ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕರಾವಳಿ ಭಾಗಕ್ಕೆ ಸಮರ್ಪಕ ಪ್ರಾತಿನಿಧ್ಯ ದೊರಕಿಲ್ಲ ಎಂಬ ಅಸಮಾಧಾನ ಕಾಂಗ್ರೆಸ್ ಕಾರ್ಯಕರ್ತರು, ಕೆಲ ರಾಜಕೀಯ ಮುಖಂಡರು ಹಾಗೂ ವಿವಿಧ ಸಂಘಟನೆಗಳ ವಲಯದಲ್ಲಿ ವ್ಯಕ್ತವಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡ ಕರಾವಳಿ ಜಿಲ್ಲೆಗೆ ಸಚಿವ ಸಂಪುಟದಲ್ಲಿ ನಿರೀಕ್ಷಿತ ಸ್ಥಾನಮಾನ ಸಿಗದಂತಾಗಿದೆ.

ಕರಾವಳಿ ಭಾಗಕ್ಕೆ ಸಚಿವ ಸ್ಥಾನ ನೀಡದಿರುವುದರಿಂದ ಈ ಭಾಗದ ಜನರ ಆಶಾಭಾವನೆಗೆ ಧಕ್ಕೆಯಾಗಿರುವಂತಾಗಿದೆ.ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಲ್ವರು ಶಾಸಕರು ಆಯ್ಕೆಯಾಗಿದ್ದರೂ, ಅವರಲ್ಲಿ ಯಾರಿಗೂ ಸಚಿವ ಸ್ಥಾನ ದೊರೆಯದಿರುವುದು ಚರ್ಚೆಗೆ ಕಾರಣವಾಗಿದೆ. ವಿಶೇಷವಾಗಿ ಭಟ್ಕಳ ಶಾಸಕ ಮಂಕಾಳ್ ವೈದ್ಯ ಅವರ ಹೆಸರನ್ನ ಕಾಂಗ್ರೆಸ್ ಹೈಕಮಾಂಡ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಅಂತಿಗೊಂಡಿತ್ತು. ಆದರೆ ಕೊನೆಕ್ಷಣದಲ್ಲಿ ಅವರ ಹೆಸರನ್ನ ಕೈ ಬಿಟ್ಟಿರುವುದು ಕಾಂಗ್ರೆಸ್ ಕರಾವಳಿ ಜಿಲ್ಲೆಯನ್ನ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದೆ ಎನ್ನುವುದು ಕಂಡು ಬರುತ್ತಿದೆ.

ಮಂಕಾಳ್ ವೈದ್ಯ ಅವರು ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮೀನುಗಾರಿಕೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅವರ ಅವಧಿಯಲ್ಲಿ ಮೀನುಗಾರಿಕಾ ಸಮುದಾಯ ಸೇರಿದಂತೆ ಬಹುತೇಕ ಸಮಾಜಕ್ಕೆ ಅವರಿಗೆ ಸಾಕಷ್ಟು ಅನುಕಲವಾಗಿದೆ. ಇದೀಗ ಕರಾವಳಿ ಭಾಗದ ಪ್ರಾತಿನಿಧ್ಯ ಹಾಗೂ ಮೀನುಗಾರ ಸಮುದಾಯಕ್ಕೆ ನ್ಯಾಯಯುತ ಅವಕಾಶ ಕಲ್ಪಿಸಬೇಕು ಎಂಬ ಆಗ್ರಹಗಳು ಸಾಮಾಜಿಕ ಜಾಲತಾಣಗಳಲ್ಲಿಯೂ ಕೇಳಿಬರುತ್ತಿವೆ. ಈ ಭಾಗದ ಅಭಿವೃದ್ಧಿ ಹಾಗೂ ಸಮುದಾಯದ ಧ್ವನಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ದೊರಕಬೇಕು ಎಂದು ಹಲವು ಬೆಂಬಲಿಗರು ಒತ್ತಾಯಿಸಿದ್ದಾರೆ.

ಈ ಬೆಳವಣಿಗೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸಂಘಟನೆ ಹಾಗೂ ಕರಾವಳಿ ಭಾಗದ ರಾಜಕೀಯದಲ್ಲಿ ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ/ಮಂಕಾಳ್ ವೈದ್ಯರಿಗೆ ಸಚಿವ ಸ್ಥಾನ ನೀಡುವಂತೆ ಟ್ವಿಟರ್‌ನಲ್ಲಿ ಮೀನುಗಾರ ಸಮುದಾಯದ ಅಭಿಯಾನ