ಸುದ್ದಿಬಿಂದು ಬ್ಯೂರೋ ವರದಿ
ಶಿರಸಿ : ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಸಚಿವ ಸ್ಥಾನ ನೀಡದಿರುವ ಮೂಲಕ ಕಾಂಗ್ರೆಸ್ ಸರ್ಕಾರ ಜಿಲ್ಲೆಯ ಜನತೆಗೆ ಅನ್ಯಾಯ ಮಾಡಿದ್ದು, ಮಂಕಾಳು ವೈದ್ಯರಿಗೆ ಸಚಿವ ಸ್ಥಾನ ತಪ್ಪಿಸಿರುವುದು ಹಿಂದುಳಿದ ವರ್ಗ ಹಾಗೂ ಸಣ್ಣ ಸಮುದಾಯಗಳಿಗೆ ಮಾಡಿದ ಅವಮಾನ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಚಿವ ಸಂಪುಟದ ಪಟ್ಟಿಯಲ್ಲಿ ಮಂಕಾಳು ವೈದ್ಯರ ಹೆಸರನ್ನು ಅಧಿಕೃತವಾಗಿ ಪ್ರಕಟಿಸಿ, ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನದಿಂದ ಕೈಬಿಡಲಾಗಿದೆ ಎಂದು ದೂರಿದರು. ಬಳಿಕ “ಎಸ್.ಎಸ್. ಮಲ್ಲಿಕಾರ್ಜುನ್ ಅವರ ಹೆಸರಿನ ಬದಲು ಮುದ್ರಣ ದೋಷದಿಂದ ಮಂಕಾಳು ವೈದ್ಯರ ಹೆಸರು ಪ್ರಕಟವಾಗಿದೆ” ಎಂಬ ಕಾಂಗ್ರೆಸ್ ಹೈಕಮಾಂಡ್‌ನ ಸಮಜಾಯಿಷಿ ಹಾಸ್ಯಾಸ್ಪದವಾಗಿದೆ ಎಂದು ಟೀಕಿಸಿದರು.

ಕಲಬುರಗಿ ಜಿಲ್ಲೆಗೆ ಮೂರು ಸಚಿವ ಸ್ಥಾನಗಳನ್ನು ನೀಡಿರುವ ಸರ್ಕಾರ, ಭೌಗೋಳಿಕವಾಗಿ ವಿಶಾಲವಾದ ಉತ್ತರ ಕನ್ನಡ ಜಿಲ್ಲೆಗೆ ಒಂದೇ ಒಂದು ಸಚಿವ ಸ್ಥಾನವನ್ನೂ ನೀಡಿಲ್ಲ. ಇದು ಜಿಲ್ಲೆಯ ಜನರ ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದು, ಹಿಂದುಳಿದ ವರ್ಗದವರಿಗೆ ತೀವ್ರ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ. ಮಳೆಗಾಲದ ಸಂದರ್ಭದಲ್ಲಿ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳನ್ನು ಒಳಗೊಂಡ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳು ಸಂಭವಿಸಿದರೆ ಸಂತ್ರಸ್ತರಿಗೆ ತ್ವರಿತ ಪರಿಹಾರ ಕಲ್ಪಿಸಲು ಸಚಿವರೇ ಇಲ್ಲದಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಕೈಗಾ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ, ಬೇಡ್ತಿ–ಅಘನಾಶಿನಿ ನದಿ ಜೋಡಣೆ , ಕೇಣಿ ಬಂದರು, ಸೇರಿದಂತೆ ಹಲವು ಪ್ರಮುಖ ಯೋಜನೆಗಳು ಜಿಲ್ಲೆಯ ಮುಂದಿದ್ದು, ಇಂತಹ ಸಂದರ್ಭದಲ್ಲಿ ಜಿಲ್ಲೆಗೆ ಸಚಿವರನ್ನೂ ನೇಮಿಸದಿರುವುದು ಸರ್ಕಾರದ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಆರೋಪಿಸಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳ ಆಧಾರದ ಮೇಲೆ ಜಿಲ್ಲೆಯ ನಾಲ್ವರು ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದರೂ, ಜಿಲ್ಲೆಗೆ ಸಚಿವ ಸ್ಥಾನ ನೀಡದಿರುವ ಮೂಲಕ ಕಾಂಗ್ರೆಸ್ ಸಣ್ಣ ಸಮುದಾಯ ಹಾಗೂ ಹಿಂದುಳಿದ ಮೀನುಗಾರ ವರ್ಗದವರನ್ನು ಕಡೆಗಣಿಸಿದೆ ಕಾಂಗ್ರೇಸ್ ವಿರುದ್ಧ ಅನಂತಮೂರ್ತಿ ಹೆಗಡೆ ಟೀಕಿಸಿದ್ದಾರೆ.

ಈ ಅನ್ಯಾಯವನ್ನು ಉತ್ತರ ಕನ್ನಡ ಜಿಲ್ಲೆಯ ಜನರು ಎಂದಿಗೂ ಕ್ಷಮಿಸುವುದಿಲ್ಲ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ/ ಕರಾವಳಿ ಜಿಲ್ಲೆಗೆ ಕೈ ಕೈತಪ್ಪಿದ ಸಚಿವ ಸ್ಥಾನ : ಮೀನುಗಾರ ಸಮಾಜಕ್ಕೆ ಅನ್ಯಾಯ