ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ದೇಶಭಕ್ತಿ, ರಾಷ್ಟ್ರಾಭಿಮಾನ ಮತ್ತು ರಾಷ್ಟ್ರೀಯ ಏಕತೆಯ ಸಂದೇಶವನ್ನು ಮನೆಮನೆಗೂ ತಲುಪಿಸುವ ಉದ್ದೇಶದಿಂದ ಭಾರತೀಯ ಜನತಾ ಪಕ್ಷ ಹಮ್ಮಿಕೊಂಡಿರುವ ‘ಹರ್ ಘರ್ ತಿರಂಗಾ’ ಅಭಿಯಾನದ ಕರ್ನಾಟಕ ರಾಜ್ಯ ಸಂಚಾಲಕಿಯಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಕಾರವಾರ–ಅಂಕೋಲಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಅವರನ್ನು ನೇಮಕ ಮಾಡಲಾಗಿದೆ.

ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ರೂಪಾಲಿ ನಾಯ್ಕ ಅವರಿಗೆ ಈ ಮಹತ್ವದ ಜವಾಬ್ದಾರಿಯನ್ನು ವಹಿಸಲಾಗಿದ್ದು, ಅಭಿಯಾನದ ರಾಜ್ಯ ಸಮಿತಿಯಲ್ಲಿ ಶಾಸಕರಾದ ಹರೀಶ್ ಪೂಂಜಾ, ಬಸವರಾಜ್ ಹಾಗೂ ಲಿಂಗರಾಜ್ ಪಾಟೀಲ್ ಅವರು ಸಹ-ಸಂಚಾಲಕರಾಗಿ ಕಾರ್ಯನಿರ್ವಹಿಸಲಿದ್ದಾರೆ.
ನೇಮಕಗೊಂಡ ಬಳಿಕ ರೂಪಾಲಿ ನಾಯ್ಕ ಅವರು ರಾಜ್ಯಾದ್ಯಂತ ‘ಹರ್ ಘರ್ ತಿರಂಗಾ’ ಅಭಿಯಾನವನ್ನು ಯಶಸ್ವಿಗೊಳಿಸಲು ಚುರುಕಿನ ಕಾರ್ಯಚಟುವಟಿಕೆಗಳನ್ನು ಆರಂಭಿಸಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ಸಭೆಗಳನ್ನು ನಡೆಸಿ, ಅಭಿಯಾನದ ರೂಪುರೇಷೆಗಳನ್ನು ಕಾರ್ಯಕರ್ತರಿಗೆ ತಿಳಿಸುವ ಕೆಲಸಕ್ಕೆ ಚಾಲನೆ ನೀಡಿದ್ದಾರೆ.

ಈ ಅಭಿಯಾನದಡಿ ಮನೆಮನೆಗೂ ರಾಷ್ಟ್ರಧ್ವಜ ತಲುಪಿಸುವುದು, ತ್ರಿವರ್ಣ ಧ್ವಜದ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರು ಹಾಗೂ ಮಹಿಳೆಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಅಭಿಯಾನದಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸುವುದು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ದೇಶಸೇವೆಯನ್ನು ಸ್ಮರಿಸುವಂತಹ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.

‘ಹರ್ ಘರ್ ತಿರಂಗಾ’ ಅಭಿಯಾನವು ಕೇವಲ ಧ್ವಜಾರೋಹಣಕ್ಕೆ ಸೀಮಿತವಾಗದೆ, ದೇಶದ ಸ್ವಾತಂತ್ರ್ಯ ಹೋರಾಟದ ಪರಂಪರೆಯನ್ನು ಜನರಿಗೆ ಪರಿಚಯಿಸುವುದು, ರಾಷ್ಟ್ರದ ಏಕತೆ, ಸಮಗ್ರತೆ ಮತ್ತು ದೇಶಭಕ್ತಿಯ ಮೌಲ್ಯಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶವನ್ನು ಹೊಂದಿದೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.

ಹರ್ ಘರ್ ತಿರಂಗಾ ಯಶಸ್ವಿಗೆ ರಾಜ್ಯಾದ್ಯಂತ ಶ್ರಮ: ರೂಪಾಲಿ ಎಸ್. ನಾಯ್ಕ”
“ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ ಆರಂಭವಾದ ‘ಹರ್ ಘರ್ ತಿರಂಗಾ’ ಅಭಿಯಾನ ಇಂದು ದೇಶವ್ಯಾಪಿ ಜನಾಂದೋಲನವಾಗಿ ರೂಪುಗೊಂಡಿದೆ. ವಿಕಸಿತ ಭಾರತ ನಿರ್ಮಾಣ ಹಾಗೂ ‘ಏಕ್ ಭಾರತ್, ಶ್ರೇಷ್ಠ ಭಾರತ್’ ಪರಿಕಲ್ಪನೆ ಸಾಕಾರಗೊಳಿಸುವಲ್ಲಿ ಈ ಅಭಿಯಾನ ಮಹತ್ವದ ಪಾತ್ರ ವಹಿಸಲಿದೆ. ರಾಜ್ಯದಾದ್ಯಂತ ಈ ಅಭಿಯಾನವನ್ನು ಯಶಸ್ವಿಗೊಳಿಸಲು ಸಮರ್ಪಕ ಯೋಜನೆಯೊಂದಿಗೆ ಕಾರ್ಯನಿರ್ವಹಿಸುತ್ತಿದ್ದೇವೆ.”