ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಂಘಟನೆಯಲ್ಲಿ ಜಿಲ್ಲಾ ಉಸ್ತುವಾರಿಗಳಲ್ಲಿ ಬದಲಾವಣೆ ಮಾಡಲಾಗಿದ್ದು, ರಾಜ್ಯ ಕಾರ್ಯದರ್ಶಿ ಪವನ್ ನಾಯ್ಕ್ ಅವರನ್ನು ಕೊಪ್ಪಳ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.
ರಾಜ್ಯದಲ್ಲಿ ಯುವ ಕಾಂಗ್ರೆಸ್ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಬದಲಾವಣೆ ಮಾಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಮೊದಲು ಬೆಳಗಾವಿ ಜಿಲ್ಲಾ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದ ಪವನ್ ನಾಯ್ಕ್, ಆ ಅವಧಿಯಲ್ಲಿ ತಮ್ಮೊಂದಿಗೆ ಕೈಜೋಡಿಸಿದ ಬೆಳಗಾವಿ ಜಿಲ್ಲೆಯ ಎಲ್ಲಾ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಪಕ್ಷದ ಅಭಿನಂದನೆ ಸಲ್ಲಿಸಿದ್ದಾರೆ.
ಹೊಸ ಜವಾಬ್ದಾರಿ ಕುರಿತು ಪ್ರತಿಕ್ರಿಯಿಸಿದ ಅವರು, ಪಕ್ಷ ತಮ್ಮ ಮೇಲೆ ವಿಶ್ವಾಸವಿಟ್ಟು ಕೊಪ್ಪಳ ಜಿಲ್ಲೆಯ ಉಸ್ತುವಾರಿ ಹೊಣೆಗಾರಿಕೆಯನ್ನು ನೀಡಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದ್ದಾರೆ. ಪಕ್ಷದ ನಾಯಕತ್ವದ ಮಾರ್ಗದರ್ಶನದಲ್ಲಿ ಜಿಲ್ಲೆಯಾದ್ಯಂತ ಯುವ ಕಾಂಗ್ರೆಸ್ ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸಲು, ಯುವ ಕಾರ್ಯಕರ್ತರನ್ನು ಸಂಘಟಿಸಲು ಹಾಗೂ ಪಕ್ಷದ ತತ್ವ-ಸಿದ್ಧಾಂತಗಳನ್ನು ಜನರಿಗೆ ತಲುಪಿಸಲು ಸಂಪೂರ್ಣ ಸಮರ್ಪಣೆಯೊಂದಿಗೆ ಕಾರ್ಯನಿರ್ವಹಿಸುವುದಾಗಿ ತಿಳಿಸಿದ್ದಾರೆ.
ಇದೇ ವೇಳೆ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕತ್ವಕ್ಕೆ ಧನ್ಯವಾದ ಅರ್ಪಿಸಿರುವ ಪವನ್ ನಾಯ್ಕ್, ಕೊಪ್ಪಳ ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಯುವ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸಿ ಸಂಘಟನೆ ಬಲವರ್ಧನೆಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ.

