಟ್ಕಳ ತಾಲೂಕು ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ. ಅವರಿಂದ ಚಿಕಿತ್ಸೆ ಪಡೆದು ಗುಣಮುಖರಾದ ಅನೇಕರು ಅವರನ್ನು ದೇವರ ಸಮಾನವಾಗಿ ಕಾಣುತ್ತಿದ್ದಾರೆ. ಇಂತಹ ಸೇವಾ ಮನೋಭಾವದ ವೈದ್ಯರ ವಿರುದ್ಧ ಅನಾಮಧೇಯವಾಗಿ ದೂರು ನೀಡಿರುವುದು ಸಮಂಜಸವಲ್ಲ,ರೋಗಿಗಳ ಸೇವೆಯನ್ನೇ ಧ್ಯೇಯವಾಗಿಸಿಕೊಂಡು ಕಾರ್ಯನಿರ್ವಹಿಸುತ್ತಿರುವ ಇಂತಹ ನಿಷ್ಠಾವಂತ ವೈದ್ಯರ ವಿರುದ್ಧ ಸಲ್ಲಿಸಿರುವ ಅನಾಮಧೇಯ ದೂರು ಖಂಡನೀಯ,” ಎಂದು ಅವರು ಅಭಿಪ್ರಾಯಪಟ್ಟರು.
ಎನ್.ಡಿ. ಖಾರ್ವಿ ಮಾತನಾಡಿ, “ಸುಮಾರು ಒಂದು ತಿಂಗಳ ಹಿಂದೆ ನನ್ನ ಪತ್ನಿಗೆ ಇದೇ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಇಂದಿನ ದಿನಗಳಲ್ಲಿ ಸಂಜೆ 5 ಗಂಟೆಯಾದರೆ ಕರ್ತವ್ಯ ಮುಗಿಸಿ ಮನೆಗೆ ತೆರಳುವ ಸರ್ಕಾರಿ ವೈದ್ಯರ ನಡುವೆ, ಡಾ. ಅರುಣ್ ಕುಮಾರ್ ಅವರು ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಆಸ್ಪತ್ರೆಯಲ್ಲೇ ಉಳಿದು ರೋಗಿಗಳ ಸೇವೆ ಸಲ್ಲಿಸುತ್ತಿದ್ದಾರೆ. ಇಂತಹ ವೈದ್ಯರ ವಿರುದ್ಧ ದೂರು ನೀಡಿರುವುದು ಖಂಡನೀಯ. ಅಗತ್ಯವಿದ್ದರೆ ಸುಳ್ಳು ದೂರು ನೀಡಿದವರ ವಿರುದ್ಧ ನಾನೇ ದೂರು ಸಲ್ಲಿಸುತ್ತೇನೆ,” ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಣ್ಣಪ್ಪ ನಾಯ್ಕ, ವಿಶ್ವನಾಥ ಮಾಹಲೆ, ಪರಮೇಶ್ವರ ನಾಯ್ಕ, ಮಂಜುನಾಥ ನಾಯ್ಕ, ಗಣೇಶ ಹಳ್ಳೆರ್, ಬಾಬು ನಾಯ್ಕ, ನಾಗೇಶ್ ನಾಯ್ಕ, ಶಂಕರ್ ನಾಯ್ಕ, ಪಾಂಡುರಂಗ ನಾಯ್ಕ, ಶ್ರೀಧರ್ ನಾಯ್ಕ, ಅಪ್ಪು ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.



